Advertisement

ಕಾವೇರಿ ಪ್ರಾಧಿಕಾರ ಗೊಂದಲ: ಸರ್ವಪಕ್ಷ ಸಭೆ

06:15 AM Jun 26, 2018 | |

ಬೆಂಗಳೂರು: ರಾಜ್ಯದ ವಿರೋಧದ ನಡುವೆಯೂ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನೀರು ನಿಯಂತ್ರಣ ಸಮಿತಿ ರಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನಿಸಲು ಸರ್ವಪಕ್ಷ ಸಭೆ ಮತ್ತು ರಾಜ್ಯದ ಸಂಸದರ ಸಭೆ ಕರೆಯಲು ತೀರ್ಮಾನಿಸಲಾಗಿದೆ.

Advertisement

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ಕಾನೂನು ತಜ್ಞರು, ಅಡ್ವೋಕೇಟ್‌ ಜನರಲ್‌ ಮತ್ತು ತಾಂತ್ರಿಕ ತಜ್ಞರ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷಗಳ ಪ್ರಮುಖರು ಮತ್ತು ಸಂಸದರ ಸಮಯಾವಕಾಶ ನೋಡಿಕೊಂಡು ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಭೆ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಆದೇಶದಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವ ಕುರಿತು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ ಗೊಂದಲ ಮತ್ತು ರಾಜ್ಯಕ್ಕೆ ಅನ್ಯಾಯವಾಗುವ ಹಲವು ವಿಚಾರಗಳ ಬಗ್ಗೆ ಜೂ. 18ರಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿಯಾಗಿ ವಿವರಿಸಿದ್ದರೂ ರಾಜ್ಯದ ಅಭಿಪ್ರಾಯ ಲೆಕ್ಕಿಸದೆ ಪ್ರಾಧಿಕಾರ ಮತ್ತು ಸಮಿತಿ ರಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಈಗಾಗಲೇ ರಾಜ್ಯ ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದು, ಮುಂದೇನು ಮಾಡಬಹುದು ಎಂಬ ಬಗ್ಗೆ ಕಾನೂನು ತಜ್ಞರು, ಅಡ್ವೋಕೇಟ್‌ ಜನರಲ್‌ ಮತ್ತು ತಾಂತ್ರಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರು ಹಲವು ಸಲಹೆಗಳನ್ನು ಕೊಟ್ಟಿದ್ದು, ಈ ಎಲ್ಲಾ ವಿಚಾರಗಳ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಮತ್ತು ಸಂಸದರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಆದರೆ, ಸಭೆಯಲ್ಲಿ ಬಂದ ಸಲಹೆಗಳನ್ನು ಬಹಿರಂಗಪಡಿಸಲು ನಿರಾಕರಿಸಿದರು.

ಅಂತಾರಾಜ್ಯ ನದಿ ವಿವಾದಗಳಿಗೆ ಸಂಬಂಧಿಸಿದಂತೆ ಅಂತಾರಾಜ್ಯ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳುವುದಿದ್ದರೂ ಅದು ಸಂಸತ್ತಿನಲ್ಲಿ ಚರ್ಚೆಯಾಗಿ ತೀರ್ಮಾನವಾಗಬೇಕು. ಆದರೆ, ಅದಕ್ಕೆ ವ್ಯತಿರಿಕ್ತವಾಗಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಅದರಂತೆ ಪ್ರಾಧಿಕಾರ ಮತ್ತು ಸಮಿತಿಗಳನ್ನು ಕೇಂದ್ರ ಸರ್ಕಾರ ರಚಿಸಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಪ್ರತಿಭಟನೆ ಅನಿವಾರ್ಯ. ಇದು ಹೇಗಿರಬೇಕು ಎಂಬ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗುವುದು. ಜತೆಗೆ ಸಂಸತ್ತಿನಲ್ಲಿ ಈ ವಿಚಾರವನ್ನು ಹೇಗೆ ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ಸಂಸದರ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.

Advertisement

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಹೀಗಾಗಿ ಸರ್ಕಾರವೇ ಎಲ್ಲವನ್ನೂ ತೀರ್ಮಾನಿಸದೆ ಎಲ್ಲ ಪಕ್ಷಗಳ ನಾಯಕರ ಸಹಕಾರ ಪಡೆದು ಕೆಲಸ ಮಾಡಲಿದೆ. ಆದ್ದರಿಂದ ಪ್ರತಿಪಕ್ಷಗಳ ನಾಯಕರೂ ಈ ವಿಚಾರದಲ್ಲಿ ರಾಜಕೀಯ ಟೀಕೆ ಮಾಡದೆ ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾವೇರಿ ಪ್ರಾಧಿಕಾರ, ಸಮಿತಿಗೆ ಹೆಸರು ಶಿಫಾರಸು ಮಾಡಿ ಸರ್ಕಾರ
ಕೇಂದ್ರ ಸರ್ಕಾರ ರಚಿಸಿರುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯವನ್ನು ಪ್ರತಿನಿಧಿಸುವ ಸದಸ್ಯರಾಗಿ ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರ ಹೆಸರನ್ನು ಸರ್ಕಾರ ಶಿಫಾರಸು ಮಾಡಿದೆ. ಅದೇ ರೀತಿ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಲ್‌.ಪ್ರಸನ್ನ ಅವರ ಹೆಸರು ಶಿಫಾರಸು ಮಾಡಲಾಗಿದೆ.

ರಾಜ್ಯ ತನ್ನ ಪ್ರತಿನಿಧಿಗಳ ಹೆಸರು ಸೂಚಿಸದೇ ಇದ್ದರೂ ಜೂ. 22ರಂದು ಕೇಂದ್ರ ಸರ್ಕಾರ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನೀರು ನಿಯಂತ್ರಣ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ ಮಾರನೇ ದಿನವೇ ಅಂದರೆ ಜೂ. 23ರಂದು ರಾಜ್ಯ ಸರ್ಕಾರ ಈ ಇಬ್ಬರ ಹೆಸರುಗಳನ್ನು ಶಿಫಾರಸು ಮಾಡಿ ಕೇಂದ್ರಕ್ಕೆ ಪತ್ರ ಬರೆದಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ಕೇಂದ್ರ ಸರ್ಕಾರ ರಾಜ್ಯದ ವಿರೋಧದ ನಡುವೆಯೂ ಪ್ರಾಧಿಕಾರ ಮತ್ತು ಸಮಿತಿಗಳನ್ನು ರಚಿಸಿದೆ. ಆದರೆ, ರಾಜ್ಯದ ಹಿತಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ನಮ್ಮ ಸರ್ಕಾರ ಹೆಸರುಗಳನ್ನು ಶಿಫಾರಸು ಮಾಡಿದೆ. ಇದರೊಂದಿಗೆ ಪ್ರಾಧಿಕಾರ ಮತ್ತು ಸಮಿತಿಗಳ ಬಗ್ಗೆ ರಾಜ್ಯದ ಪ್ರತಿಭಟನೆಯನ್ನೂ ಮುಖ್ಯಮಂತ್ರಿಗಳು ಪತ್ರದ ಮೂಲಕ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ ಎಂದು ಹೇಳಿದರು.

ಜುಲೈ 2ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ ಎಂಬ ಸೂಚನೆ ಸಿಕ್ಕಿತ್ತು. ಸಭೆಗೆ ಒಟ್ಟು 9 ಸದಸ್ಯರ ಪೈಕಿ 6 ಸದಸ್ಯರು ಹಾಜರಾಗಿದ್ದರೆ ತೀರ್ಮಾನ ಕೈಗೊಳ್ಳಲು ಅವಕಾಶವಿದೆ. ಹೀಗಾಗಿ ಜು. 2ರಂದು ಸಭೆ ಕರೆದಾಗ ರಾಜ್ಯದ ಪ್ರತಿನಿಧಿಗಳಿಲ್ಲದೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇತ್ತು. ಹೀಗಾಗಿ ಜೂ. 23ರಂದೇ ಹೆಸರುಗಳನ್ನು ಶಿಫಾರಸು ಮಾಡಲಾಯಿತು ಎಂದು ಹೇಳಿದರು.

ಮೂಲಗಳ ಪ್ರಕಾರ ಜೂ. 22ರಂದು ಕೇಂದ್ರ ಸರ್ಕಾರ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನೀರು ನಿಯಂತ್ರಣ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ ಬಗ್ಗೆ ಜೂ. 23ರಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಅದೇ ದಿನ ಸಂಜೆ ಕರೆಸಿಕೊಂಡಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು, ಕೇಂದ್ರದ ಜತೆ ಸಂಘರ್ಷಕ್ಕಿಳಿಯದಂತೆ ಹೇಳಿದ್ದರಲ್ಲದೆ, ಕೂಡಲೇ ಹೆಸರು ಶಿಫಾರಸು ಮಾಡುವಂತೆ ಸಲಹೆ ಮಾಡಿದ್ದರು. ಅದರಂತೆ ಅಂದು ರಾತ್ರಿಯೇ ಇಬ್ಬರ ಹೆಸರುಗಳನ್ನು ಶಿಫಾರಸು ಮಾಡಿ ಪತ್ರ ಕಳುಹಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next