Advertisement

ಪಶ್ಚಿಮಬಂಗಾಳದ ಬಿಜೆಪಿ ಭದ್ರಕೋಟೆಯಲ್ಲಿ ಟಿಎಂಸಿ ಗೆಲುವು, 2 ಲೋಕಸಭೆಯಲ್ಲಿ ಬಿಜೆಪಿ ಮುನ್ನಡೆ

02:00 PM Nov 02, 2021 | Team Udayavani |

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಮಂಗಳವಾರ(ನವೆಂಬರ್ 02) ಬೆಳಗ್ಗೆ ಆರಂಭಗೊಂಡಿದೆ. ಕರ್ನಾಟಕದ ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿ ಜಯಭೇರಿ ಗಳಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರವಾದ ಹಾನಗಲ್ ನಲ್ಲಿ ವಿಪಕ್ಷ ಕಾಂಗ್ರೆಸ್ ಗೆಲುವಿನ ನಗು ಬೀರಿದೆ.

Advertisement

ಇದನ್ನೂ ಓದಿ:JDS ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿ: ಜಮೀರ್

ಪಶ್ಚಿಮಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬಿಜೆಪಿ ಭದ್ರಕೋಟೆಗೂ ಲಗ್ಗೆ ಇಟ್ಟಿದ್ದು, ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಟಿಎಂಸಿ ಗೆಲುವಿನ ನಾಗಾಲೋಟ ಮುಂದುವರಿಸಿದೆ. ಹಿಮಾಚಲ್ ಪ್ರದೇಶದಲ್ಲಿ ಕಾಂಗ್ರೆಸ್ ಎಲ್ಲಾ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಟಾಲಾ ರಾಜೇಂದರ್ ಪ್ರತಿಸ್ಪರ್ಧಿ ಟಿಆರ್ ಎಸ್ ನ ಗೆಲ್ಲು ಶ್ರೀನಿವಾಸ್ ಯಾದವ್ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ. ರಾಜಸ್ಥಾನದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಜಯಭೇರಿ ಗಳಿಸಿರುವುದಾಗಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದು, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

Advertisement

ದಾದ್ರಾ ಮತ್ತು ನಗರ್ ಹವೇಲಿ ಹಾಊ ಹಿಮಾಚಲ್ ಪ್ರದೇಶದ ಮಾಂಡಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.

ಮಿಜೋರಾಂನಲ್ಲಿ ಆಡಳಿತಾರೂಢ ಮಿಝೋ ನ್ಯಾಶನಲ್ ಫ್ರಂಟ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಮೇಘಾಲಯದಲ್ಲಿ ಆಡಳಿತಾರೂಢ ಎನ್ ಪಿಪಿ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ದೇಶದ 13 ರಾಜ್ಯಗಳಲ್ಲಿನ 29 ವಿಧಾನಸಭಾ ಕ್ಷೇತ್ರಗಳಲ್ಲಿನ ಫಲಿತಾಂಶದ ಪೂರ್ಣ ವಿವರ ಇಂದು ಸಂಜೆಯೊಳಗೆ ಲಭ್ಯವಾಗಲಿದ್ದು, ಮತಎಣಿಕೆ ಕಾರ್ಯ ಮುಂದುವರಿಯುತ್ತಿರುವುದಾಗಿ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next