Advertisement

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಗಲಾಟೆ: ವಾಗ್ವಾದ, ಕೈ-ಕೈ ಮಿಲಾಯಿಸಿದ ಕಾರ್ಯಕರ್ತರು

11:38 PM May 09, 2023 | Team Udayavani |

ಬೆಂಗಳೂರು: ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಗರದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ, ಗಲಾಟೆ ನಡೆದಿದೆ.

Advertisement

ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದ್ದು, ಕ್ಷೇತ್ರದ ಗಂಗೋತ್ರಿ ಸರ್ಕಲ್‌ ಬಳಿ ಬಿಜೆಪಿ ಕಾರ್ಯಕರ್ತ ಹರಿನಾಥ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬಿಜೆಪಿ ಮಡಿವಾಳ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದೆ. ಆದರೆ, ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಇದುವರೆಗೂ ಬಂಧಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ, ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡು ಬಿಜೆಪಿ ಮುಖಂಡ, ರಾಜ್ಯದ ಚುನಾವಣ ಸಹ ಉಸ್ತುವಾರಿ ಕೆ. ಅಣ್ಣಾಮಲೈ ನೇತೃತ್ವದಲ್ಲಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ಎರಡು ಕಡೆಯವರನ್ನು ಮನವೊಲಿಸಿ ವಾಪಸ್‌ ಕಳುಹಿಸಿದರು.

ಇನ್ನು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಆರ್‌.ವಿ. ದೇವರಾಜ್‌ ಪುತ್ರ ಯುವರಾಜ್‌ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಜೆ.ಸಿ. ರಸ್ತೆಯಲ್ಲಿ ಮುಖಾಮುಖೀಯಾದ ಕೆಜಿಎಫ್ ಬಾಬು ಮತ್ತು ಯುವರಾಜ್‌ ಬೆಂಬಲಿಗರು ಪರಸ್ಪರ ವಾಗ್ವಾದ ನಡೆಸಿದರು. ಒಂದು ಹಂತಕ್ಕೆ ಇಬ್ಬರ ಬೆಂಬಲಿಗರು ಹೊಡೆದಾಟಕ್ಕೂ ಮುಂದಾದರು. ಸ್ಥಳದಲ್ಲಿದ್ದ ಪೊಲೀಸರು ಎರಡು ಕಡೆಯವರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಮತ್ತೂಂದೆಡೆ ಆರ್‌.ಆರ್‌. ನಗರ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೆಟರ್‌ ಮಂಜುಳಾ ಮೇಲೆ ರಾಷ್ಟ್ರೀಯ ಪಕ್ಷದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ನಂದಿನಿ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next