Advertisement

ವರುಣನ ರುದ್ರನರ್ತನ

11:03 AM Aug 08, 2019 | Naveen |

ಚಿಕ್ಕಮಗಳೂರು: ಅಬ್ಬರದ ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಪ್ರವಾಹಕ್ಕೆ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ ನದಿ-ಹಳ್ಳ, ಕೊಳ್ಳಗಳೆಲ್ಲ ಉಕ್ಕಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

Advertisement

ನರಸಿಂಹರಾಜಪುರ ತಾಲೂಕಿನ ಮಾಳೂರುದಿಣ್ಣೆ ಎಂಬಲ್ಲಿ ಗಾಳಿಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಕುಮಾರ್‌ ಮೃತಪಟ್ಟಿದ್ದಾರೆ. ಇನ್ನೊಂದೆಡೆ ಮೂಡಿಗೆರೆ ತಾಲೂಕಿನ ಆಲೂರು ಗ್ರಾಮದ ಶ್ರೀವತ್ಸ ಎಂಬ ಯುವಕ ಹೇಮಾವತಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ.

ಮಳೆಯಿಂದ ಜಿಲ್ಲೆಯ ಹಲವೆಡೆ ರಸ್ತೆಗಳಿಗೆ ಮರ ಬಿದ್ದು, ಸೇತುವೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ 2 ದಿನಗಳ ಕಾಲ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕುಗಳಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಮಳೆಯೊಂದಿಗೆ ಗಾಳಿಯೂ ತೀವ್ರವಾಗಿರುವುದರಿಂದ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಮೂಡಿಗೆರೆ ತಾಲೂಕಿನಾದ್ಯಂತ ಮಳೆಯ ಅಬ್ಬರ ತೀವ್ರವಾಗಿದೆ. ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಾಲೂಕಿನ ಹಂತೂರು ಗ್ರಾಮದಲ್ಲಿ ನೆರೆಗೆ ಸಿಲುಕಿದ್ದ 9 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. 4 ಜನ ಪುರುಷರು, 3 ಮಹಿಳೆಯರು, 2 ಮಕ್ಕಳೊಂದಿಗೆ 3 ಹಸುಗಳನ್ನು ಸಹ ರಕ್ಷಿಸಲಾಗಿದೆ. ಕಳಸದಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಟಾಳೆ ಸೇತುವೆ ಮೇಲೆ ಭದ್ರಾ ನದಿಯ ನೀರು ಹರಿಯುತ್ತಿದೆ. ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮತ್ತೂಂದು ರಸ್ತೆ ಹಳುವಳ್ಳಿಯಲ್ಲೂ ಭೂ ಕುಸಿತವುಂಟಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಹೇಮಾವತಿ ಉಕ್ಕಿ ಹರಿದ ಪರಿಣಾಮ ನೂರಾರು ಎಕರೆ ಗದ್ದೆಗಳು ಜಲಾವೃತಗೊಂಡಿವೆ.

Advertisement

ಮಂಗಳವಾರ ತಡರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಹಲವೆಡೆ ಗುಡ್ಡ ಕುಸಿದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ರಸ್ತೆಯ ಮೇಲೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿದ ನಂತರ ವಾಹನ ಸಂಚಾರ ಆರಂಭಗೊಂಡಿತಾದರೂ ಮತ್ತೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ಸಂಚಾರ ನಿಷೇಧಿಸಲಾಗಿದೆ.

ಮಳೆಯಿಂದ ನರಸಿಂಹರಾಜಪುರ ತಾಲೂಕಿನಲ್ಲೂ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಭದ್ರಾ ನದಿ ಉಕ್ಕಿ ಹರಿದು ಅಕ್ಕಪಕ್ಕದ ತೋಟಗಳೆಲ್ಲ ಜಲಾವೃತಗೊಂಡು ಲಕ್ಷಾಂತರ ರೂ. ನಷ್ಟವುಂಟಾಗಿದೆ. ಇಟ್ಟಿನಹಳ್ಳಿ ಹಾಗೂ ಕುಳಗೂರು ಗ್ರಾಮಗಳಿಂದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿದ್ದ ಕಿರು ಸೇತುವೆ ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಬಸರೀಕಟ್ಟೆ-ಹೇರೂರು ರಸ್ತೆಯಲ್ಲಿ ಮರಬಿದ್ದು ಸಂಚಾರ ಸ್ಥಗಿತವಾಗಿದೆ.

ತರೀಕೆರೆ ತಾಲೂಕಿನಲ್ಲಿ ಗಾಳಿ- ಮಳೆಯಿಂದ ಬರಗೇನಹಳ್ಳಿ ಗ್ರಾಮದಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಹಾಗೂ ಹಲವು ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಪಟ್ಟಣದ ತಾಲೂಕು ಕಚೇರಿ ಹಿಂಭಾಗ ಮರವೊಂದು ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್‌ ಈ ವೇಳೆ ಕಾರಿನೊಳಗೆ ಯಾರೂ ಇರಲಿಲ್ಲ.

ಶೃಂಗೇರಿಯಲ್ಲಿ ಮಳೆ-ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಬುಧವಾರವೂ ನದಿಯ ನೀರಿನ ಮಟ್ಟ ಸತತ ಏರುತ್ತಿದೆ.

ಶೃಂಗೇರಿ ಶಾರದಾ ಪೀಠದ ಕಪ್ಪೆಶಂಕರ ದೇಗುಲ, ಸಂದ್ಯಾವಂದನ ಮಂಟಪ ನೀರಿನಲ್ಲಿ ಮುಳುಗಿದ್ದರೆ ಶ್ರೀ ಮಠದಿಂದ ನರಸಿಂಹವನಕ್ಕೆ ತೆರಳುವ ಮಾರ್ಗದಲ್ಲಿ ಪ್ರವಾಹದಿಂದ ನೀರು ತುಂಬಿದೆ. ಪಟ್ಟಣದ ವಾಹನ ನಿಲುಗಡೆ ಜಾಗವಾದ ಗಾಂಧಿ ಮೈದಾನ ಜಲಾವೃತವಾಗಿದ್ದು, ಬೈಪಾಸ್‌ ರಸ್ತೆಯಲ್ಲಿ ಪ್ರವಾಹದ ನೀರು ನಿಂತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

ಕೆವಿಆರ್‌ ರಸ್ತೆಯಲ್ಲಿ ಅಂಗಡಿಗಳಿಗೆ ನೀರು ನುಗ್ಗಿದೆ. ಗ್ರಾಮೀಣ ಪ್ರದೇಶದ ಕಿಕ್ರೆ, ಮರಟೆ ಸೇರಿದಂತೆ ಅನೇಕ ಹಳ್ಳಗಳು ಉಕ್ಕಿ ಹರಿಯುತ್ತಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಕಲ್ಕಟ್ಟೆಯಲ್ಲಿ ಮರ ಮುರಿದು ಮನೆ ಮೇಲೆ ಬಿದ್ದಿದ್ದರಿಂದ ದುರ್ಗಾ ಎಂಬುವವರು ಗಾಯಗೊಂಡಿದ್ದಾರೆ. ಕುಡಿಯುವ ನೀರು ಪೂರೈಸುವ ನೀರು ಸರಬರಾಜು ಘಟಕಕ್ಕೆ ಪ್ರವಾಹದ ನೀರು ನುಗ್ಗಿದ್ದರಿಂದ ಎರಡು ದಿನ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಗಿರಿ ಶ್ರೇಣಿಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊನ್ನಮ್ಮನ ಹಳ್ಳಕ್ಕೆ ನೀರಿನ ಹರಿವು ಹೆಚ್ಚಾಗಿದೆ. ಜಲಪಾತದಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿತ್ತು. ಕಳೆದ ಹಲವು ವರ್ಷಗಳ ನಂತರ ಹೊನ್ನಮ್ಮನ ಹಳ್ಳಕ್ಕೆ ಈ ಪ್ರಮಾಣದ ನೀರು ಬಂದಿದೆ.

ಖಾಂಡ್ಯ ದೇವಾಲಯದ ರಾಮಮೂರ್ತಿ ಭಟ್ ಅವರ ಮನೆಯ ಮೇಲೆ ಬೃಹತ್‌ ಮರವೊಂದು ಬಿದ್ದಿದ್ದು ಮನೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದಲ್ಲದೆ ತಾಲೂಕಿನ ಕೆಲವೆಡೆ ಮನೆ, ಕೊಟ್ಟಿಗೆಗಳು ಕುಸಿದಿವೆ.

ಸಂಚಾರ ಸ್ಥಗಿತ: ಬಾಳೆಹೊನ್ನೂರಿನಲ್ಲಿ ಆಶ್ಲೇಷ ಮಳೆ ಅಬ್ಬರಕ್ಕೆ ಭದ್ರಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಬಾಳೆಹೊನ್ನೂರು, ಮಾಗುಂಡಿ, ಹೊರನಾಡು, ಕಳಸ, ಬಾಳೆಹೊಳೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಹೊಳೆಬಾಗಿಲು, ತೆಪ್ಪದಗಂಡಿ ಹಾಗೂ ಮಹಲ್ಗೋಡಿನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದರಿಂದ ಸಂಚಾರ ಬಂದ್‌ ಆಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next