Advertisement

Karnataka: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಕ್ಲಾಸ್‌

01:11 AM Feb 01, 2024 | Team Udayavani |

ಬೆಂಗಳೂರು: ನಮ್ಮ ಸರಕಾರ ದಲ್ಲಿ ಅಧಿಕಾರಿಗಳು ಜಾತ್ಯತೀತತೆ ಮತ್ತು ಸಂವಿಧಾನಕ್ಕೆ ಬದ್ಧರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರಿಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Advertisement

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜರಗಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗ ಬೇಕು. ಸರಕಾರದ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರವಾಗಿ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಹೇಳಿದರು.

ಎಪ್ರಿಲ್‌ ತಿಂಗಳಲ್ಲಿ ಮೇವಿನ ಕೊರತೆ ?
ಮೇವಿನ ಕಿಟ್‌ ವಿತರಣೆಗಾಗಿ ಸಂಪುಟ ಸಭೆಯಲ್ಲಿ 20 ಕೋಟಿ ರೂ ಮೊತ್ತದ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದ ಸಿದ್ದರಾಮಯ್ಯ, ಮಾರ್ಚ್‌ , ಎಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ಸಮಸ್ಯೆ ಎದುರಾಗಬಹುದು. ಇದಕ್ಕೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ರೇಷ್ಮೆ, ತೋಟಗಾರಿಕೆ ಹಾಗೂ ಪಶುಸಂಗೋಪನೆ ಇಲಾಖೆಯ ಫಾರಂಗಳಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕುಡಿಯುವ ನೀರು, ಮೇವು, ಜನರು ಗುಳೆ ಹೋಗದಂತೆ ನೋಡಿಕೊಳ್ಳುವುದು ಹಾಗೂ ಇನ್‌ಪುಟ್‌ ಸಬ್ಸಿಡಿ ವಿತರಣೆ – ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ದಿನಚರಿ ನಿರ್ವಹಣೆ ಮಾಡಬೇಕು. ತಿಂಗಳಿಗೆ ಕನಿಷ್ಠ ಎರಡು ಬಾರಿಯಾದರೂ ತಂತಮ್ಮ ಉಸ್ತುವಾರಿಯ ಜಿಲ್ಲೆಗಳಿಗೆ ಭೇಟಿ ನೀಡುವುದನ್ನು ಕಡ್ಡಾಯ ಮಾಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.

ಅರಣ್ಯದಲ್ಲೇ ಆಹಾರ ಕಲ್ಪಿಸಿ

Advertisement

ಮಾನವ-ವನ್ಯಪ್ರಾಣಿ ಸಂಘರ್ಷದ ಸಮಸ್ಯೆ ಕುರಿತು ಪ್ರಸ್ತಾವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವನ್ಯಪ್ರಾಣಿಗಳು ರೈತರ ಜಮೀನಿಗೆ ನುಗ್ಗಲು ಆಹಾರ ಮತ್ತು ನೀರಿನ ಕೊರತೆಯೇ ಕಾರಣ. ಪ್ರಾಣಿಗಳಿಗೆ ಅರಣ್ಯದೊಳಗೆಯೇ ಆಹಾರ, ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಿದ್ದರಾಮಯ್ಯ ಖಡಕ್‌ ಸೂಚನೆಗಳು
 ಸರಕಾರ ಬಂದು 8 ತಿಂಗಳಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳ ಸಭೆ ನಡೆಸಿ ಮೂರ್‍ನಾಲ್ಕು ತಿಂಗಳ ಹಿಂದೆ ಹಲವು ನಿರ್ದೇಶನ ನೀಡಿದ್ದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ಸಭೆಗೆ ನೀಡಬೇಕು ಎಂದು ಸಭೆಯ ಆರಂಭದಲ್ಲೇ ಸಿಎಂ ಸೂಚಿಸಿದರು.
 ಸರಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವಲ್ಲಿ ನಿಮ್ಮ ಅನುಭವ ಎಷ್ಟು ನೆರವಾಗಿದೆ ಹೇಳಿ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ಪ್ರಶ್ನಿಸಿದರು.
 ಕೆಲವು ಕಡೆ ಸರಕಾರದ ಗ್ಯಾರಂಟಿ ಯೋಜನೆಗಳು ಕೆಲವೇ ಕೆಲವು ಫ‌ಲಾನುಭವಿಗಳಿಗೆ ತಲುಪಲು ಆಗಿರುವ ತಾಂತ್ರಿಕ ಸಮಸ್ಯೆ ಬಗೆಹರಿಸಲು ಇನ್ನೂ ಯಾಕೆ ಆಗಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಸಿಎಂ, ಕೆಲವರಿಗೆ ಮಾತ್ರ ಗ್ಯಾರಂಟಿ ಅನುಕೂಲ ತಲುಪಿಲ್ಲ. ಇವರೇ ಹೆಚ್ಚು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಆದ್ದರಿಂದ ತಾಂತ್ರಿಕ ಸಮಸ್ಯೆಯನ್ನು ಮೊದಲು ಬಗೆಹರಿಸಿ, ಅನರ್ಹ ಫ‌ಲಾನುಭವಿಗಳಿಗೆ ಮಾಹಿತಿ ನೀಡಿ ಅವರ ಅರ್ಜಿಯನ್ನು ತಿರಸ್ಕರಿಸಿ ಎಂದು ಸೂಚನೆ ನಿಡಿದರು.
 ಎಷ್ಟು ಆಸ್ಪತ್ರೆಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೀರಿ? ಡಯಾಲಿಸಿಸ್‌ ಕೇಂದ್ರಗಳಲ್ಲಿ ಸಮರ್ಪಕ ಸೇವೆ ಜನರಿಗೆ ಸಿಗುತ್ತಿದೆಯಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
 ಜನತಾ ಸ್ಪಂದನದಲ್ಲಿ ಬಂದ ಸಮಸ್ಯೆಗಳಿಗೆ ಸಮರೋಪಾದಿಯಲ್ಲಿ ಪರಿಹಾರ ಒದಗಿಸಿಕೊಡಿ ಎನ್ನುವ ಸೂಚನೆ ನೀಡಿದ್ದೆ. ಸದ್ಯ ಸಮಾಧಾನಕರವಾಗಿ ಕೆಲಸ ಮಾಡಿದ್ದೀರಿ. ಇದರ ಪ್ರಮಾಣ ಮತ್ತು ವೇಗವನ್ನು ಇನ್ನಷ್ಟು ಹೆಚ್ಚಿಸಿ.
 ಕೋಲಾರದ ಹಾಸ್ಟೆಲ್‌ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಯಾಕಾಯಿತು? ಮೊದಲೇ ಅಧಿಕಾರಿಗಳು ಈ ಬಗ್ಗೆ ನಿಗಾ ಇಡಬೇಕಿತ್ತು. ನಿಗಾ ವಹಿಸದ ಕಾರಣಕ್ಕೆ ಈ ರೀತಿಯ ಘಟನೆಗಳು ಸಂಭವಿಸುತ್ತದೆ. ಇವು ಮರು ಕಳಿಸಿದರೆ ಸೂಕ್ತ ಕ್ರಮ ಅನಿವಾರ್ಯವಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next