Advertisement

ಶೃಂಗೇರಿಯಲ್ಲಿ ಬಿಜೆಪಿಗೆ ಸಿಗುತ್ತಾ ಮುನ್ನಡೆ?

12:37 PM Apr 28, 2019 | Team Udayavani |

ಚಿಕ್ಕಮಗಳೂರು: ಮಲೆನಾಡು ಪ್ರದೇಶ ವಾಗಿದ್ದು, ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿ ಹೊಂದಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರವು 3 ತಾಲೂಕುಗಳನ್ನು ಒಳಗೊಂಡ ಕ್ಷೇತ್ರವಾಗಿದ್ದು, ಕಳೆದ ಲೋಕಸಭಾ ಚುನಾವಣೆಯಂತೆಯೇ ಈ ಬಾರಿಯೂ ಅತೀ ಹೆಚ್ಚು ಮತದಾನವಾಗಿದೆ.

Advertisement

ಶೃಂಗೇರಿ, ನರಸಿಂಹರಾಜಪುರ, ಕೊಪ್ಪ ತಾಲೂಕುಗಳು ಹಾಗೂ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯನ್ನು ಒಳಗೊಂಡಿರುವ ವಿಧಾನಸಭಾ ಕ್ಷೇತ್ರ ಇದಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.77.22 ರಷ್ಟು ಮತದಾನವಾಗಿತ್ತು. ಈ ಬಾರಿಯೂ ಇಲ್ಲಿ ಶೇ.78.86ರಷ್ಟು ಮತದಾನವಾಗಿದ್ದು, ಇಡೀ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತದಾನವಾಗಿರುವ ಕ್ಷೇತ್ರ ಇದಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಅಭ್ಯರ್ಥಿಗಿಂತ ಸುಮಾರು 17 ಸಾವಿರದಷ್ಟು ಮತಗಳನ್ನು ಹೆಚ್ಚಾಗಿ ಪಡೆದುಕೊಂಡಿದ್ದರು. ಈ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಯೇ ಮೈತ್ರಿ ಪಕ್ಷದ ಅಭ್ಯರ್ಥಿಗಿಂತ ಹೆಚ್ಚಿನ ಮತಗಳನ್ನು ಪಡೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏಕೈಕ ಕಾಂಗ್ರೆಸ್‌ ಶಾಸಕರು ಇರುವುದು ಈ ಕ್ಷೇತ್ರದಲ್ಲಿ. ಅದನ್ನು ಹೊರತುಪಡಿಸಿದರೆ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕು ಪಂಚಾಯತ್‌ಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಜಿಲ್ಲಾ ಪಂಚಾಯತ್‌ ಸದಸ್ಯರುಗಳೂ ಹೆಚ್ಚಿನವರು ಬಿಜೆಪಿಯವರೇ ಆಗಿದ್ದಾರೆ. ಜಿಲ್ಲಾ ಪಂಚಾಯತ್‌ ಹಾಲಿ ಅಧ್ಯಕ್ಷರು ಸಹ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರೇ ಆಗಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಕರಂದ್ಲಾಜೆ ವಿರುದ್ಧ ತೀವ್ರ ಅಸಮಾಧಾನವಿತ್ತು. ಅದರೊಂದಿಗೇ ಜಿಲ್ಲೆಯ ಉಳಿದೆಡೆಗಳಿಗಿಂತಲೂ ಈ ಕ್ಷೇತ್ರದಲ್ಲಿ ಮೋದಿ ಹವಾ ತೀವ್ರವಾಗಿ ಇತ್ತು. ಇದು ಬಿಜೆಪಿಗೆ ಹೆಚ್ಚಿನ ಅನುಕೂಲಕರವಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಂಸದರು ಹೆಚ್ಚಾಗಿ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ, ಪ್ರಮುಖ ಸಮಸ್ಯೆಯಾಗಿದ್ದ ಅಡಕೆ ಬೆಳೆಗಾರರ ಸಮಸ್ಯೆಗೆ ಸಂಸದರು ಸ್ಪಂದಿಸಿಲ್ಲ ಎಂಬ ದೂರುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿದ್ದಾದರೂ ಮೈತ್ರಿ ಪಕ್ಷದ ಅಭ್ಯರ್ಥಿಗೆ ಇದು ಮತವಾಗಿ ಪರಿವರ್ತನೆಯಾಗಿರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಕ್ಷೇತ್ರದಲ್ಲಿ ಸಂಸದರಿಂದ ಹೆಚ್ಚಿನ ಕೆಲಸವಾಗದಿದ್ದರೂ ಸಹ ದೇಶಕ್ಕೆ ಈಗ ಸಮರ್ಥ ನಾಯಕತ್ವದ ಅವಶ್ಯಕತೆ ಇದೆ. ಸದ್ಯದ ಪರಿಸ್ಥಿತಿಯಲ್ಲಿ ಸಮರ್ಥ ನಾಯಕತ್ವ ನೀಡುವ ಅರ್ಹತೆ ಇರುವವರು ನರೇಂದ್ರ ಮೋದಿ ಅವರು ಮಾತ್ರ. ಹಾಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದೇವೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.

Advertisement

ಮೈತ್ರಿ ಪಕ್ಷದವರು ಒಗ್ಗಟ್ಟಾಗಿ ಚುನಾವಣೆ ಎದುರಿಸಿದರೂ ಸಹ ಹೆಚ್ಚಿನ ಮತಗಳನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ದೊರೆಯುತ್ತದೆ ಎಂದು ಹೇಳಲಾಗುತ್ತಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಿಂತಲೂ ನನಗೆ ಹೆಚ್ಚಿನ ಮತಗಳು ದೊರೆಯಲಿವೆ. ಸಂಸದರ ವಿರುದ್ಧ ಇದ್ದ ಅಸಮಾಧಾನ ನಮಗೆ ಅನುಕೂಲಕರವಾಗಿ ಪರಿಣಮಿಸಿದೆ. ಶಾಸಕನಾಗಿ, ಸಚಿವನಾಗಿ ನಾನು ಉಡುಪಿಯಲ್ಲಿ ಮಾಡಿರುವ ಕೆಲಸವನ್ನು ಜನತೆ ಗುರುತಿಸಿದ್ದಾರೆ. ಈ ಕ್ಷೇತ್ರದಲ್ಲಿ ತುಳು ಭಾಷಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದೂ ನನಗೆ ಹೆಚ್ಚಿನ ಮತ ಪಡೆದುಕೊಳ್ಳಲು ಸಹಕಾರಿಯಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದ ಜನಪರ ಯೋಜನೆಗಳು ಹಾಗೂ ಹಾಲಿ ಸಮ್ಮಿಶ್ರ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳು ನಮಗೆ ಹೆಚ್ಚಿನ ಮತ ಪಡೆದುಕೊಳ್ಳಲು ಕಾರಣವಾಗಿದೆ.
•ಪ್ರಮೋದ್‌ ಮಧ್ವರಾಜ್‌,
ಮೈತ್ರಿ ಪಕ್ಷದ ಅಭ್ಯರ್ಥಿ.

ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕ್ಷೇತ್ರದಲ್ಲಿ ಯಾವುದೇ ಕೆಲಸವನ್ನೂ ಮಾಡಿಲ್ಲ. ಈ ಬಗ್ಗೆ ಅವರ ಪಕ್ಷದಲ್ಲಿಯೇ ಅಸಮಾಧಾನವಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಒತ್ತುವರಿ ತೆರವಿನ 192/ಎ ಕಾಯಿದೆ ಈ ಭಾಗದ ಜನರಿಗೆ ಮರಣಶಾಸನವಾಗಿ ಪರಿಣಮಿಸಿದೆ. ಜೊತೆಗೆ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಹಿಂದುತ್ವದ ಹೆಸರಿನಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ರಾಮಮಂದಿರವನ್ನೂ ನಿರ್ಮಿಸಲಿಲ್ಲ. ದತ್ತಪೀಠ ಸಮಸ್ಯೆ ಬಗೆಹರಿಸಲಿಲ್ಲ. ಇದು ಚುನಾವಣೆಯಲ್ಲಿ ಮೈತ್ರಿ ಪಕ್ಷಕ್ಕೆ ಅನುಕೂಲ ಮಾಡಿಕೊಟ್ಟಿದೆ. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳನ್ನು ಮುಂದುವರೆಸಿದ್ದಲ್ಲದೆ, ಹಾಲಿ ಸಮ್ಮಿಶ್ರ ಸರ್ಕಾರವು ಮಾಡಿರುವ ರೈತರ ಸಾಲಮನ್ನಾ ಮೈತ್ರಿ ಪಕ್ಷಕ್ಕೆ ಅನುಕೂಲಕರವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಬಿಜೆಪಿಗಿಂತಲೂ ಹೆಚ್ಚಿನ ಮತಗಳನ್ನು ಪಡೆದುಕೊಳ್ಳುವುದು ಖಚಿತ.
ಟಿ.ಡಿ.ರಾಜೇಗೌಡ, ಶೃಂಗೇರಿ ಶಾಸಕ.

ಕಳೆದ ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ ಮತಗಳನ್ನು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪಡೆದುಕೊಳ್ಳಲಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 15 ಸಾವಿರ ಮತಗಳು ಮೈತ್ರಿ ಪಕ್ಷದ ಅಭ್ಯರ್ಥಿಗಿಂತ ಹೆಚ್ಚಾಗಿ ಬರಲಿದೆ. ಸಂಸದರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು, ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕು. ದೇಶ ಹಾಗೂ ದೇಶದ ಭದ್ರತೆಯ ದೃಷ್ಟಿಯಿಂದ ಮೋದಿ ಅವರೇ ಅವಶ್ಯಕ ಎಂಬುದನ್ನು ಜನತೆ ಮನಗಂಡಿದ್ದಾರೆ. ಅದರೊಟ್ಟಿಗೆ ವಿಪಕ್ಷಗಳಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬುದೇ ತಿಳಿದಿಲ್ಲ. ನೆಗೆಟೀವ್‌ ವಿಚಾರಗಳಿಗಿಂತಲೂ ಪಾಸಿಟೀವ್‌ ವಿಚಾರಗಳ ಆಧಾರದಲ್ಲಿಯೇ ಜನತೆ ಬಿಜೆಪಿ ಬೆಂಬಲಿಸಿದ್ದಾರೆ. ಈ ಬಾರಿಯ ಚುನಾವಣೆ ಏಕಪಕ್ಷೀಯವಾಗಿ ನಡೆದಿದೆ. ಕಳೆದ ಬಾರಿಗಿಂತ ಅತೀ ಹೆಚ್ಚು ಮತಗಳ ಅಂತರದಲ್ಲಿ ನಮ್ಮ ಅಭ್ಯರ್ಥಿಯ ಗೆಲುವು ನಿಶ್ಚಿತ.
ಡಿ.ಎನ್‌.ಜೀವರಾಜ್‌,
ಜಿಲ್ಲಾ ಬಿಜೆಪಿ ಅಧ್ಯಕ್ಷ.

•ಎಸ್‌.ಕೆ.ಲಕ್ಷ್ಮೀಪ್ರಸಾದ್‌

Advertisement

Udayavani is now on Telegram. Click here to join our channel and stay updated with the latest news.

Next