Advertisement

ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್‍ ಪರಿಹಾರವಾಗಿ 5000 ರೂಪಾಯಿ ಘೋಷಣೆ

06:50 PM Jun 14, 2021 | Team Udayavani |

ಬೆಂಗಳೂರು : ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತವಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್‍ ಸಂಕಷ್ಟದ ಪರಿಹಾರವಾಗಿ 5000 ರೂಪಾಯಿ ಹಣ ನೀಡಲು ಪ್ರವಾಸೋದ್ಯಮ ಸಚಿವರು  ಸಿ.ಪಿ.ಯೋಗೇಶ್ವರ ಪ್ರಕಟಿಸಿದ್ದಾರೆ.

Advertisement

ಪ್ರವಾಸೋದ್ಯಮ ಇಲಾಖೆಯಲ್ಲಿ 384 ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿದ್ದು, ಅವರೆಲ್ಲರಿಗೂ ಕೋವಿಡ್‍ ಸಂಕಷ್ಟದ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದು, ಪ್ರತಿಯೊಬ್ಬರಿಗೂ ತಲಾ 5000 ರೂಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ಹೋಟೆಲ್‍ ಕಾರ್ಮಿಕರಿಗೆ ಕೋವಿಡ್‍ ಪರಿಹಾರ ಪ್ಯಾಕೇಜ್‍ ಯೋಜನೆಯಡಿ 3000 ರೂ. ಗಳನ್ನು ನೀಡಲು ಸಹ ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿ ಸರ್ಕಾರಿ ಆದೇಶ ಹೊರಡಲಿದೆ ಎಂದು ಸಹ ಸಚಿವರು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ : ಮದುವೆ ಮಾಡುವುದು ತಡವಾದ್ದರಿಂದ ಮೊಬೈಲ್ ಟವರ್ ಕಂಬ ಏರಿ ಕುಳಿತ ಯುವಕ

ಬೆಂಗಳೂರಿನ ಖನಿಜ ಭವನದಲ್ಲಿರುವ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ಕಛೇರಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೋವಿಡ್‍ ಲಾಕ್‍ ಡೌನ್‍ ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದರು.

Advertisement

ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳ ಜೊತೆ ಸಹ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸೊಸೈಟಿಯ ಪದಾಧಿಕಾರಿಗಳು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಂಕಷ್ಟಗಳನ್ನು ವಿವರಿಸಿ ಪರಿಹಾರ ನೀಡುವಂತೆ ಮನವಿ ಮಾಡಿದರು.

ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕು. ಮದ್ಯ ಪರವಾನಗಿ ಶುಲ್ಕವನ್ನು ಶೇ.50 ರಷ್ಟು ಮನ್ನಾ ಮಾಡಿ ಉಳಿದ ಶೇ.50 ರಷ್ಟು ಶುಲ್ಕವನ್ನು ಕಟ್ಟಲು ಈ ವರ್ಷದ ಡಿಸೆಂಬರ್‍ ಅಂತ್ಯದವರೆಗೆ ಸಮಯ ವಿಸ್ತರಿಸಬೇಕು ಹಾಗೂ ವಿದ್ಯುತ್‍ಚ್ಛಕ್ತಿ ದರದಲ್ಲಿ ರಿಯಾಯಿತಿ ನೀಡಬೇಕು.

ಪ್ರವಾಸೋದ್ಯಮ ವಾಹನಗಳ ತೆರಿಗೆಯನ್ನು ಆರು ತಿಂಗಳ ಅವಧಿಗೆ ಮನ್ನಾ ಮಾಡಬೇಕು. ಪ್ರವಾಸಿ ವಾಹನಗಳನ್ನು ಚಲಾಯಿಸುತ್ತಿರುವ ಚಾಲಕರಿಗೆ ರೂ.3000/-ಗಳ ಕೋವಿಡ್‍ ಪರಿಹಾರ ಹಣವಾಗಿ ನೀಡಬೇಕು.

ರಾಜ್ಯದಲ್ಲಿ ಓಲಾ, ಉಬರ್‍ ಸೇರಿದಂತೆ ಒಟ್ಟು 3 ಲಕ್ಷ 30 ಸಾವಿರ ಪ್ರವಾಸಿ ವಾಹನ ಚಾಲಕರಿದ್ದು, ಅವರೆಲ್ಲರಿಗೂ ಕೋವಿಡ್‍ ಪ್ಯಾಕೇಜ್‍ ಹಣ ನೀಡಬೇಕೆಂದು ಒತ್ತಾಯಿಸಿದರು. ಇದೇ ತಿಂಗಳ 21 ರಿಂದ ಹೋಟೆಲ್‍ ಹಾಗೂ ರೆಸ್ಟೋರೆಂಟ್‍ಗಳನ್ನು ತೆಗೆಯಲು ಅವಕಾಶ ನೀಡಬೇಕು. ಟೂರ್‍ ಆಪರೇಟರ್ಸ್‍ ನೋಂದಣಿ ದಿನಾಂಕವನ್ನು ವಿಸ್ತರಣೆ ಮಾಡಬೇಕೆಂದು ಸಹ ಮನವಿ ಮಾಡಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೆ.ಎಸ್‍.ಎಫ್‍.ಸಿ.ಯಿಂದ ತೆಗೆದುಕೊಂಡಿರುವ ಸಾಲದ ಮೇಲಿನ ಬಡ್ಡಿಗೆ ರಿಯಾಯಿತಿ ಕೊಡಿಸಬೇಕು ಎಂದು ಸಹ ಕೋರಿದರು.

ರಾಜ್ಯದಲ್ಲಿರುವ ಎಲ್ಲಾ ಹೋಟೆಲ್‍ಗಳಿಗೂ, ಸ್ಟಾರ್‍ ಹೋಟೆಲ್‍ಗಳಿಗೆ ನೀಡಿರುವ ಕೈಗಾರಿಕಾ ಸ್ಥಾನಮಾನ ವಿಸ್ತರಿಸಬೇಕೆಂದು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯ ಅಧ್ಯಕ್ಷ ಕೆ.ಶ್ಯಾಮರಾಜ್‍, ಉಪಾಧ್ಯಕ್ಷ ವಿನಿತ್‍ ವರ್ಮಾ, ಕಾರ್ಯದರ್ಶಿ ಮಹಾಲಿಂಗಯ್ಯ ಇವರು ಸಚಿವರಿಗೆ ಮನವಿ ಪತ್ರ ನೀಡಿ, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.

ಇನ್ನು, ಜೂನ್‍ ತಿಂಗಳ ಅಂತ್ಯಕ್ಕೆ ವಿಜಯಪುರ, ಹಂಪಿ, ಬಾದಾಮಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ತ್ರೀ ಸ್ಟಾರ್‍ ಹೋಟೆಲ್‍ಗಳಿಗೆ ಶಿಲಾನ್ಯಾಸ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿಗಳನ್ನು ಅಳವಡಿಸಿ, ಸರ್ಕಾರಿ ಆದೇಶ ಹೊರಡಿಸಲು ಹಾಗೂ ಸ್ಟಾರ್‍ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿರುವ ಬಗ್ಗೆ ಸಹ ಮಾರ್ಗಸೂಚಿಗಳನ್ನು  ಹೊರಡಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಹೆಲಿಟೂರಿಸಂ, ಸಿ-ಪ್ಲೈನ್‍ ಹಾಗೂ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ವಾಟರ್‍ ಸ್ಪೋರ್ಟ್ಸ್ ಆರಂಭಿಸುವುದು, ನಂದಿಬೆಟ್ಟ ಹಾಗು ಇತರ ಕಡೆ ರೋಪ್‍-ವೇಗಳನ್ನು ನಿರ್ಮಾಣ ಮಾಡುವ ಯೋಜನೆಗಳಿಗೆ ವೇಗ ನೀಡುವಂತೆ ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದರು. ಕರಾವಳಿ ಹಾಗು ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಪ್ರವಾಸೋದ್ಯಮ ಯೋಜನೆಗಳಿಗೆ ಆದ್ಯತೆ ಮೇಲೆ ಕ್ರಮ ಕೈಗೊಂಡು ನಿಗಧಿತ ಸಮಯದಲ್ಲಿ ಯೋಜನೆ ಪೂರ್ಣಗೊಳಿಸುವಂತೆ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ ಕುಮಾರ್‍ ಪಾಂಡೆ, ನಿರ್ದೇಶಕಿ ಸಿಂಧು ಬಿ.ರೂಪೇಶ್‍, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ ಶರ್ಮಾ ಹಾಗೂ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್‍ ಪುಷ್ಕರ್‍ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಗತಿ ಪರಿಶೀಲನೆ ಸಭೆಯ ನಂತರ ಸಚಿವ ಯೋಗೇಶ್ವರರವರು ಚಿತ್ರಕಲಾ ಪರಿಷತ್‍ ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಸೊಸೈಟಿಯಿಂದ ಟೂರ್‍ ಆಪರೇಟರ್ಸ್‍ ಹಾಗೂ ಚಾಲಕರಿಗೆ ಆಯೋಜಿಸಿದ್ದ ಕೋವಿಡ್‍ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ, ಸಚಿವರು ಚಾಲನೆ ನೀಡಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಪ್ರಥಮ ಆದ್ಯತೆಯಾಗಿ ಕೋವಿಡ್‍ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಚಿವರು ತಿಳಿಸಿದರು.

ಇದನ್ನೂ ಓದಿ : ಕೋವಿಡ್ ಇಳಿಕೆ: ಜೂ.16ರಿಂದ ತಾಜ್ ಮಹಲ್, ಅಜಂತಾ ಸ್ಮಾರಕ ಭೇಟಿಗೆ ಪ್ರವಾಸಿಗರಿಗೆ ಅವಕಾಶ

Advertisement

Udayavani is now on Telegram. Click here to join our channel and stay updated with the latest news.

Next