ಚಿಕ್ಕಬಳ್ಳಾಪುರ: ಕೋವಿಡ್-19 ಸಂದರ್ಭದಲ್ಲಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಜಿಪಂ ಎಲ್ಲಾ ರೀತಿಯ ಸಕಲ ಸಿದ್ಧತೆ ಕೈಗೊಂಡಿದ್ದು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ನಿರ್ಭಯವಾಗಿ ಪರೀಕ್ಷೆ ಬರೆಯ ಬೇಕೆಂದು ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆ ಕುರಿತು ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಪ್ರತಿ ತಾಲೂಕಿನಲ್ಲಿ ಹೆಚ್ಚುವರಿಯಾಗಿ ತಲಾ 3 ಪರೀಕ್ಷಾ ಕೇಂದ್ರಗಳನ್ನು ಮೀಸಲಿಡಲಾಗಿದೆ ಎಂದರು.
8.30 ಕ್ಕೆ ಬರಬೇಕು: ಜಿಲ್ಲೆಯಲ್ಲಿ ಒಟ್ಟು ಈ ಬಾರಿ 286 ಶಾಲೆಗಳಿಂದ 15,476 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈಗಾಗಲೇ ಪ್ರವೇಶ ಪತ್ರ ಹಾಗೂ ಮಾಸ್ಕ್ ವಿತರಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಮಾಡುವುದರಿಂದ ಅಂದು ಬೆಳಗ್ಗೆ 8:30 ಕ್ಕೆ ಪರಿಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಬೆಳಗ್ಗೆ 10:30 ರಿಂದ 1:30 ರವರೆಗೆ ಪರೀಕ್ಷೆ ನಡೆಯಲಿದೆ.
ಮನೆಯಿಂದಲೇ ನೀರು ತರಬೇಕು: ಒಂದು ವೇಳೆ ಜ್ವರದ ಲಕ್ಷಣಗಳಿರುವ ವಿದ್ಯಾರ್ಥಿಗಳು ಕಂಡುಬಂದರೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ಕ್ರಮ ವಹಿಸಲಾಗಿದೆ. ವಿದ್ಯಾರ್ಥಿ ಗಳು ತಮ್ಮದೇ ಆದ ಪ್ರತ್ಯೇಕ ಬ್ಯಾಗಿನಲ್ಲಿ ಕುಡಿವ ನೀರು, ಆಹಾರ ಡಬ್ಬಿ ತರಬೇಕು. ವಿದ್ಯಾರ್ಥಿಗಳು ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದರು.
ನಿಷೇಧಾಜ್ಞೆ ಜಾರಿ: ಪ್ರತಿ ಕೇಂದ್ರಕ್ಕೆ ವೈದ್ಯ ಕೀಯ ತಪಾಸಣೆಗೆ ತಂಡಗಳನ್ನು ನೇಮಿಸ ಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಮ್ಕಾಸ್ ಹಾಕಿಯೇ ಪರಿಕ್ಷೆ ಬರೆಯಬೇಕು. ಪರೀಕ್ಷೆ ಕೇಂದ್ರಗಳ 200 ಮೀ. 144 ಸೆಕ್ಷನ್ ಜಾರಿ ಮಾಡಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್. ನಾಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಶಾಂತಲಾ, ಮಹಮ್ಮದ್ ಖಲೀಲ್, ಶ್ರೀನಿವಾಸ ಮೂರ್ತಿ, ಶಿವಲಿಂಗಯ್ಯ ಮತ್ತಿತರರು ಇದ್ದರು.
ಪರೀಕ್ಷಾ ಮುನ್ನ ದಿನ ಜೂ.24 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಠಡಿ ಮತ್ತು ನೋಂದಣಿ ಸಂಖ್ಯೆ ಬಗ್ಗೆ ತಿಳಿದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
-ಬಿ.ಫೌಝೀಯಾ ತರುನ್ನುಮ್, ಜಿಪಂ ಸಿಇಒ