Advertisement

ಕೋವಿಡ್ ಕಂಡು ಬರದ ಹಳ್ಳಿ ಮೇಲೂ ನಿಗಾ ವಹಿಸಿ

06:00 PM May 30, 2021 | Team Udayavani |

ಬೆಳಗಾವಿ: ಇದುವರೆಗೆ ಕೊರೊನಾ ಸೋಂಕು ಕಂಡು ಬರದ ಹಳ್ಳಿಗಳ ಮೇಲೆ ಇನ್ನೂ ಹೆಚ್ಚು ನಿಗಾ ವಹಿಸಿ, ಅಲ್ಲಿ ಯಾವುದೇ ಕಾರಣಕ್ಕೂ ಸೋಂಕು ಬರದಂತೆ ಎಚ್ಚರಿಕೆ ವಹಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಕೋವಿಡ್‌ ಸೋಂಕು ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಬೆಳಗಾವಿ ಸೇರಿ ಐದು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರ ಜತೆ ಶನಿವಾರ ನಡೆಸಿದ “ವಿಡಿಯೋ ಸಂವಾದ’ದಲ್ಲಿ ಮುಖ್ಯಮಂತ್ರಿಗಳು ಕೋವಿಡ್‌ ಸೋಂಕು ತಡೆಗಟ್ಟಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿನ ಸೋಂಕಿತರನ್ನು ಹೋಂ ಐಸೋಲೇಷನ್‌ ಬದಲಾಗಿ ಕಡ್ಡಾಯವಾಗಿ ಕೋವಿಡ್‌ ಆರೈಕೆ ಕೇಂದ್ರಗಳಿಗೆ ದಾಖಲಿಸಬೇಕು ಎಂದರು. ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹರಡಿದ್ದು, ಸದ್ಯಕ್ಕೆ ಸೋಂಕುಗಳ ತೀವ್ರತೆ ಕಡಿಮೆಯಾಗಿದೆ. ಆದರೆ ಇದರಿಂದ ಮೈಮರೆತು ಕೂಡುವ ಹಾಗಿಲ್ಲ. ಹೆಚ್ಚು ಪ್ರಕರಣಗಳಿರುವ ಪ್ರದೇಶಗಳ ಬಗ್ಗೆ ವಿಶೇಷ ಗಮನಹರಿಸಿ ನಿಯಂತ್ರಣ ಮಾಡಬೇಕೆಂದರು.

ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಅಗತ್ಯ ಔಷಧಗಳು ಸಮರ್ಪಕವಾಗಿ ಹಂಚಿಕೆಯಾಗಬೇಕು. ಮುಖ್ಯವಾಗಿ ಇದುವರೆಗೆ ಸೋಂಕಿನಿಂದ ದೂರ ಉಳಿದಿರುವ ಗ್ರಾಮಗಳ ಮೇಲೆ ಹೆಚ್ಚು ನಿಗಾ ವಹಿಸಿ ಅಲ್ಲಿ ಸೋಂಕು ಬರದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ವೇತನಾನುದಾನ ಬಿಡುಗಡೆ ಮಾಡಲಾಗಿದೆ. ಸಾವಿರ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ವೈದ್ಯರ ನಿಯೋಜನೆ ಮಾಡಲಾಗುವುದೆಂದರು. ವಿಡಿಯೋ ಸಂವಾದದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆಳಗಾವಿಯಿಂದ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next