Advertisement

ಮಡಿಕೇರಿ: ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ; ಬಿಗಿ ಭದ್ರತೆ

10:04 AM Oct 17, 2022 | Team Udayavani |

ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಪುಣ್ಯಕ್ಷೇತ್ರದಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.

Advertisement

ಅ.17ರ ರಾತ್ರಿ(ಸೋಮವಾರ) 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ವತಿಯಿಂದ ತಯಾರಿ ಮಾಡಿಕೊಳ್ಳಲಾಗಿದೆ. ದೇವಾಲಯ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರ ನೇತೃತ್ವದಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಶಾಸ್ತ್ರೋಕ್ತವಾಗಿ ಚಿನ್ನಾಭರಣ ತೆಗೆದುಕೊಂಡು ಹೋಗಿ ತಾಯಿ ಶ್ರೀ ಕಾವೇರಿ ಮಾತೆಗೆ ತೊಡಿಸಲಾಯಿತು. ಕ್ಷೇತ್ರದ ತುಂಬಾ ಹೂವಿನ ಅಲಂಕಾರ ಮಾಡಲಾಗಿದೆ.

ಭಾಗಮಂಡಲದಲ್ಲಿ ಪಿಂಡ ಪ್ರದಾನ, ಕೇಶ ಮುಂಡನಕ್ಕೆ ಪ್ರತ್ಯೇಕ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಪುಣ್ಯ ಸ್ನಾನಕ್ಕೆ ಅನುಕೂಲ ಮಾಡುವ ದೃಷ್ಟಿಯಿಂದ ಈಗಾಗಲೇ ತ್ರಿವೇಣಿ ಸಂಗಮದಲ್ಲಿ ಮರಳು ಮಿಶ್ರಿತ ಹೂಳನ್ನು ತೆಗೆಯಲಾಗಿದ್ದು, ಸೇತುವೆ ಬಳಿ ಮರದ ಹಲಗೆಗಳನ್ನು ಬಳಸಿ ನೀರನ್ನು ತಡೆ ಹಿಡಿಯಲಾಗಿದೆ.

ಭಾಗಮಂಡಲದಿಂದ ತಲಕಾವೇರಿವರೆಗಿನ 8 ಕಿ.ಮೀ ರಸ್ತೆ ಉದ್ದಕ್ಕೂ ವಿದ್ಯುತ್‌ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ನಡೆದುಕೊಂಡು ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲಿದೆ. ರಸ್ತೆ ಬದಿಯಲ್ಲಿ ಬೆಳೆದಿದ್ದ ಕುರುಚಲು ಕಾಡುಗಳನ್ನು ತೆರವು ಮಾಡಲಾಗಿದ್ದು, ದಟ್ಟ ಮಂಜು ಮುಸುಕುವ ವಾತಾವರಣದ ನಡುವೆ ವಾಹನ ಸವಾರರು ಸಂಚರಿಸಲು ಅನುಕೂಲ ಕಲ್ಪಿಸಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

60 ಲಕ್ಷ ರೂ. ಬಿಡುಗಡೆ
ಕಳೆದ 3 ವರ್ಷಗಳಿಂದ ಪ್ರಾಕೃತಿಕ ವಿಕೋಪ, ಕೋವಿಡ್‌ ಮತ್ತಿತ್ತರ ಕಾರಣಗಳಿಂದ ಕಾವೇರಿ ಜಾತ್ರೆಗೆ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿತ್ತು. ಆದರೆ ಈ ಬಾರಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಲಕಾವೇರಿಗೆ ಭೇಟಿ ನೀಡಿದ್ದ ಶಾಸಕ ಕೆ.ಜಿ.ಬೋಪಯ್ಯ ಮಾಹಿತಿ ನೀಡಿದರು. ಪವಿತ್ರ ಕೊಳದಲ್ಲಿ ತೀರ್ಥ ಸ್ನಾನಕ್ಕೂ ಅವಕಾಶವಿದೆ. ಈಗಾಗಲೇ ಕಾವೇರಿ ನೀರಾವರಿ ನಿಗಮ 60 ಲಕ್ಷ ರೂ.ಗಳನ್ನು ಜಾತ್ರೆಗೆ ಬಿಡುಗಡೆ ಮಾಡಿದೆ. ಭಕ್ತರ ಅನುಕೂಲಕ್ಕಾಗಿ ಭಾಗಮಂಡಲದಿಂದ ತಲಕಾವೇರಿಗೆ ನಿರಂತರ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆಯೂ ಇರಲಿದ್ದು, ಈ ಬಾರಿಯ ತೀಥೋìದ್ಭವಕ್ಕೆ 25 ಸಾವಿರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀಥೋìಧºವಕ್ಕೆ ಜಿಲ್ಲಾಡಳಿತ ವತಿಯಿಂದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

Advertisement

ತಾತ್ಕಾಲಿಕ ಕ್ಲಿನಿಕ್‌, ಶ್ರೀ ಕಾವೇರಿ ಮಾತೆ ಧಾರ್ಮಿಕ ಗೀತಗಾಯನ ಕಾರ್ಯಕ್ರಮ, ತಲಕಾವೇರಿಯಲ್ಲಿ ಶುಚಿತ್ವಕ್ಕೆ ಒತ್ತು ನೀಡುವುದು, ಅಲ್ಲಲ್ಲಿ ಡಸ್ಟ್‌ಬಿನ್‌ ಇಡುವುದು, ಹೀಗೆ ಹಲವು ಕಾರ್ಯಗಳು ನಡೆದಿವೆ. ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ತಲಕಾವೇರಿ ಮತ್ತು ಭಾಗಮಂಡಲ ಭಗಂಡೇಶ್ವರ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ,ಕಾರ್ಯನಿರ್ವಹಣಾಧಿಕಾರಿ ಬಿ.ಎಂ.ಕೃಷ್ಣಪ್ಪ ಅವರು ತಲಕಾವೇರಿ ಪವಿತ್ರ ತೀರ್ಥೋದ್ಭವ ಸಂಬಂಧ ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಗಮನಹರಿಸಲಾಗಿದೆ, ಎಲ್ಲರು ಸಹಕರಿಸುವಂತೆ ಕೋರಿದರು.

ಬಿಗಿ ಭದ್ರತೆ
ಆಯಕಟ್ಟಿನ ಸ್ಥಳಗಳು ಮತ್ತು ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆಯಿಂದ ಮೂವರು ಡಿವೈಎಸ್‌ಪಿಗಳು, 7 ಇನ್ಸ್‌ಪೆಕ್ಟರ್‌, 17 ಸಬ್‌ ಇನ್ಸ್‌ಪೆಕ್ಟರ್‌, 300 ಪೊಲೀಸರು, 100 ಮಂದಿಯ ಮೀಸಲು ಪೊಲೀಸ್‌ ಸಶಸ್ತ್ರ ಪಡೆಯನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next