Advertisement

ಬಡವರ ಯೋಜನೆ ಅನುಷ್ಠಾನಕ್ಕೆ ಮುಂದಾಗಿ

01:15 PM Jan 25, 2020 | Team Udayavani |

ಚಿಕ್ಕಮಗಳೂರು: ಬಡವರ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಸಾಮಾನ್ಯರನ್ನು ಸಂಘಟಿಸಿ ಯೋಜನೆಗಳ ಅರಿವು ಮೂಡಿಸಿ ಅನುಷ್ಠಾನಕ್ಕೆ ತರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವಸಂಸ್ಥೆಯಿಂದ ಅನುಮೋದನೆ ಪಡೆದಿರುವ ಸುಸ್ಥಿರ ಅಭಿವೃದ್ಧಿ ಯೋಜನೆಯಡಿ ಪೌಷ್ಟಿಕ ಆಹಾರ, ವಸತಿ, ಕುಡಿಯುವ ನೀರು, ಶಾಲೆ, ಅಂಗನವಾಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು 2030 ರೊಳಗೆ ಜನಸಾಮಾನ್ಯರಿಗೆ ತಲುಪಿಸುವ ಗುರಿ ಹೊಂದಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ರಾಜ್ಯದಲ್ಲಿರುವ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ
ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದಿದೆ. ಮನೆ ನಿರ್ಮಾಣದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಬಸವ ವಸತಿ ಯೋಜನೆಯಡಿ 11,306 ಫಲಾನುಭವಿಗಳನ್ನು ಗುರುತಿಸಿದ್ದು, 5,200 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮನೆ ನಿಮಾರ್ಣ ಕಾರ್ಯ ಪ್ರಗತಿಯಲ್ಲಿದ್ದು, 2,774 ಮನೆಗಳ ನಿರ್ಮಾಣ ಬಾಕಿ ಉಳಿದಿದೆ. ಗ್ರಾಮೀಣ ಭಾಗದ ಜನರಿಗಾಗಿ ಡಾ| ಬಿ.ಆರ್‌.ಅಂಬೇಡ್ಕರ್‌ ನಿವಾಸ್‌ ಯೋಜನೆಯಡಿ 4,113 ಫಲಾನುಭವಿಗಳಲ್ಲಿ 1,655 ಫಲಾನುಭವಿಗಳ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. 1,447 ಮನೆಗಳ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ಪ್ರಾರಂಭವಾಗಬೇಕು ಎಂದು ಸೂಚಿಸಿದರು.

ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ 306 ಜನರು ಮನೆಗಳ ನಿರ್ಮಾಣದ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದು, 206 ಫಲಾನುಭವಿಗಳ ಮನೆ ನಿರ್ಮಾಣವಾಗಿವೆ. 77 ಮನೆಗಳ ನಿರ್ಮಾಣ ಕಾರ್ಯವನ್ನು ಮಾರ್ಚ್‌ 31 ರೊಳಗೆ ಪೂರ್ಣಗೊಳಿಸಬೇಕು. ನಗರ ಭಾಗದಲ್ಲಿ ಡಾ| ಬಿ.ಆರ್‌.ಅಂಬೇಡ್ಕರ್‌ ನಿವಾಸ್‌ ಯೋಜನೆಯಡಿ 359 ಮನೆಗಳಲ್ಲಿ 178 ಮನೆಗಳು ನಿರ್ಮಾವಾಗಿದ್ದು, 111 ಮನೆಗಳ ನಿರ್ಮಾಣ ಶೀಘ್ರವಾಗಿ ಮುಗಿಸಬೇಕು ಎಂದು ತಿಳಿಸಿದರು. ವಾಜಪೇಯಿ ವಸತಿ ಮತ್ತು ಹೆಚ್ಚುವರಿ ಯೋಜನೆಯಡಿ ಜಿಲ್ಲೆಯಲ್ಲಿ 425 ಮನೆಗಳ ನಿರ್ಮಾಣವಾಗಬೇಕಿದೆ. ಆದರೆ, 202 ಮನೆಗಳ ನಿರ್ಮಾಣ ಮಾತ್ರ ಪೂರ್ಣಗೊಂಡಿದೆ. ಇನ್ನೂ 122 ಫಲಾನುಭವಿಗಳ ಮನೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ದೇವರಾಜ್‌ ಅರಸು ವಸತಿ ಯೋಜನೆಯಲ್ಲಿ 68 ಮನೆಗಳ ನಿರ್ಮಾಣ ಅಗತ್ಯವಿದ್ದು, 22 ಮನೆಗಳು ಪೂರ್ಣಗೊಂಡಿವೆ. ತರೀಕೆರೆ ಭಾಗದಲ್ಲಿ ಬಾಕಿ ಉಳಿದಿರುವ 13 ಮನೆಗಳ ನಿರ್ಮಾಣವನ್ನು ಅದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.

ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಂಪೂರ್ಣ, ಭಾಗಶಃ ನಾಶವಾಗಿರುವ ಮನೆಗಳ ಪುನರ್‌ ನಿರ್ಮಾಣ ಮತ್ತು ದುರಸ್ತಿಗಾಗಿ ಸರ್ಕಾರ ನಿಗ ಪಡಿಸಿದ ದರದಲ್ಲಿ ಮರಳನ್ನು ಒಂದು ವಾರದೊಳಗೆ ಅಗತ್ಯವಿರುವ ಪ್ರದೇಶಗಳಿಗೆ ಪೂರೈಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗೆ ಸೂಚಿಸಿದರು. ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಮನೆ ಕಳೆದುಕೊಂಡವರ ಮನೆ ನಿರ್ಮಾಣಕ್ಕೆ ಮುಂದಾಗಬೇಕು. ಮನೆ ನಿರ್ಮಾಣಕ್ಕೆ ಮರಳಿನ ಕೊರತೆಯಾಗದಂತೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಕಾರ್ಯನಿರ್ವಾಹಕ ಅಧಿಕಾರಿ ಮತ್ತು ತಹಶೀಲ್ದಾರ್‌ಗಳು ಕ್ರಮ ಕೈಗೊಳ್ಳಬೇಕು. ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕಾಗಿ ಮರಳಿನ ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಪ್ರತಿ ಮನೆಗಳ ನಿರ್ಮಾಣಕ್ಕೆ ಮರಳು ಸಮರ್ಪಕ ರೀತಿಯಲ್ಲಿ ಪೂರೈಕೆಯಾಗಬೇಕು. ಜಿಲ್ಲೆಯಲ್ಲಿ ಮಳೆಯಿಂದಾಗಿ ಒಟ್ಟು 1,013 ಮನೆಗಳಲ್ಲಿ ನಿರ್ಮಾಣವಾಗಬೇಕು. ಸಂಪೂರ್ಣ ಮತ್ತು ಭಾಗಶಃ ನಾಶವಾಗಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರವಾಗಿ ಪ್ರಾರಂಭಿಸಬೇಕೆಂದು ಹೇಳಿದರು.

Advertisement

ತಹಶೀಲ್ದಾರ್‌ಗಳು, ಬ್ಯಾಂಕ್‌ ಅಧಿಕಾರಿಗಳು ಮತ್ತು ಕ್ಷೇತ್ರ ಸಮೀಕ್ಷೆ ಅಧಿಕಾರಿಗಳು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಶಿಬಿರಗಳನ್ನು ನಡೆಸುವ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಿ ಯೋಜನೆಗಳ ಪ್ರಯೋಜನ ಪಡೆಯುವಂತೆ ಮಾಡಬೇಕು. ಬಾಬಾಬುಡನ್‌ ಗಿರಿ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಮುಂಬರುವ ಮೂರು ತಿಂಗಳಲ್ಲಿ ರಸ್ತೆ ಬದಿಗಳಲ್ಲಿ ಮರಗಳನ್ನು ಬೆಳೆಸುವ ಕಾರ್ಯಕ್ಕೆ ಚಾಲನೆ ನೀಡಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಮಾತನಾಡಿ, ಮಳೆಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳಲ್ಲಿ ಮೂಡಿಗೆರೆಯಲ್ಲಿ 358 ಮನೆಗಳಲ್ಲಿ 9 ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯವನ್ನು ಇನ್ನೆರಡು ದಿನಗಳಲ್ಲಿ ಪ್ರಾರಂಭಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿ ಮತ್ತು ಮಾಸಾಶನಕ್ಕಾಗಿ ಬಡವರು ಅರ್ಜಿ ಸಲ್ಲಿಸುತ್ತಿದ್ದು, ಅವರಿಗೆ ನೀಡಬೇಕಾದ ಪಿಂಚಣಿ ಹಾಗೂ ಮಾಸಾಶನ ಪಾವತಿಯಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ ಸಕಾಲದಲ್ಲಿ ಫಲಾನುಭವಿಗಳಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕೆಂದು ಹೇಳಿದರು.

ಅಮೃತ್‌ ಯೋಜನೆಯಡಿ 30,336 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲು ಗುರಿ ಹೊಂದಲಾಗಿದೆ. 15,956 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಉಳಿದ ಮನೆಗಳಿಗೆ ಮಾರ್ಚ್‌ ಅಂತ್ಯದೊಳಗೆ ನೀರಿನ ಸಂಪರ್ಕ ಕಲ್ಪಿಸಿಕೊಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ವಸತಿ ಯೋಜನೆಗಳಡಿ ಎಲ್ಲಾ ಬ್ಯಾಂಕುಗಳಲ್ಲಿ ವಸತಿ ನಿರ್ಮಾಣಕ್ಕಾಗಿ ಶೇ.80 ರಷ್ಟು ಸಾಲ ಸೌಲಭ್ಯ ನೀಡುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ, ಅಪರ ಜಿಲ್ಲಾಧಿ ಕಾರಿ ಡಾ| ಕುಮಾರ್‌, ಉಪ ವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮತ್ತು ನಗರಸಭೆ ಪೌರಾಯುಕ್ತ ಚಂದ್ರಶೇಖರ್‌, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ರಾಜ್‌ ಗೋಪಾಲ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್‌, ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next