Advertisement

ತೆರಿಗೆ ವಂಚನೆ ತಡೆಗೆ ಮುಖ್ಯಮಂತ್ರಿ ಸೂಚನೆ

10:39 PM Nov 11, 2019 | Lakshmi GovindaRaju |

ಬೆಂಗಳೂರು: ರಾಜ್ಯದಲ್ಲಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.10.3ರಷ್ಟಿದ್ದು, ಈವರೆಗೆ ವಾರ್ಷಿಕ ಗುರಿಯ ಶೇ.56.3 ತೆರಿಗೆ ಸಂಗ್ರಹವಾಗಿದೆ. ತೆರಿಗೆ ವಂಚನೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಹೆಚ್ಚು ತೆರಿಗೆ ಆದಾಯ ಸಂಗ್ರಹಕ್ಕೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೋಮವಾರ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಜಿಎಸ್‌ಟಿ ಹಾಗೂ ಇತರೆ ತೆರಿಗೆ ಸಂಗ್ರಹ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಾಣಿಜ್ಯ ತೆರಿಗೆ ಮೂಲದಿಂದ ಪ್ರಸಕ್ತ ವರ್ಷದಲ್ಲಿ 76,046 ಕೋಟಿ ರೂ. ತೆರಿಗೆ ಸಂಗ್ರಹ ಗುರಿಯಿದ್ದು, ಈವರೆಗೆ 42,823 ಕೋಟಿ ರೂ. ಸಂಗ್ರಹವಾಗಿದೆ. ಒಟ್ಟಾರೆ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.10.3ರಷ್ಟಿದ್ದು, ವಾರ್ಷಿಕ ಗುರಿಯ ಶೇ.56.3 ತೆರಿಗೆ ಸಂಗ್ರಹವಾಗಿದೆ.

ಜಿಎಸ್‌ಟಿ ಮೂಲ ಒಂದರಿಂದಲೇ 33,060 ಕೋಟಿ ರೂ. ಸಂಗ್ರಹವಾಗಿದ್ದು, ಜಿಎಸ್‌ಟಿ ಬೆಳವಣಿಗೆ ದರ ಶೇ.12.2ರಷ್ಟಿದೆ ಎಂದರು. ಇದೇ ವೇಳೆ ಅಧಿಕಾರಿಗಳು, ರಾಜ್ಯದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ 9592 ವ್ಯಾಪಾರ- ವಹಿವಾಟು ಸಂಸ್ಥೆಗಳಲ್ಲಿ ಪರಿಶೀಲನೆ ನಡೆಸಿ 465.3 ಕೋಟಿ ರೂ. ಸಂಗ್ರಹಿಸಲಾಗಿದೆ. ತೆರಿಗೆಯನ್ನು ಸರಿಯಾಗಿ ಪಾವತಿಸದ 74,598 ನೋಂದಣಿ ರದ್ದುಪಡಿಸಲಾಗಿದೆ. 1,08,315 ಆಡಿಟ್‌ ಪ್ರಕರಣಗಳಲ್ಲಿ 833.07 ಕೋಟಿ ರೂ. ಸಂಗ್ರಹ ಮಾಡಲಾಗಿದೆ.

ವರ್ತಕರ ನೋಂದಣಿಗೆ ಸಂಬಂಧಪಟ್ಟಂತೆ 8942 ತಪಾಸಣೆ ಕೈಗೊಳ್ಳಲಾಗಿದ್ದು, 463 ನಕಲಿ ನೋಂದಣಿ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ಸಂಬಂಧ 9 ಮಂದಿಯನ್ನು ಬಂಧಿಸಲಾಗಿದೆ. ದೇಶದಲ್ಲಿ ಜಿಎಸ್‌ಟಿ ಸಂಗ್ರಹದ ಒಟ್ಟು ಸರಾಸರಿಗಿಂತ ಕರ್ನಾಟಕದ ತೆರಿಗೆ ಸಂಗ್ರಹ ಸರಾಸರಿ ಅಧಿಕವಾಗಿದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಕೊಡುಗೆ ಶೇ.9.55ರಷ್ಟಿದ್ದು, ಎರಡನೇ ಸ್ಥಾನದಲ್ಲಿದೆ ಎಂದು ಮಾಹಿತಿ ನೀಡಿದರು.

ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎನ್‌.ಎಸ್‌.ಪ್ರಸಾದ್‌, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀ ನಾರಾಯಣ್‌, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್‌. ಸೆಲ್ವಕುಮಾರ್‌, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನಿತೇಶ್‌ ಪಾಟೀಲ್‌ ಉಪಸ್ಥಿತರಿದ್ದರು.

Advertisement

ನಿಗದಿತ ಗುರಿ ತಲುಪಲು ಶ್ರಮಿಸಿ: ಉತ್ತಮವಾಗಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕು. ತೆರಿಗೆ ವಂಚನೆ, ನಕಲಿ ನೋಂದಣಿ ಇತರೆ ಪ್ರಕರಣಗಳಲ್ಲಿ ತನಿಖೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರಕು ಸಾಗಣೆ ಸಂದರ್ಭದಲ್ಲಿ ತಪಾಸಣೆ ನಡೆಸಿ ಸದಾ ಜಾಗೃತರಾಗಿರಬೇಕು. ಹಣಕಾಸು ವರ್ಷಾಂತ್ಯದೊಳಗೆ ನಿಗದಿತ ಗುರಿ ತಲುಪಲು ಶ್ರಮಿಸಬೇಕು ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದರು. ಅನ್ಯ ರಾಜ್ಯಗಳಿಗಿಂತ ಕರ್ನಾಟಕವು ತೆರಿಗೆ ಸಂಗ್ರಹದಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ ನಾವು ಇನ್ನಷ್ಟು ಸಾಧನೆಗೆ ಪ್ರಯತ್ನಿಸಬೇಕು.

ಭಾರೀ ಮೊತ್ತದ ತೆರಿಗೆ ಪಾವತಿಸುವವರ ಬಗ್ಗೆ ಹೆಚ್ಚು ಗಮನ ಹರಿಸುವ ನಿಟ್ಟಿನಲ್ಲಿ “ಜಿಎಸ್‌ಟಿಪ್ರೊ’ ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇತರೆ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರವೂ ಈ ಬಗ್ಗೆ ಆಸಕ್ತಿ ತೋರಿವೆ. ಛತ್ತೀಸ್‌ಘಡ ಹಾಗೂ ಮಹಾರಾಷ್ಟ್ರದಲ್ಲಿ ಈ ವ್ಯವಸ್ಥೆಯನ್ನು ಯಥಾವತ್ತಾಗಿ ಜಾರಗೊಳಿಸಲಾಗಿದೆ. “ಇ-ವೇ’ ಬಿಲ್‌ ತಪಾಸಣೆಯಲ್ಲೂ ರಾಜ್ಯ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಕವಾಗಿ ತಪಾಸಣೆ ಕೈಗೊಳ್ಳಬೇಕು ಎಂದು ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next