Advertisement

ಯಾವುದೇ ಕ್ಷಣದಲ್ಲಾದರೂ ವೇಳಾಪಟ್ಟಿ ಘೋಷಣೆ; ಸನ್ನದ್ಧರಾಗಿರಲು ಸೂಚನೆ

09:06 PM Mar 24, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಾದರೂ ಕೇಂದ್ರ ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದ್ದು, ಸಕಲ ರೀತಿಯಲ್ಲೂ ಸನ್ನದ್ಧರಾಗಿರುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಸೂಚಿಸಿದೆ.

Advertisement

ಕೇಂದ್ರ ಚುನಾವಣ ಆಯೋಗವು ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ವೇಳಾಪಟ್ಟಿ ಘೋಷಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಮಾದರಿ ಚುನಾವಣ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿದ್ಧವಾಗಿರುವಂತೆ ಮುಖ್ಯ ಚುನಾವಣ ಅಧಿಕಾರಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ಸೂಚಿಸಿದ್ದಾರೆ. ರಾಜ್ಯ ವಿಧಾನಸಭೆಗೆ ಎಪ್ರಿಲ್‌ ಅಥವಾ ಮೇಯಲ್ಲಿ ಚುನಾವಣೆ ನಡೆಯಲಿದೆ.

ಮಾದರಿ ಚುನಾವಣೆ ನೀತಿ ಸಂಹಿತೆ ಅನುಷ್ಠಾನಕ್ಕೆ ಅಗತ್ಯ ಇರುವ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯ ಚುನಾವಣ ಅಧಿಕಾರಿ ತಿಳಿಸಿದ್ದಾರೆ.

ವೇಳಾಪಟ್ಟಿ ಘೋಷಣೆಗೂ ಮುನ್ನ ಕೆಲವು ಮಹತ್ವದ ಚಟುವಟಿಕೆಗಳು ಬಾಕಿ ಉಳಿದಿದ್ದು, ಅವುಗಳನ್ನು ತತ್‌ಕ್ಷಣವೇ ಪೂರ್ಣಗೊಳಿಸುವಂತೆ ತುರ್ತು ಸೂಚನೆ ಹೊರಡಿಸಿದ್ದಾರೆ.

ಜಿಲ್ಲಾ ಚುನಾವಣ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಬೇಕು. ತಮ್ಮ ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್‌ಗಳು, ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು ಎಂದು ಮುಖ್ಯ ಚುನಾವಣ ಅಧಿಕಾರಿ ತಿಳಿಸಿದ್ದಾರೆ.

Advertisement

ನೀತಿ ಸಂಹಿತೆ ಅನ್ವಯಗೊಳಿಸಲು ಅಗತ್ಯವಿರುವ ಎಲ್ಲಾ ಮಾಹಿತಿಗಳ ಕೈಪಿಡಿಗಳನ್ನು ಮುಖ್ಯ ಚುನಾವಣ ಅಧಿಕಾರಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಚುನಾವಣೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್‌ ಭದ್ರತೆ ಹೆಚ್ಚಳ, ಮತದಾರರಿಗೆ ಆಮಿಷ ನೀಡದಂತೆ ಎಚ್ಚರಿಕೆ ವಹಿಸುವುದು, ಅಕ್ರಮವಾಗಿ ಹಣ, ಮದ್ಯ, ಉಡುಗೊರೆಗಳನ್ನು ಸಾಗಿಸುವುದಕ್ಕೆ ಕಡಿವಾಣ ಹಾಕುವುದು, ಸರಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷಗಳ ಸಭೆ ಸಮಾರಂಭ ನಡೆಸದಂತೆ ನೋಡಿಕೊಳ್ಳಬೇಕು ಹಾಗೂ ಅವುಗಳಿಗೆ ಅವಕಾಶವನ್ನೂ ನೀಡಬಾರದು. ಅಭ್ಯರ್ಥಿಗಳ ಖರ್ಚು ಮತ್ತು ವೆಚ್ಚಗಳ ಕುರಿತು ನಿಗಾ ಇಡುವುದು. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ವಹಿಸುವುದು ಸೇರಿ ನೀತಿ ಸಂಹಿತೆಯ ಅಂಶಗಳನ್ನು ಅನುಷ್ಠಾನಕ್ಕೆ ತರಲು ಈಗಿನಿಂದಲೇ ಜಿಲ್ಲಾ ಚುನಾವಣಾಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಸೂಚನೆ ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next