Advertisement

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಸಿಎಂ ಸಲಹೆ

07:41 PM Jul 01, 2021 | Team Udayavani |

ಬೆಂಗಳೂರು: ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟರು.

Advertisement

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೇ ಇಂದು ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ನುಡಿದರು.

ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ 31 ಪತ್ರಕತ್ರರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ  5 ಲಕ್ಷ ರೂ.ಗಳ ನೆರವು ನೀಡಲಾಗಿದೆ ಎಂದು ಅವರು ನುಡಿದರು.

ರಾಜ್ಯ ಸರ್ಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು  ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5 ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisement

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್. ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ. ಪಿ.ಎಸ್. ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next