ಚಿತ್ರದುರ್ಗ: ರೈತರಿಗೆ ಬರ ಪರಿಹಾರ ನೀಡುವುದಕ್ಕಿಂತ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಬೇಕು. ಸರ್ಕಾರ ನೀರು ಕೊಟ್ಟರೆ ರೈತರು ನಿಮಗೆ ಬಂಗಾರದಂತಹ ಬೆಳೆ ಬೆಳೆದು ಕೊಡುತ್ತಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದ್ದಾರೆ.
ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಲಿಂಗೈಕ್ಯ ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ 27ನೇ ಶ್ರದ್ಧಾಂಜಲಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಸರ್ಕಾರ ಜನರ ಕಷ್ಟಕ್ಕೆ ಮರುಗಿ ಕೆಲಸ ಮಾಡಬೇಕು.
ಅವರ ಕಷ್ಟಗಳಿಗೆ ಸ್ಪಂದಿಸಬೇಕು ಎಂದರು. ಜಗಳೂರು ಹಾಗೂ ಭರಮಸಾಗರ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ರಾಜ್ಯ ಸರ್ಕಾರ 1200 ಕೋಟಿ ರೂ. ಬಿಡುಗಡೆ ಮಾಡಿದೆ. ಯೋಜನೆಯ ಶ್ರೇಯಸ್ಸು ಯಾವುದೇ ಒಂದು ಪಕ್ಷಕ್ಕೆ ಸಲ್ಲುವುದಿಲ್ಲ. ಏಕೆಂದರೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಮೂರು ಪಕ್ಷಗಳ ಸರ್ಕಾರದ ಅವ ಧಿಯಲ್ಲಿ ಅನುಮೋದನೆ, ಒಪ್ಪಿಗೆ, ಹಣಕಾಸು ಬಿಡುಗಡೆ ಮಾಡಲಾಗಿದೆ. ಈ ವಿಷಯದಲ್ಲಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ ಶ್ರೀಮಠದ ಬಲಗೈ ಬಂಟನಾಗಿ ಕೆಲಸ ಮಾಡಿದ್ದಾರೆ. ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಂತ್ರಿಯಾಗಲು ಓಡಾಡುತ್ತಿದ್ದರು. ಆದರೆ ನಾವು ಅವರನ್ನು ಕರೆಸಿ ಯೋಜನೆ ಮಂಜೂರಾದರೆ ನಾನು ಮಂತ್ರಿಯಾದಂತೆ ಎಂದು ಯಡಿಯೂರಪ್ಪ ಅವರಿಗೆ ತಿಳಿಸಿ ಎಂದು ಸೂಚಿಸಿದ್ದೆವು. ಯೋಜನೆ
ಮಂಜೂರು ಮಾಡಿಸಿಕೊಂಡು ಬರಲು ಅಡ್ಡ ಬೀಳಿಸಿಕೊಂಡು ಕಳಿಸಿದ್ದೆ. ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಯೋಜನೆಗಾಗಿ ಪೌರೋಹಿತ್ಯ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ತರಳಬಾಳು ಮಠದ ಹಿರಿಯ ಶ್ರೀಗಳು ನಾಲ್ಕು ದಶಕಗಳ ಕಾಲ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಸಮಾಜ ಪರಿವರ್ತನೆಗೆ ಶ್ರಮಿಸಿದ್ದರು. ಸ್ವಾತಂತ್ರ್ಯ ಪೂರ್ವದಲ್ಲೇ ಪ್ರಸಾದ ನಿಲಯದಲ್ಲಿ ಸಹಭೋಜನ ಏರ್ಪಡಿಸಿ ಜಾತ್ಯತೀತರಾಗಿದ್ದಾರೆ ಎಂದು ಸ್ಮರಿಸಿದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಮಾತನಾಡಿ, ದಾವಣಗೆರೆ-ಚಿತ್ರದುರ್ಗ- ತುಮಕೂರು ನೇರ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಆದಷ್ಟು ಬೇಗ ಭೂಸ್ವಾ ಧೀನ ಮಾಡಿಕೊಟ್ಟರೆ ಅನುಕೂಲವಾಗುತ್ತದೆ. ಭೂಸ್ವಾಧೀನ ಆದ ನಂತರ ಕೆಲಸ ಪ್ರಾರಂಭಿಸುತ್ತೇವೆ ಎಂದು ಭರವಸೆ ನೀಡಿದರು. ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಮತ್ತು ಸಂಸದೀಯ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಸಂಸದರಾದ ಜಿ.ಎಂ. ಸಿದ್ದೇಶ್ವರ, ಬಿ.ವೈ. ರಾಘವೇಂದ್ರ, ಎ. ನಾರಾಯಣಸ್ವಾಮಿ, ಶಾಸಕರು, ಅ ಧಿಕಾರಿಗಳು ಪಾಲ್ಗೊಂಡಿದ್ದರು.