Advertisement

ಮಹತ್ವಾಕಾಂಕ್ಷೆಯ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮತಿ

05:20 PM Dec 29, 2022 | Team Udayavani |

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ.

Advertisement

ಕಳಸಾ-ಬಂಡೂರಿ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ ಅನುಮತಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಚಿವರಿಗೆ ರಾಜ್ಯ ವಿಧಾನಸಭಾ ಕಲಾಪದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಭಿನಂದನೆ ಸಲ್ಲಿಸಿದರು.

ಯಡಿಯೂರಪ್ಪ ಹರ್ಷ

ರಾಜ್ಯ ಬಿಜೆಪಿ ಸರ್ಕಾರದ ಅವಿರತ ಪ್ರಯತ್ನಗಳ ಫಲವಾಗಿ ನಾಡಿನ ಬಹುದಿನದ ಬೇಡಿಕೆಯಾಗಿದ್ದ ಕಳಸಾ-ಬಂಡೂರಿಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗವು ಅನುಮತಿ ನೀಡಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಹರ್ಷ ವ್ಯಕ್ತ ಪಡಿಸಿದ್ದಾರೆ.

ಸಿ. ಸಿ. ಪಾಟೀಲ್ ಹರ್ಷ

Advertisement

ಕಳಸಾ ಬಂಡೂರಿ ಯೋಜನೆಯ ಡಿಪಿಆರ್‌ ಅನ್ನು ಕೇಂದ್ರ ಸರ್ಕಾರವು ಒಪ್ಪಿಕೊಂಡು ಅನುಮೋದಿಸಿರುವುದಕ್ಕೆ ವಿಶೇಷವಾಗಿ ಪ್ರಧಾನಮಂತ್ರಿನರೇಂದ್ರ ಮೋದಿ, ಈ ಯೋಜನೆ ಸಾಕಾರಗೊಳ್ಳುವಲ್ಲಿ ಶ್ರಮಿಸಿದ ಕೇಂದ್ರ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಿಂದೆ ಸ್ವತಃ ಹೋರಾಟ ಮಾಡಿದ್ದಲ್ಲದೇ, ತಾವು ಮುಖ್ಯಮಂತ್ರಿಯಾದ ನಂತರ ಈ ಯೋಜನೆಯ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಂಡು ವಿಶೇಷ ಆಸಕ್ತಿ ವಹಿಸಿದ್ದಕ್ಕೆ ಕೃತಜ್ಞತಾಪೂರ್ವಕ ವಂದನೆಗಳು. ನಮ್ಮ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮತ್ತಿತರ ಅಧಿಕಾರಿ ಮಿತ್ರರ ಪ್ರಯತ್ನವನ್ನೂ ನಾನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಈ ಮಹತ್ವಪೂರ್ಣ ಯೋಜನೆಗೆ ಶೀಘ್ರಗತಿಯಲ್ಲಿ ಹಸಿರು ನಿಶಾನೆ ದೊರೆತಿರುವುದರಿಂದ ನಮ್ಮ ಉತ್ತರ ಕರ್ನಾಟಕ ಭಾಗದ ರೈತರಿಗೆ ವರದಾನವಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದ್ದಾರೆ.

ಚುನಾವಣಾ ಗಿಮಿಕ್

ಕಳಸ ಬಂಡೂರಿ ಡಿಪಿಆರ್ ಗೆ ಕೇಂದ್ರ ಜಲ ಆಯೋಗ ಅನುಮತಿಸಿದ್ದು ಬಿಜೆಪಿಯ ಚುನಾವಣಾ ಗಿಮಿಕ್ ಅಷ್ಟೇ. ನೀರಾವರಿ ಯೋಜನೆಗಳ ಅನುಷ್ಠಾನ ವಿಳಂಬದ ಕುರಿತು ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ವ್ಯಕ್ತವಾದ ಜನಬೆಂಬಲಕ್ಕೆ ಹೆದರಿದ ಬಿಜೆಪಿ ಸರ್ಕಾರ ತುರಾತುರಿಯಲ್ಲಿ ಡಿಪಿಆರ್ ಅನುಮತಿ ತಂದಿದೆ.ಈ ಮೂಲಕ ಕಾಂಗ್ರೆಸ್ ಹೋರಾಟಕ್ಕೆ ಮೊದಲ ಜಯ ಸಿಕ್ಕಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

ನಳಿನ್‍ಕುಮಾರ್ ಕಟೀಲ್ ಧನ್ಯವಾದ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸಿದ್ದು,ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ಕಳಸಾ ಬಂಡೂರಿ ಯೋಜನೆಗೆ ನಾವು ಹೋರಾಟ ಮಾಡಿದ್ದೇವೆ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದರೊಂದಿಗೆ ಉತ್ತರ ಕರ್ನಾಟಕದ ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ತೋರಿದೆ. ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್ ವರದಿಗೆ ಜಲ ಆಯೋಗದಿಂದ ಅನುಮತಿ ಸಿಕ್ಕಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಜನರಿಗೆ ಇದು ಶುಭ ಸುದ್ದಿ ಆಗಿದೆ ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next