ಬೆಂಗಳೂರು: ರಾಜ್ಯದ ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗಳನ್ನು ತಡೆಹಿಡಿಯುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಮತ್ತೂಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಲೋಕಸಭಾ ಉಪ ಚುನಾವಣೆಗಳನ್ನು ರದ್ದುಪಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಂಗಳವಾರವಷ್ಟೇ ತುಮಕೂರು ಮೂಲದ ವಕೀಲ ಎಲ್.ಎಸ್. ರಮೇಶ್ ನಾಯಕ್ ಪಿಐಎಲ್ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಇದೀಗ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮತ್ತೂಂದು ಪಿಐಎಲ್ ಸಲ್ಲಿಸಿದ್ದಾರೆ.
ಬುಧುವಾರ ಮುಖ್ಯನ್ಯಾಯಮೂರ್ತಿಗಳ ಪೀಠದ ಮುಂದೆ ಹಾಜರಾದ ಅರ್ಜಿದಾರರ ಪರ ವಕೀಲರ ಡಿ.ಆರ್. ರವಿಶಂಕರ್, ” ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ತೆಗೆದುಕೊಳ್ಳುವಂತೆ’ ಮನವಿ ಮಾಡಿದರು. ಇದನ್ನು ನಿರಾಕರಿಸಿದ ಮುಖ್ಯನ್ಯಾಯಮೂರ್ತಿಗಳು, ನಿಯಮಾನುಸಾರ, ಸರದಿಯಲ್ಲಿ ಅರ್ಜಿ ವಿಚಾರಣೆಗೆ ಬರಲಿ, ಅದಕ್ಕಾಗಿ ರಿಜಿಸ್ಟ್ರಾರ್ ಆವರಿಗೆ ಮನವಿ ಸಲ್ಲಿಸಿ ಎಂದು ವಕೀಲರಿಗೆ ಸೂಚಿಸಿದರು.
ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿರುವುದು “ಪ್ರಜಾಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 151 ಎ ಇದರ ಸ್ಪಷ್ಟ ಉಲ್ಲಂಘನೆಯಾಗಿದೆ. ಅಲ್ಲದೇ ಈ ಅಲ್ಪಾವಧಿಗೆ ಚುನಾವಣೆ ನಡೆಸುವುದರಿಂದ ರಾಜ್ಯದ ಬೊಕ್ಕಸಕ್ಕೆ ಕನಿಷ್ಟ 24 ಕೋಟಿ ರೂ. ಹೊರೆ ಬೀಳಲಿದೆ. ಆದ್ದರಿಂದ ಉಪ ಚುನಾವಣೆ ತಡೆ ಹಿಡಿಯುವಂತೆ ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.