Advertisement

ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ : ಈ ವಾರ ಸಿಎಂ ದೆಹಲಿಗೆ ?

06:04 PM Jan 19, 2022 | Team Udayavani |

ಬೆಂಗಳೂರು : ಕಳೆದ ಎರಡು ತಿಂಗಳಿಂದ ಮೆತ್ತಗಾಗಿದ್ದ ಸಚಿವ ಸಂಪುಟ ವಿಸ್ತರಣೆ ಸುದ್ದಿ ಈಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕೋವಿಡ್ ಕ್ವಾರಂಟೈನ್ ಮುಗಿಸಿ ಕರ್ತವ್ಯಕ್ಕೆ ಹಾಜರಾದ ಬೆನ್ನಲ್ಲೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಿವಾಸಕ್ಕೆ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಆರಂಭಗೊಂಡಿದೆ.

Advertisement

ಸಿಎಂ ಬೊಮ್ಮಾಯಿ ಈ ವಾರವೇ ದೆಹಲಿಗೆ ತೆರಳುವ ಸಾಧ್ಯತೆ ಹೆಚ್ಚಿದ್ದು, ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜತೆ ಚರ್ಚಿಸುವ ಸಾಧ್ಯತೆ ಇದೆ. ಉತ್ತರ ಪ್ರದೇಶದ ಚುನಾವಣೆ ಪ್ರಕ್ರಿಯೆಯಲ್ಲಿ ಪಕ್ಷದ ರಾಷ್ಟ್ರೀಯ ವರಿಷ್ಠರು ತೊಡಗಿಸಿಕೊಳ್ಳುವುದಕ್ಕೆ ಮುನ್ನವೇ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವುದು ಸೂಕ್ತ ಎಂದು ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಇಲ್ಲವಾದರೆ ಏಪ್ರೀಲ್ ವರೆಗೆ ಸಂಪುಟ ವಿಸ್ತರಣೆ ಅಥವಾ ಪುನಾರ್ರಚನೆಗೆ ಅವಕಾಶ ಸಿಗುವುದಿಲ್ಲ ಎಂದು ಬೊಮ್ಮಾಯಿ ಅವರ ಬಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಪುಟ ಪುನಾರಚನೆ ಬಗ್ಗೆ ಈಗಾಗಲೇ ಹಲವು ಶಾಸಕರು ಆಗ್ರಹಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ, ಶ್ರೀಮಂತ್ ಪಾಟೀಲ್ ಸೇರಿದಂತೆ ಹಲವು ಶಾಸಕರು ಅಸಮರ್ಥರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ವಿಜಯೇಂದ್ರ ಸೇರ್ಪಡೆ ?
ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸಂಪುಟಕ್ಕೆ ಸೇರುವರೇ ? ಎಂಬ ಚರ್ಚೆಯೂ ಆರಂಭವಾಗಿದೆ. ಯಡಿಯೂರಪ್ಪ ಭೇಟಿ ಬಳಿಕ ಈ ವಾದಕ್ಕೆ ಇನ್ನಷ್ಟು ಬಲ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next