Advertisement

ಬಿಜೆಪಿ ಮತ್ತೆ ಅಧಿಕಾರಕ್ಕೆ; ಇನ್ನಷ್ಟು ಅಭಿವೃದ್ಧಿ: ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌

12:54 AM Mar 20, 2023 | Team Udayavani |

ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬದ್ಧವಾಗಿದ್ದು, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಜ್ಯ ಬಿಜೆಪಿ ಸರಕಾರ ಹಲವು ಅಭಿವೃದ್ಧಿ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಿದೆ. ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಆ ಮೂಲಕ ಇನ್ನಷ್ಟು ಅಭಿವೃದ್ಧಿ ಸಾಧಿಸಬಹುದು ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಬಂದರು, ಹಗಡು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌ ಹೇಳಿದರು.

Advertisement

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ರವಿವಾರ ನಗರ ಓಷಿಯನ್‌ ಪರ್ಲ್ ಹೊಟೇಲ್‌ನಲ್ಲಿ ಹಮ್ಮಿಕೊಳ್ಳಲಾದ ಪ್ರಣಾಳಿಕೆ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ದಕ್ಷಿಣ ಭಾರತದಲ್ಲಿ ಬಿಜೆಪಿ ಹೆಚ್ಚು ಪಾಮುಖ್ಯ ನೀಡುವ ರಾಜ್ಯ ಕರ್ನಾಟಕ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಇಲ್ಲಿನ ಜನರು ಹಲವು ವರ್ಷಗಳ ಕಾಲ ಹೋರಾಟ ಮಾಡಿದ್ದಾರೆ.

ಈಗಾಗಲೇ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಡಬಲ್‌ ಎಂಜಿನ್‌ ಸರಕಾರದ ಮೂಲಕ ಹಲವು ಉತ್ತಮ ಕೆಲಸಗಳು ರಾಜ್ಯದಲ್ಲಿ ನಡೆದಿವೆ. ಬಾಕಿ ಇರುವ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸುವ ಮೂಲಕ ಪರಿಹರಿಸಲಾಗುವುದು ಎಂದರು.

ಈ ಭಾಗದ ಜನರ ಪ್ರಮುಖ ಬೇಡಿಕೆಗಳಾದ ಕರಾವಳಿ ಭಾಗದ ರಸ್ತೆ, ರೈಲು ಮಾರ್ಗ, ಪ್ರವಾಸೋದ್ಯಮ ಅಭಿವೃದ್ಧಿ, ಬಂದರು ಅಭಿವೃದ್ಧಿ, ಮೂಲ ಸೌಕರ್ಯ, ಉದ್ಯೋಗ ಸೃಷ್ಟಿ ಇತ್ಯಾದಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರಣಾಳಿಕೆ ಸಿದ್ಧಪಡಿಸಲಾಗುವುದು ಎಂದರು.

ಸಾರ್ವಜನಿಕರ ಸಲಹೆಗಳು
ನಂತೂರು-ಕೆಪಿಟಿಯಲ್ಲಿ ಸುಗಮ ಸಂಚಾರಕ್ಕೆ ಫ್ಲೆಓವರ್‌, ಅಂಡರ್‌ಪಾಸ್‌ ನಿರ್ಮಾಣ, ಮಂಗಳೂರು -ಬೆಂಗಳೂರು ಮಾರ್ಗದಲ್ಲಿ ರೈಲುಗಳ ಸಂಖ್ಯೆ ಹೆಚ್ಚಿಸುವುದು, ಟೋಲ್‌ಗೇಟ್‌ ಕಡಿಮೆ ಮಾಡುವುದು, ಮಂಗಳೂರು-ಬೆಂಗಳೂರು ನಡುವೆ ಸಂಚಾರ ಯೋಗ್ಯ ರಸ್ತೆ, ಗೋವಾ ಮಾದರಿ ಬೀಚ್‌ ಪ್ರವಾಸೋದ್ಯಮ ಅಭಿವೃದ್ಧಿ, ಐಟಿ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಸೃಷ್ಟಿ, ಮಂಗಳೂರಿಗೆ ಎನ್‌ಐಎ ಕಚೇರಿ, ದೇವಸ್ಥಾನಗಳಲ್ಲಿ ಗೋಶಾಲೆ, ಹಿಂದೂ ಭವನಗಳ ನಿರ್ಮಾಣ ಇತ್ಯಾದಿ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಸಾರ್ವಜನಿಕರು ಆಗ್ರಹಿಸಿದರು. ಉದ್ಯಮಿಗಳು, ಎನ್‌ಜಿಒ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

ಶಾಸಕ ವೇದವ್ಯಾಸ ಕಾಮತ್‌, ರಾಜ್ಯ ಪ್ರಣಾಳಿಕೆ ಸಮಿತಿ ಸಹ ಸಂಚಾಲಕ ರವೀಂದ್ರ ಪೈ, ಕ್ರೆಡೈ ಮಂಗಳೂರು ಕಾರ್ಯದರ್ಶಿ ಪ್ರಶಾಂತ್‌ ಸನಿಲ್‌, ನವಮಂಗಳೂರು ಬಂದರು ಬಳಕೆದಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊಟ್ಟಾರಿ ಉಪಸ್ಥಿತರಿದ್ದರು.

ಜಿಲ್ಲಾ ಪ್ರಣಾಳಿಕೆ ಸಮಿತಿ ಸಂಚಾಲಕ ಸಿಎ ಶಾಂತಾರಾಮ ಶೆಟ್ಟಿ ಸ್ವಾಗತಿಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಪ್ರಣಾಳಿಕೆ ಸಮಿತಿ ಸಂಚಾಲಕ ಸಂಜಯ್‌ ಪ್ರಭು ವಂದಿಸಿದರು. ವಿನ್ಯಾಸ್‌ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next