Advertisement

ಕಂಬಳ ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ

06:00 AM Nov 10, 2017 | |

ಬೆಂಗಳೂರು: ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ನೀಡಲು ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ  ತೀರ್ಮಾನ ಕೈಗೊಳ್ಳಲಾಗಿದೆ.

Advertisement

ಕಂಬಳ ಆಚರಣೆಯಿಂದ ಪ್ರಾಣಿಗಳಿಗೆ ಹಿಂಸೆಯಾಗುತ್ತದೆ ಎಂದು ಪ್ರಾಣಿ ದಯಾ ಸಂಘದವರು ಕೋರ್ಟ್‌ ಮೆಟ್ಟಿಲೇರಿದ್ದರಿಂದ ಸ್ಥಗಿತಗೊಂಡಿದ್ದ ಕಂಬಳ ಕ್ರೀಡೆಗೆ ಕಾನೂನು ಮಾನ್ಯತೆ ನೀಡಲು ರಾಜ್ಯ ಸರಕಾರ  ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ತಿದ್ದುಪಡಿ ತರಲು ಅಧ್ಯಾದೇಶ ಜಾರಿಗೊಳಿಸಿತ್ತು. ರಾಜ್ಯ ಸರಕಾರದ ಅಧ್ಯಾದೇಶಕ್ಕೆ ಇತ್ತೀಚೆಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದರು. ರಾಷ್ಟ್ರಪತಿಗಳ ಅಂಕಿತ ಪಡೆದುಕೊಂಡಿರುವ ಮಸೂದೆಯನ್ನು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ರಾಜ್ಯ ಸರಕಾರದ ಅಧ್ಯಾದೇಶಕ್ಕೆ ತಡೆಯಾಜ್ಞೆ ನೀಡುವಂತೆ ಪ್ರಾಣಿ ದಯಾ ಸಂಘ ಸುಪ್ರಿಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ ಕಂಬಳ ಆಚರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿ ಪ್ರಕರಣವನ್ನು ನವೆಂಬರ್‌ 13ಕ್ಕೆ ವಿಚಾರಣೆ ಮುಂದೂಡಿತ್ತು.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಭವನ ನಿರ್ಮಾಣ ಮಾಡಲು ಈಗಾಗಲೇ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, 8 ಕೋಟಿ ರೂಪಾಯಿ ಪರಿಷ್ಕೃತ ಮೊತ್ತಕ್ಕೆ ಗುರುವಾರ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ಈಗಾಗಲೇ ರಾಜ್ಯ ಸರಕಾರ 2 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಭವನ ನಿರ್ಮಾಣದ ವೆಚ್ಚವನ್ನು ಪರಿಷ್ಕೃರಿಸುವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಸಂಪುಟ ಪರಿಷ್ಕೃತ ಮೊತ್ತಕ್ಕೆ ಅನುಮೋದನೆ ನೀಡಿದೆ ಎಂದು ಜಯಚಂದ್ರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next