Advertisement

ಮಳೆಗಾಲಕ್ಕೆ ಮುನ್ನ ಗುಂಡಿ ಮುಚ್ಚಿ

10:50 AM Apr 21, 2019 | Lakshmi GovindaRaju |

ಬೆಂಗಳೂರು: ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸೃಷ್ಟಿಯಾಗುವಂತಹ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚುವಂತೆ ಪಾಲಿಕೆಯ ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Advertisement

ಮಳೆಯಿಂದಾಗಿ ನಗರದಲ್ಲಿ ಸಂಭವಿಸುವ ಅನಾಹುತಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಶನಿವಾರ ಸಭೆ ನಡೆಸಿದ್ದು, ಪಾಲಿಕೆಯ ಎಲ್ಲ ವಿಭಾಗಗಳ ಅಧಿಕಾರಿಗಳು ಮಳೆ ಅನಾಹುತಗಳ ತಡೆಗೆ ಕ್ರಮಕೈಗೊಳ್ಳಬೇಕು. ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಅದರಲ್ಲಿಯೂ ಪ್ರಮುಖವಾಗಿ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ವ್ಯಾಪ್ತಿಗೆ ಬರುವ ಆರ್ಟಿರಿಯಲ್‌, ಸಬ್‌ ಆರ್ಟಿರಿಯಲ್‌ ಹಾಗೂ ಮುಖ್ಯರಸ್ತೆಗಳಲ್ಲಿ ಹಾಗೂ ಎಲ್ಲ ವಲಯ ಮತ್ತು ವಾರ್ಡ್‌ಗಳಲ್ಲಿ ಬರುವ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮಕೈಗೊಳ್ಳುವಂತೆ ಆಯುಕ್ತರು ತಿಳಿಸಿದ್ದಾರೆ.

ಮಳೆಗಾಲಕ್ಕೆ ಪಾಲಿಕೆಯಿಂದ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದರಂತೆ ನಗರದ ನೂರು ಕಡೆಗಳಲ್ಲಿ ಎಸ್‌ಎನ್‌ಎನ್‌ಎಂಡಿಸಿ ಸಂಸ್ಥೆಯಿಂದ ಮಳೆಯ ಪ್ರಮಾಣ ಅಳೆಯುವ ಯಂತ್ರಗಳನ್ನು ಅಳವಡಿಸಲಾಗಿದೆ. ಜತೆಗೆ 25 ಕಡೆಗಳಲ್ಲಿ ರಾಜಕಾಲುವೆಗಳಲ್ಲಿಯೂ ಸೆನ್ಸಾರ್‌ಗಳನ್ನು ಅಳವಡಿಸಲಾಗಿದೆ. ಇದರಿಂದ ಯಾವ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ, ನೀರಿನ ಹರಿವಿನ ಮಾಹಿತಿ ತಿಳಿಯಲಿದ್ದು, ಕೂಡಲೇ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಪಾಲಿಕೆಯಲ್ಲಿರುವ 9 ಶಾಶ್ವತ ನಿಯಂತ್ರಣ ಕೊಠಡಿಗಳ ಜತೆಗೆ ಸಾರ್ವಜನಿಕರು ದೂರುಗಳು ಹಾಗೂ ಮಳೆಗಾಲದಲ್ಲಿ ಆಗುವ ತೊಂದರೆಗಳಿಗೆ ಶೀಘ್ರ ಪರಿಹಾರ ನೀಡುವ ಉದ್ದೇಶದಿಂದ 63 ಉಪವಲಯಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ. ಜತೆಗೆ ಅಗತ್ಯ ಸಲಕರಣೆಗಳು, ಯಂತ್ರಗಳು ಹಾಗೂ ಸಿಬ್ಬಂದಿ ನಿಯೋಜಿಸಿಕೊಳ್ಳಲು ಅಲ್ಪಾವಧಿ ಟೆಂಡರ್‌ ಆಹ್ವಾನಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

Advertisement

ಮರ ತೆರವಿಗೆ 28 ತಂಡ: ಪಾಲಿಕೆಯ ಎಂಟು ವಲಯಗಳಲ್ಲಿ ಧರೆಗುರುಳಿದ ಮರಗಳನ್ನು ತೆರವುಗೊಳಿಸಲು 21 ತಂಡಗಳು ಕಾರ್ಯರ್ನಿಹಿಸುತ್ತಿವೆ. ಆದರೆ, ಮಳೆಗಾಲದಲ್ಲಿ ಹೆಚ್ಚಿನ ಮರಗಳು ಉರುಳುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ ಏಳು ತಂಡಗಳನ್ನು ನಿಯೋಜಿಸಿಕೊಳ್ಳಲು ಕ್ರಮಕೈಗೊಳ್ಳುವಂತೆ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜಕಾಲುವೆ ನಿರ್ವಹಣೆಗೆ ವಾಹನ ಲಭ್ಯ: ಮಳೆಗಾಲದಲ್ಲಿ ರಾಜಕಾಲುವೆಗಳ ಉಕ್ಕಿಹರಿದು ಅನಾಹುತ ಸಂಭವಿಸುವಂತಹ ಕೆಲವೊಂದು ಸ್ಥಳಗಳನ್ನು ಮಳೆನೀರುಗಾಲುವೆ ವಿಭಾಗ ಗುರುತಿಸಿದೆ. ಅದರಂತೆ ಕಾಲುವೆಗಳಲ್ಲಿನ ಹೂಳು ತಗೆಯಲು ಹಾಗೂ ಇತರೆ ನಿರ್ವಹಣಾ ಕಾರ್ಯಕ್ಕಾಗಿ ಪ್ರತಿಯೊಂದು ವಲಯದಲ್ಲಿಂದು ಹಿಟಾಚಿ, ಎರಡು ಟ್ರಕ್‌ಗಳು ಹಾಗೂ 156 ಜನ ಕಾರ್ಮಿಕರನ್ನು ನಿಯೋಜಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಳೆಗಾಲದಲ್ಲಿ ನಾಗರಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಪಾಲಿಕೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಅದರಂತೆ ಉಪ ವಿಭಾಗಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆ ಹಾಗೂ ನಗರದ ಎಲ್ಲ ರಸ್ತೆಗಳಲ್ಲಿ ಗುಂಡಿಗಳನ್ನು ಕೂಡಲೇ ಮುಚ್ಚಲು ಸೂಚಿಸಲಾಗಿದೆ.
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

Advertisement

Udayavani is now on Telegram. Click here to join our channel and stay updated with the latest news.

Next