Advertisement

110 ಡೆಂಘೀ, 20 ಚಿಕೂನ್‌ಗುನ್ಯಾ ಪ್ರಕರಣ

01:05 PM Jul 31, 2019 | Naveen |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 110 ಡೆಂಘೀ ಮತ್ತು 20 ಚಿಕೂನ್‌ಗುನ್ಯಾ ಪ್ರಕರಣಗಳು ಕಂಡು ಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ| ಮಂಜುನಾಥ್‌ ತಿಳಿಸಿದರು.

Advertisement

ಮಂಗಳವಾರ ನಗರದ ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಮಾಧ್ಯಮ ಪ್ರತಿನಿಧಿಗಳಿಗೆ ರೋಗವಾಹಕ ರೋಗಗಳಾದ ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾ ನಿಯಂತ್ರಣದ ಬಗ್ಗೆ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ಪತ್ರಕರ್ತರಿಗೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

2018ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 78 ಡೆಂಘೀ ಪ್ರಕರಣ ಪತ್ತೆಯಾಗಿತ್ತು. 2019ರಲ್ಲಿ 110 ಪ್ರಕರಣ ಪತ್ತೆಯಾಗಿದೆ. ಕಳೆದ ಸಾಲಿನಲ್ಲಿ 32 ಚಿಕೂನ್‌ಗುನ್ಯಾ ಪ್ರಕರಣ ಪತ್ತೆಯಾಗಿತ್ತು. ಈ ಬಾರಿ 20 ಪ್ರಕರಣ ಪತ್ತೆಯಾಗಿವೆ ಎಂದು ತಿಳಿಸಿದರು.

ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಡೆಂಘೀ ಜ್ವರಕ್ಕೆ ಕಾರಣವಾಗುವ ಸೊಳ್ಳೆ ಶುದ್ಧ ನೀರಿನಲ್ಲಿ ಲಾರ್ವ ಇಡುತ್ತವೆ. ಈ ಲಾರ್ವ ನಾಶಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೂ 12,06,977 ಮನೆಗಳಲ್ಲಿ 60,40,090 ತಾಣಗಳಲ್ಲಿ ಲಾರ್ವ ಸಮೀಕ್ಷೆ ನಡೆಸಿ 25,706 ಮನೆಗಳ 30,253 ತಾಣಗಳಲ್ಲಿ ಲಾರ್ವ ಕಂಡು ಬಂದಿದ್ದು, ಲಾರ್ವ ನಿರ್ಮೂಲನೆ ಮಾಡಲಾಗಿದೆ. ಲಾರ್ವ ಸಮೀಕ್ಷೆ ಮತ್ತು ನಿರ್ಮೂಲನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಡೆಂಘೀ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತೆ ಕ್ರಮ ಆರೋಗ್ಯ ಇಲಾಖೆ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಮಲೇರಿಯಾ ನಿರ್ಮೂಲನಾ ಚೌಕಟ್ಟು ಕಾರ್ಯಕ್ರಮದಡಿ 2020ರೊಳಗೆ ರಾಜ್ಯಾದ್ಯಂತ ಮಲೇರಿಯಾ ನಿವಾರಣೆ ಮಾಡುವ ಗುರಿ ಹೊಂದಲಾಗಿದ್ದು, ಇದರ ಅನ್ವಯ ಜಿಲ್ಲೆಯಲ್ಲಿ ಸಮಸ್ಯಾತ್ಮಕ ಪ್ರಾರ್ಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳಿಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸಿ ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದರು.

Advertisement

ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ನಗರಸಭೆ ಹಾಗೂ ಪಟ್ಟಣ ಪಂಚಾಯತ್‌ ವತಿಯಿಂದ ಫಾಗಿಂಗ್‌ ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ ಮುಂಜಾಗ್ರತೆ ವಹಿಸಬೇಕು. ಡೆಂಘೀ ಜ್ವರಕ್ಕೆ ಸಂಬಂಧಿಸಿದ ಸೊಳ್ಳೆಗಳು ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಮನೆಗಳಲ್ಲಿ ಸಂಗ್ರಹಿಸಿರುವ ನೀರನ್ನು ಮೂರು ದಿನಗಳಿಗೊಮ್ಮೆ ಬದಲಾಯಿಸಬೇಕು. ಇದರಿಂದ ಸೊಳ್ಳೆಗಳ ಉತ್ಪತ್ತಿ ತಡೆ ಸಾಧ್ಯವಾಗುವುದರೊಂದಿಗೆ ಡೆಂಘೀ ಜ್ವರ ನಿಯಂತ್ರಣ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಸ್‌ಕ್ಲಬ್‌ ಅಧ್ಯಕ್ಷ ಆರಗ ರವಿ ಮಾತನಾಡಿ, ಆರೋಗ್ಯ ಎಲ್ಲರಿಗೂ ಮುಖ್ಯ. ನಮ್ಮ ಆರೋಗ್ಯವನ್ನು ಕಾಪಾಡುವುದು ಕೇವಲ ಆರೋಗ್ಯ ಇಲಾಖೆ ಜವಾಬ್ದಾರಿಯಲ್ಲ. ಅದು ನಮ್ಮ ಜವಾಬ್ದಾರಿಯೂ ಹೌದು. ಸಾಂಕ್ರಾಮಿಕ ರೋಗದಿಂದ ದೂರಾಗಲು ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜನರಲ್ಲಿ ಆರೋಗ್ಯದ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಧ್ಯಮಗಳು ಮುಖ್ಯಪಾತ್ರ ವಹಿಸುತ್ತಿವೆ. ಆರೋಗ್ಯ ಇಲಾಖೆಯ ಜೊತೆ ಜೊತೆಗೆ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ರೋಗಮುಕ್ತ ಸಮಾಜ ನಿರ್ಮಾಣ ಮಾಡಬಹುದು ಎಂದರು.

ಸಂವಾದ ಕಾರ್ಯಕ್ರಮಕ್ಕೂ ಮೊದಲು ಮಾಧ್ಯಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವರದಿಗಾರರ ಆರೋಗ್ಯ ತಪಾಸಣೆ ನಡೆಸಲಾಯಿತು. ಸಂವಾದ ಕಾರ್ಯಕ್ರಮದಲ್ಲಿ ಡಿವಿಬಿಡಿಸಿ ಅಧಿಕಾರಿ ಡಾ.ಹರೀಶ್‌ಬಾಬು, ಹಿರಿಯ ಆರೋಗ್ಯ ನಿರೀಕ್ಷಕ ಈಶ್ವರಪ್ಪ, ಸುಭಾಷ್‌, ಪ್ರಸ್‌ಕ್ಲಬ್‌ ಉಪಾಧ್ಯಕ್ಷ ಎಸ್‌.ಕೆ.ಲಕ್ಷಿ ್ಮೕಪ್ರಸಾದ್‌, ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌, ಖಜಾಂಚಿ ಕಿಶೋರ್‌ ಮುಂತಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next