Advertisement

BJP ಯವರನ್ನು ಕೇಳಿಕೊಂಡು ಅಧಿಕಾರ ಮಾಡಲಾಗದು: ಪರಂ

08:54 PM Jun 17, 2023 | Team Udayavani |

ಬೆಂಗಳೂರು: ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ.

Advertisement

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ನಾವು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಎಷ್ಟೇ ಕಷ್ಟವಾದರೂ ಜಾರಿಗೆ ತರುತ್ತೇವೆ. ಜನಪರ ಆಡಳಿತ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ರಾಜಿಯಿಲ್ಲ. ಬಿಜೆಪಿಯರವನ್ನು ಕೇಳಿಕೊಂಡು ಆಡಳಿತ ನಡೆಸಬೇಕೇ ಎಂದು ವಾಗ್ಧಾಳಿ ನಡೆಸಿದರು.
ಬಿಜೆಪಿ ಮುಖಂಡರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ನಮಗೆ ಭಗವದ್ಗೀತೆ, ಬೈಬಲ್‌, ಖುರಾನ್‌ ಗ್ರಂಥಗಳಿದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆ ಹಕ್ಕು ನೀಡಲಾಗಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸದನದಲ್ಲಿ ಈ ಮಸೂದೆಯನ್ನು ಮಂಡಿಸಿದಾಗಲೇ ವಿರೋಧಿಸಿದ್ದೆವು. ಅದು ಸಂವಿಧಾನ ವಿರೋಧಿಯಾಗಿದೆ ಎಂದು ಆವತ್ತೇ ಹೇಳಿದ್ದೆವು. ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ನಮ್ಮ ಸರಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹೀಗಾಗಿ ನಾವು ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುತ್ತೇವೆ ಎಂದರು.

ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಮರಳು ಮಾಫಿಯಾ ಮತ್ತೆ ಹೆಡೆ ಎತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವಿಲ್ಲ. ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next