ಬೆಂಗಳೂರು: ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಜಾತಿ ಜನಗಣತಿ ವರದಿಯನ್ನು ಸರಕಾರ ಸ್ವೀಕರಿಸಿದೆಯೇ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ನಿರ್ದೇಶನ ನೀಡಿದೆ.
ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆ ನಡೆಸಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿವಿಧ ಅರ್ಜಿಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಎನ್.ವಿ.ಅಂಜಾರಿಯಾ ಮತ್ತು ಟಿ.ಜೆ.ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಮಾ. 5ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿವಾರು ಸಮೀಕ್ಷೆ ನಡೆಸುವುದಕ್ಕೆ ಅಧಿಕಾರವೇ ಇಲ್ಲ. ಆದರೂ ಸರಕಾರ ಸಮೀಕ್ಷೆ ನಡೆಸಿದೆ. ಜತೆಗೆ ಆ ವರದಿಯನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಆಗ ನ್ಯಾಯಪೀಠ, ಜಾತಿ ಆಧಾರದಲ್ಲಿಯೇ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಇಲ್ಲವೇ ಎಂದು ಪ್ರಶ್ನೆ ಮಾಡಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಜಾತಿ ಆಧಾರದಲ್ಲಿ ಶೈಕ್ಷಣಿಕ, ಸಾಮಾಜಿಕ ವರದಿ ಸಿದ್ಧಪಡಿಸಲಾಗಿದೆ. ಈಗಾಗಲೇ ಸರಕಾರ ಸ್ವೀಕರಿಸಿದೆ ಎಂದು ತಿಳಿಸಿದರು.
ವರದಿ ಸ್ವೀಕರಿಸಿರುವ ಸಂಬಂಧ ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಸರಕಾರದ ನಿರ್ದೇಶನ ಇಲ್ಲ ಎಂದು ಈ ವೇಳೆ ಸರಕಾರಿ ವಕೀಲರು ಹೇಳಿದರು. ಇದನ್ನು ಆಲಿಸಿದ ನ್ಯಾಯಪೀಠ, ವರದಿ ಸ್ವೀಕರಿಸಲಾಗಿದೆಯೇ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚನೆ ನೀಡಿ, ವಿಚಾರಣೆ ಮುಂದೂಡಿತು.