Advertisement

ಕಾಫಿನಾಡಲ್ಲಿ ಕಮಲ-ಕಾಂಗ್ರೆಸ್‌ ಮೇಲುಗೈ

11:50 AM Jun 01, 2019 | Team Udayavani |

ಚಿಕ್ಕಮಗಳೂರು ಜಿಲ್ಲೆಯ ಕಡೂರು ಪುರಸಭೆ ಹಾಗೂ ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ನಾಲ್ಕು ಪಟ್ಟಣ ಪಂಚಾಯತ್‌ಗಳ ಪೈಕಿ ಮೂರರಲ್ಲಿ ಬಿಜೆಪಿ ಹಾಗೂ 1ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಆದರೆ ಕಡೂರು ಪುರಸಭೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಲಭಿಸದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement

ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ 4 ಪಟ್ಟಣ ಪಂಚಾಯತ್‌ಗಳ ಪೈಕಿ ಮೂರರಲ್ಲಿ ಬಿಜೆಪಿ ಹಾಗೂ 1 ರಲ್ಲಿ ಕಾಂಗ್ರೆಸ್‌ ಆಡಳಿತದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಕಡೂರು ಪುರಸಭೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯ ಕಡೂರು ಪುರಸಭೆ, ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ಪಟ್ಟಣ ಪಂಚಾಯತ್‌ಗಳಿಗೆ ಚುನಾವಣೆ ನಡೆದಿದ್ದು, ಶುಕ್ರವಾರ ಮತಗಳ ಎಣಿಕೆ ಕಾರ್ಯ ನಡೆಯಿತು. ಮೂಡಿಗೆರೆ, ಶೃಂಗೇರಿ ಮತ್ತು ಕೊಪ್ಪ ಪಟ್ಟಣ ಪಂಚಾಯತ್‌ಗಳಲ್ಲಿ ಬಿಜೆಪಿ ಬಹುಮತ ಪಡೆದು ಆಡಳಿತ ಹಿಡಿಯುವಲ್ಲಿ ಯಶಸ್ವಿಯಾದರೆ, ನರಸಿಂಹರಾಜಪುರ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್‌ ಬಹುಮತ ಪಡೆದುಕೊಂಡಿದೆ. ಕಡೂರು ಪುರಸಭೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬಂದಿಲ್ಲ.

ಕಳೆದ ಅವಧಿಯಲ್ಲಿ ಬಿಜೆಪಿ ಶೃಂಗೇರಿ, ಕೊಪ್ಪ ಪಟ್ಟಣ ಪಂಚಾಯತ್‌ಗಳಲ್ಲಿ ಬಹುಮತ ಪಡೆದುಕೊಂಡಿದ್ದು, ಈ ಬಾರಿ ಈ ಎರಡು ಪಟ್ಟಣ ಪಂಚಾಯತ್‌ಗಳೊಂದಿಗೆ ಮೂಡಿಗೆರೆಯನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಕಳೆದ ಅವಧಿಯಲ್ಲಿ ಕಡೂರು ಪುರಸಭೆಯಲ್ಲಿ ಆಡಳಿತ ನಡೆಸಿತ್ತು. ಈ ಬಾರಿ ನರಸಿಂಹರಾಜಪುರ ಪಟ್ಟಣ ಪಂಚಾಯತ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕಡೂರು ಪುರಸಭೆಯ 23 ಸ್ಥಾನಗಳಲ್ಲಿ ಬಿಜೆಪಿ 6, ಕಾಂಗ್ರೆಸ್‌ 7, ಜೆಡಿಎಸ್‌ 6 ಹಾಗೂ 4 ಸ್ಥಾನಗಳಲ್ಲಿ ಪಕ್ಷೇತರರು ಗೆದ್ದಿದ್ದಾರೆ. ಬಹುತೇಕ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಏರ್ಪಟ್ಟು ಆಡಳಿತ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

Advertisement

ಮೂಡಿಗೆರೆ ಪಟ್ಟಣ ಪಂಚಾಯತ್‌ನ 11 ಸ್ಥಾನಗಳಲ್ಲಿ ಬಿಜೆಪಿ 6, ಕಾಂಗ್ರೆಸ್‌ 4 ಹಾಗೂ 1 ಸ್ಥಾನದಲ್ಲಿ ಜೆಡಿಎಸ್‌ ಗೆದ್ದಿದೆ. ಕೊಪ್ಪ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ 6, ಕಾಂಗ್ರೆಸ್‌ 4 ಹಾಗೂ 1 ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ನರಸಿಂಹರಾಜಪುರ ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್‌ 9 ಹಾಗೂ 2 ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಶೃಂಗೇರಿ ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ 7, ಕಾಂಗ್ರೆಸ್‌ 3 ಹಾಗೂ 1 ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.

ಕಳೆದ ಅವಧಿಯಲ್ಲಿ ಈ 5 ನಗರ ಸ್ಥಳೀಯ ಸಂಸ್ಥೆಗಳ ಒಟ್ಟಾರೆ 68 ಸ್ಥಾನಗಳಲ್ಲಿ ಬಿಜೆಪಿ 30, ಕಾಂಗ್ರೆಸ್‌ 27, ಜೆಡಿಎಸ್‌ 8 ಹಾಗೂ 2 ಸ್ಥಾನಗಳನ್ನು ಪಕ್ಷೇತರ ಅಭ್ಯರ್ಥಿಗಳು ಗೆದ್ದುಕೊಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡು 27ಕ್ಕೆ ಇಳಿದಿದ್ದರೆ, ಕಾಂಗ್ರೆಸ್‌ ಕಳೆದ ಅವಧಿಯಂತೆಯೇ ಈ ಬಾರಿಯೂ 27 ಸ್ಥಾನಗಳನ್ನು ಗೆದ್ದಿದೆ. ಜೆಡಿಎಸ್‌ 1 ಸ್ಥಾನವನ್ನು ಕಳೆದುಕೊಂಡು 7ಕ್ಕೆ ಇಳಿದಿದ್ದರೆ ಪಕ್ಷೇತರರು ಕಳೆದ ಬಾರಿಗಿಂತ 4 ಸ್ಥಾನಗಳನ್ನು ಹೆಚ್ಚಾಗಿ ಗೆದ್ದು 6 ಸ್ಥಾನಕ್ಕೆ ಏರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next