Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸರ್ವ ಸನ್ನದ್ಧ

01:11 PM Jun 24, 2020 | Naveen |

ಚಿಕ್ಕಮಗಳೂರು: ಜೂ.25ರಿಂದ ಜು.4ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಕೋವಿಡ್  ಭೀತಿಯ ನಡುವೆ ಜಿಲ್ಲೆಯಲ್ಲಿ 13,924 ವಿದ್ಯಾರ್ಥಿಗಳು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತವಾಗಿ ಸಿದ್ಧಪಡಿಸಲಾಗಿದೆ.

Advertisement

32 ಸರ್ಕಾರಿ ಶಾಲೆಗಳ ಪರೀಕ್ಷಾ ಕೇಂದ್ರ, 7ಅನುದಾನಿತ ಪ್ರೌಢಶಾಲೆಗಳ ಪರೀಕ್ಷಾ ಕೇಂದ್ರ ಹಾಗೂ 19 ಅನುದಾನರಹಿತ ಪರೀಕ್ಷಾ ಸೇರಿದಂತೆ 58 ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾದ್ಯಂತ ತೆರೆಯಲಾಗಿದೆ. 2 ಕೇಂದ್ರಗಳಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, 9 ಕೇಂದ್ರಗಳಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, 27ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ 20 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಹಾಗೂ ನಗರ ವ್ಯಾಪ್ತಿಯಲ್ಲಿ 23 ಮತ್ತು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ 35 ಕೇಂದ್ರಗಳನ್ನು ತೆರೆಯಲಾಗಿದೆ. 58 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕೋವಿಡ್  ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಗಳನ್ನು ರಾಸಾಯನಿಕ ಬಳಸಿ ಶುಚಿಗೊಳಿಸಲಾಗಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ 746 ಕೊಠಡಿ ಮೇಲ್ವಿಚಾರಕರು, 58 ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತದಳ, ಮುಖ್ಯ ಅಧೀಕ್ಷಕರು, ಮೊಬೈಲ್‌ ಸ್ವಾಧೀನಾಧಿಕಾರಿಗಳು, ಅಂತರ ಇಲಾಖಾ ವೀಕ್ಷಕರು, 8ಬ್ಲಾಕ್‌ ನೋಡಲ್‌ ಅಧಿಕಾರಿಗಳು, 5 ಜಿಲ್ಲಾ ಜಾಗೃತ ದಳದ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸಲಿದೆ.

ಸ್ಕೌಟ್ಸ್‌ ಮತ್ತು ಗೈಡ್ಸ್‌ ಘಟಕದಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ಜನ ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಹಾಯಕ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಎನ್‌-95 ಮಾಸ್ಕ್ ಗಳನ್ನು  ಈಗಾಗಲೇ ವಿತರಣೆ ಮಾಡಲಾಗಿದೆ. ಪರೀಕ್ಷಾ  ಕೇಂದ್ರದ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಕೋವಿಡ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು ಬೇಕಾದ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.

ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್‌ ಒಳಪಡಿಸಲು ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಯಲ್ಲಿ ದೇಹದ ಉಷ್ಣತೆ ಹೆಚ್ಚಿರುವರು, ಜ್ವರ, ಶೀತ, ಕೆಮ್ಮಿನಿಂತಹ ಲಕ್ಷಣವುಳ್ಳ ಮಕ್ಕಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇರುವ ಸ್ಥಳದಲ್ಲೇ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಿರುವುದರಿಂದ ವಲಸೆ ಕಾರ್ಮಿಕರು, ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷಾ  ಕೇಂದ್ರವನ್ನು ಬಲಿಸಿಕೊಂಡಿರುವ ಹೊರ ಜಿಲ್ಲೆಯ 553 ವಿದ್ಯಾರ್ಥಿಗಳು ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ ಜಿಲ್ಲೆಯ 502 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಜಿಲ್ಲೆಯಲ್ಲಿ ತೆರೆಯಲಾಗಿರುವ 58 ಪರೀಕ್ಷಾ ಕೇಂದ್ರಗಳಲ್ಲೂ ಸೋಂಕು ನಿವಾರಕ ಬಳಸಿ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮಾಸ್ಕ್ಗಳನ್ನು ವಿತರಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಿದ್ಧತೆ ಹಾಗೂ ಪರೀಕ್ಷಾ  ಕೇಂದ್ರದ ಪ್ರತಿ ಕೊಠಡಿಯಲ್ಲೂ ಸ್ಯಾನಿಟೈಸರ್‌ ಇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಒಂದು ಮೀಟರ್‌ ಅಂತರದಲ್ಲಿ ಡೆಸ್ಕ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತ್ಯೇಕ ಕೊಠಡಿಗಳಲ್ಲಿ ಆರು ಅಡಿ ಸಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೊಠಡಿ, ಶೌಚಾಲಯಗಳನ್ನು ಬೇರೆ ಇಲಾಖೆಗಳ ಸಹಕಾರ ಪಡೆದುಕೊಂಡು ಸ್ಯಾನಿಟೈಸರ್‌ ಮಾಡಿಸಲಾಗಿದೆ.

Advertisement

ಪ್ರತಿ ಪರೀಕ್ಷೆ ಮುಗಿದ ನಂತರ ಕೊಠಡಿ ಶುಚಿಗೊಳಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ವಿದ್ಯಾರ್ಥಿಗೆ 2 ಕಾಟನ್‌ ಮಾಸ್ಕ್ ಗಳ  ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ 50 ಎನ್‌-95 ಮಾಸ್ಕ್ ಗಳನ್ನು  ಕಾಯ್ದಿರಿಸಿಕೊಳ್ಳುವ ವ್ಯವಸ್ಥೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಪ್ರತಿ ತಾಲೂಕಿಗೊಂದರಂತೆ ತುರ್ತು ಚಿಕಿತ್ಸ ವಾಹನವನ್ನು ಕಾಯ್ದಿರಿಸಲಾಗಿದೆ. ಪರೀಕ್ಷಾ  ಕೇಂದ್ರಗಳಲ್ಲಿ ಪೋಷಕರ ದಟ್ಟಣೆ ನಿಯಂತ್ರಿಸಲು ಧ್ವನಿವರ್ಧಕ ಮೂಲಕ ಪರೀಕ್ಷೆಗೂ ಮೊದಲು ಮಾಹಿತಿ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೆರೆತರಲು 60 ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ರೂಟ್‌ ಬಸ್‌ಗಳಲ್ಲಿ ವಿದ್ಯಾರ್ಥಿ ಪ್ರಯಾಣ ಮಾಡಿದರೆ ವಿದ್ಯಾರ್ಥಿ ಬಳಿಯಿರುವ ಪ್ರವೇಶ ಪತ್ರವನ್ನು ತೊರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣ ಬೆಳೆಸಬಹುದಾಗಿದೆ. 86 ಖಾಸಗಿ ಬಸ್‌ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಜಿಲ್ಲೆಯ 130 ಮಾರ್ಗಗಳಲ್ಲಿ 432 ಪಿಕ್‌ಅಪ್‌ ಕೇಂದ್ರಗಳನ್ನು ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೋವಿಡ್ ಸೋಂಕಿನ ಸಂಕಷ್ಟ ಕಾಲದಲ್ಲಿ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೇ ಮನೆಯಿಂದ ಹೊರಡುವಾಗ ಇಲಾಖೆಯಿಂದ ನೀಡಿರುವ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಧೈರ್ಯವಾಗಿ ಪರೀಕ್ಷೆ ಬರೆಯಲು ಮುಂದಾಗಬೇಕು. ಜಿಲ್ಲಾಡಳಿತ ಜೂ.25 ರಿಂದ ಜು.04 ರ ವರೆಗೆ ನಡೆಯಲಿರುವ ಪರೀಕ್ಷೆಯ ಪರೀಕ್ಷಾ ಕೆಂದ್ರಗಳಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.
ಡಾ| ಬಗಾದಿ ಗೌತಮ್‌,
ಜಿಲ್ಲಾಧಿಕಾರಿ

ಸರ್ಕಾರದ ನಿರ್ದೇಶನದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಜಿಲ್ಲಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಬೇಕಾಗುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ.
ಸಿ.ನಂಜಯ್ಯ,
ಡಿಡಿಪಿಐ(ಆಡಳಿತ)

Advertisement

Udayavani is now on Telegram. Click here to join our channel and stay updated with the latest news.

Next