Advertisement

ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಿ ಎಂದವರು ಬಿಎಸ್‌ವೈ

09:28 AM Aug 31, 2017 | Team Udayavani |

ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯಿಂದ 257 ಎಕರೆ 20.5 ಗುಂಟೆ ಜಮೀನು ಕೈ ಬಿಡಲು ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದರು ಎಂದು ಎಸಿಬಿ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

Advertisement

ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ ನ್ಯಾ.ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟು ಎಷ್ಟು ಎಕರೆ ಜಾಗವನ್ನು ಭೂಸ್ವಾಧೀನದಿಂದ ಕೈ ಬಿಡಲಾಗಿತ್ತು ಎಂದು ಎಸಿಬಿ ಪರ ವಕೀಲರಿಗೆ ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಉತ್ತರ ನೀಡಿದ ಎಸಿಬಿ ಪರ ವಕೀಲ, ಮಾಜಿ ಅಡ್ವೋಕೆಟ್‌ ಜನರಲ್‌ ಪ್ರೊ. ರವಿವರ್ಮಕುಮಾರ್‌, ಬಡಾವಣೆ ನಿರ್ಮಾಣಕ್ಕೆ 3546 ಎಕರೆ ಜಮೀನು ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಇದರಲ್ಲಿ 446 ಎಕರೆ ಜಾಗವನ್ನು ವಿಶೇಷ ಭೂ ಸ್ವಾಧೀನ ಅಧಿಕಾರಿಗಳು ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟಿದ್ದಾರೆ. ಉಳಿದ 257 ಎಕರೆ 20.5 ಗುಂಟೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡುವಂತೆ ಅಂದಿನ ಸಿಎಂ ಯಡಿಯೂರಪ್ಪ ಸೂಚಿಸಿದ್ದರು ಎಂದು ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು. ಹೀಗಾಗಿ ಪ್ರಕರಣ ಸಂಬಂಧ ಮುಂದಿನ ವಿಚಾರಣೆಯವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಲಾಗಿರುವ ಮಧ್ಯಂತರ ಆದೇಶವೂ ವಿಸ್ತರಣೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next