Advertisement

ಆಯುಕ್ತರ ಕ್ರಮಕ್ಕೆ ಸಿಎಂ ಗರಂ

12:53 AM Sep 02, 2019 | Team Udayavani |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿಗೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಅವರ ನಡೆಗೆ ಗರಂ ಆದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆಲ ನಿರ್ದಿಷ್ಟ ಸೂಚನೆ ನೀಡಿ ಪಾಲಿಸುವಂತೆ ತಾಕೀತು ಮಾಡಿದ್ದಾರೆ. ಡಾಲರ್ ಕಾಲೋನಿ ನಿವಾಸಕ್ಕೆ ಅನಿಲ್‌ ಕುಮಾರ್‌ ಅವರನ್ನು ಭಾನುವಾರ ಕರೆಸಿಕೊಂಡ ಯಡಿಯೂರಪ್ಪ ಅವರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

Advertisement

ಈಗಾಗಲೇ ಚಾಲ್ತಿಯಲ್ಲಿರುವ ಮತ್ತು ಅರ್ಧ ಕೆಲಸ ಮುಗಿದಿರುವ ವೈಟ್‌ಟಾಪಿಂಗ್‌ ಕಾಮಗಾರಿಗಳನ್ನೂ ಬಿಬಿಎಂಪಿ ತಡೆಹಿಡಿದಿರುವ ಆಯುಕ್ತರ ಕ್ರಮದ ಬಗ್ಗೆ ಮುಖ್ಯಮಂತ್ರಿಗಳು ಗರಂ ಆದರು ಎನ್ನಲಾಗಿದೆ.  ಒಂದು ಮತ್ತು ಎರಡನೇ ಹಂತದಲ್ಲಿ ನಡೆದ ವೈಟ್‌ಟಾಪಿಂಗ್‌ ಕಾಮಗಾರಿಯಲ್ಲಿ ಅನುದಾನ ದುರುಪಯೋಗವಾಗಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ

ಹಾಗೂ ಮೂರನೇ ಹಂತದ ವೈಟ್‌ಟಾಪಿಂಗ್‌ ಕಾಮಗಾರಿಯನ್ನು ತಡೆಹಿಡಿಯುವಂತೆ ಮುಖ್ಯಮಂತ್ರಿ ಆದೇಶ ಮಾಡಿದ್ದರು. ಆದರೆ, ಚಾಲ್ತಿ ವೈಟ್‌ಟಾಪಿಂಗ್‌ ಕಾಮಗಾರಿಗಳನ್ನೂ ಬಿಬಿಎಂಪಿ ನಿಲ್ಲಿಸಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೂಡಲೇ ಅರ್ಧ ಮುಗಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಅಹವಾಲು ಆಲಿಸಲಿರುವ ಮುಖ್ಯಮಂತ್ರಿ: ಅದೇ ರೀತಿ ಬಿಬಿಎಂಪಿಯ ಏಳು ತ್ಯಾಜ್ಯ ಸಂಸ್ಕರಣಾ ಘಟಕ ಮತ್ತು ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದ ಒಂದು ಉದ್ಯಾನಕ್ಕೆ ವಾರಾಂತ್ಯದಲ್ಲಿ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಯನ್ನು ಖುದ್ದಾಗಿ ಆಲಿಸಲಾಗುವುದು. ಇದಕ್ಕೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಆಯುಕ್ತರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next