Advertisement

ಕೆನ್ನೆಡಲು ಗ್ರಾಮಕ್ಕೆ ವಿವಿ ಸಾಗರದಿಂದ ನೀರು

12:16 PM Jul 10, 2019 | Team Udayavani |

ಚಿತ್ರದುರ್ಗ: ವಾಣಿವಿಲಾಸ ಸಾಗರದಿಂದ ಕೆನ್ನೆಡಲು ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

Advertisement

ತಾಲೂಕಿನ ಕೆನ್ನೆಡಲು ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆಗಾಗಿ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರದಿಂದ ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಸರ್ಕಾರದ ಯೋಜನೆಗಳನ್ನು ಜನರಿಗೆ ನೇರವಾಗಿ ದೊರೆಯುವಂತೆ ಮಾಡುವ ಉದ್ದೇಶದಿಂದ ಗ್ರಾಮ ವಾಸ್ತವ್ಯವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಆಗಮಿಸಿದ್ದು, ಗ್ರಾಮಸ್ಥರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ನಮ್ಮ ನಡೆ ಗ್ರಾಮದ ಕಡೆ, ನಮ್ಮ ನಡೆ ಅಭಿವೃದ್ಧಿ ಕಡೆಗೆ’ ಎಂಬ ಧ್ಯೇಯವಾಕ್ಯದೊಂದಿಗೆ ಜಿಲ್ಲಾ ಮಟ್ಟದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮನೆಬಾಗಿಲಿಗೆ ಬಂದು ಗ್ರಾಮದಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದಾರೆ. ಈ ವೇಳೆ ಹಲವು ಬಗೆಯ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಜನರಿಗೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಗ್ರಾಮ ವಾಸ್ತವ್ಯದಿಂದ ಆಡಳಿತ ಯಂತ್ರವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗಿ ಸರ್ಕಾರದ ವಿವಿಧ ಯೋಜನೆಗಳನ್ನು ಫಲಾನುಭವಿಗಳಿಗೆ ನ್ಯಾಯಬದ್ಧವಾಗಿ ಕಲ್ಪಿಸಲಾಗುತ್ತದೆ. ಗ್ರಾಮೀಣ ಭಾಗದ ಜನರು ಸರ್ಕಾರದ ಸವಲತ್ತು ಪಡೆಯಲು ದಿನಗಟ್ಟಲೆ ಇಲಾಖೆಗೆ ಅಲೆಯಬೇಕಾಗುತ್ತದೆ. ಆದರೂ ಅವರ ಕೆಲಸ ಕಾರ್ಯಗಳು ಪೂರ್ಣಗೊಳ್ಳದೆ ಜಿಗುಪ್ಸೆ ಅನುಭವಿಸಿ ಯೋಜನೆಗಳನ್ನು ಪಡೆಯುವಲ್ಲಿ ವಿಫಲರಾಗುತ್ತಾರೆ. ಅಧಿಕಾರಿಗಳಿಗೆ ತಮ್ಮ ಕೆಲಸಗಳು ತ್ವರಿತ ಗತಿಯಲ್ಲಿ ಆಗುವಂತೆ ಲಂಚವನ್ನು ಕೊಡುವ ಹಂತಕ್ಕೆ ಬಂದು ಭ್ರಷ್ಟಾಚಾರವನ್ನು ಹುಟ್ಟು ಹಾಕುತ್ತಾರೆ. ಇಂತಹ ಸ್ಥಿತಿಯನ್ನು ಹೋಗಲಾಡಿಸಲು ಈ ರೀತಿಯ ಗ್ರಾಮಸಭೆ, ಜನಸಂಪರ್ಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು.

ತಹಶೀಲ್ದಾರ್‌ ಟಿ.ಸಿ. ಕಾಂತರಾಜ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಪಂಚಾಯತ್‌ ಅಧ್ಯಕ್ಷ ಡಿ.ಎಂ ಲಿಂಗರಾಜು, ಗ್ರಾಮ ಪಂಚಾಯತ್‌ ಅಧ್ಯಕ್ಷೆ ವರಲಕ್ಷ್ಮೀ, ತಾಲೂಕು ಪಂಚಾಯತ್‌ ಸದಸ್ಯೆ ಶಿಲ್ಪಾ, ಗ್ರಾಮ ಪಂಚಾಯತ್‌ ಸದಸ್ಯರುಗಳಾದ ಮಹೇಶ್‌, ವೆಂಕಟೇಶ್‌, ಮಚ್ಚೇಂದ್ರ, ಓಬಣ್ಣ, ನಾಗರಾಜ್‌ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next