Advertisement

ಮುಂದಿನವಾರ ರಾಷ್ಟ್ರೀಯ ತಂಡದಿಂದ ಭೂಕಂಪನ ಪ್ರದೇಶ ಅಧ್ಯಯನ : ಸಿಎಂ ಭರವಸೆ

06:18 PM Jul 12, 2022 | Team Udayavani |

ಮಡಿಕೇರಿ : ಸರಣಿ ಭೂಕಂಪನದಿಂದ ಆತಂಕಕ್ಕೊಳಗಾಗಿರುವ ಕೊಡಗಿನ ಚೆಂಬು ವಿಭಾಗದ ಅಧ್ಯಯನಕ್ಕಾಗಿ ಮುಂದಿನವಾರ ರಾಷ್ಟ್ರೀಯ ಭೂತಜ್ಞರ ತಂಡ ಆಗಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಭೂಕಂಪನದ ಕಾರಣ ಕಂಡುಕೊಳ್ಳುವ ಉದ್ದೇಶದಿಂದ ರಾಷ್ಟ್ರಮಟ್ಟದ ಪ್ರಮುಖ ಸಂಸ್ಥೆಗಳಿಗೆ ಪತ್ರಬರೆಯಲಾಗಿದೆ. ತಜ್ಞರ ತಂಡ ಮುಂದಿನ ವಾರ ಕೊಡಗಿಗೆ ಆಗಮಿಸಿ ಪರಿಶೀಲನೆ ನಡೆಸಲಿದೆ. ಇದರೊಂದಿಗೆ ಬೆಂಗಳೂರು, ಮೈಸೂರು ವಿಶ್ವ ವಿದ್ಯಾನಿಲಯಗಳ ಭೂ ಶಾಸ್ತ್ರಜ್ಞರು ಆಗಮಿಸಿ ಭೂ ಕಂಪನವಾಗುತ್ತಿರುವ ಜನವಸತಿ ಪ್ರದೇಶದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಭೂಕುಸಿತದ ಬಗ್ಗೆಯೂ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ ಎಂದರು.

ಗುಡ್ಡ ಮತ್ತು ಬರೆಗಳು ಕುಸಿದು ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಮುಂದಿನ ಮಳೆಗಾಲದಲ್ಲಿ ಇದು ಪುನರಾವರ್ತನೆಯಾಗದಂತೆ ವೈಜ್ಞಾನಿಕ ರೂಪದ ತಡೆಗೋಡೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಶೇ.114 ರಷ್ಟು ಮಳೆ :
ಈ ಬಾರಿಯ ಮುಂಗಾರಿನಲ್ಲಿ ಕೇವಲ ಹತ್ತು ದಿನಗಳಲ್ಲಿ ಶೇ.114 ರಷ್ಟು ಮಳೆಯಾದ ಪರಿಣಾಮ ಹಾನಿ ಹೆಚ್ಚಾಗಿದೆ. ಇದುವರೆಗೂ ಸಂಪೂರ್ಣವಾಗಿ ಹಾನಿಗೊಳಗಿರುವುದು ಎರಡು, ತೀವ್ರ ಗತಿಯಲ್ಲಿ ಹಾನಿಯಾಗಿರುವುದು 15, ಭಾಗಶ: ಹಾನಿಗೊಳಗಾಗಿರುವುದು 63 ಮನೆಗಳನ್ನು ಗುರುತಿಸಲಾಗಿದೆ. ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ 5 ಲಕ್ಷ ರೂ., ತೀವ್ರ ಹಾನಿಯಾದ ಮನೆಗಳಿಗೆ 3 ಲಕ್ಷ ರೂ. ಹಾಗೂ ಭಾಗಶ: ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಸೂಚಿಸಲಾಗಿದೆ. ಬಿದ್ದು ಹೋಗಿರುವ ಮನೆಗಳಿಗೆ ತುರ್ತು ವ್ಯವಸ್ಥೆಗಾಗಿ ಈಗಾಗಲೇ 10 ಸಾವಿರ ರೂ.ಗಳನ್ನು ನೀಡಲಾಗಿದೆ ಎಂದರು.

Advertisement

ಇದನ್ನೂ ಓದಿ : ಬೇಡ ಜಂಗಮರಿಗೆ ಎಸ್ಸಿ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹ

195 ಮನೆಗಳ ವಿತರಣೆಗೆ ಕ್ರಮ :
ನಾಲ್ಕು ವರ್ಷಗಳ ಹಿಂದೆ 2018 ಮತ್ತು 19ನೇ ಸಾಲಿನ ಮಹಾಮಳೆೆ ಮತ್ತು ಪ್ರಾಕೃತಿಕ ವಿಕೋಪಗಳಿಂದ ಮನೆಗಳನ್ನು ಕಳೆದುಕೊಂಡವರಿಗೆ ಇಲ್ಲಿಯವರೆಗೆ 830 ಮನೆಗಳನ್ನು ನೀಡಲಾಗಿದೆ. ಇನ್ಫೋಸಿಸ್ ಸಂಸ್ಥೆಯು ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸುತ್ತಿದ್ದು, ಈ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ. ಒಟ್ಟು 195 ಮನೆಗಳನ್ನು ಸಂತಸ್ತರಿಗೆ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಂಬಂಧಿಕರ ಮನೆಯಲ್ಲಿರುವವರಿಗೂ ಪಡಿತರ ವಿತರಣೆ :
ಅಪಾಯದ ಪರಿಸ್ಥಿತಿ ಎದುರಿಸುತ್ತಿರುವ ಕುಟುಂಬಗಳು ಕಾಳಜಿ ಕೇಂದ್ರಗಳಲಿದ್ದು, ಮತ್ತೆ ಕೆಲವರು ತಮ್ಮ ತಮ್ಮ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಇವರೆಲ್ಲರಿಗೂ ಪಡಿತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ಮನೆಗಳಿಗೆ ಮರಳುವ ಸಂದರ್ಭವೂ ಸಂತ್ರಸ್ತರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಟಾಸ್ಕ್ ಫೋರ್ಸ್ :
ಗ್ರಾಮೀಣ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು. ಕೊಡಗು ಜಿಲ್ಲೆಯ ತಹಶೀಲ್ದಾರರ ಖಾತೆಗಳಲ್ಲಿ ತಲಾ 25 ಲಕ್ಷ ರೂ.ಗಳು ಲಭ್ಯವಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ.ಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದರು.

ಹೂಳು ತೆಗೆಯಲು ಕ್ರಮ :
ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಹೂಳು ತುಂಬಿದೆ. ಇದನ್ನು ತೆಗೆಯಲು ಈಗಾಗಲೇ 40 ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, ಕೆಲಸ ಕೂಡಲೇ ಪ್ರಾರಂಭವಾಗುತ್ತದೆ. ಹೂಳು, ಮಣ್ಣು ತೆಗೆಯುವುದು ಹಾಗೂ ಗೋಡೆ ನಿರ್ಮಾಣ ಕಾರ್ಯವನ್ನು ಇದು ಒಳಗೊಂಡಿದೆ. ಕಾವೇರಿ ನದಿಯಲ್ಲಿನ ಹೂಳು ತೆಗೆಯಲು ಕಾವೇರಿ ನೀರಾವರಿ ನಿಗಮಕ್ಕೆ ಸೂಚಿಸಲಾಗಿದೆ. ನೀರು ನಿಲ್ಲದಂತೆ ಮಾಡಲು ಕ್ರಮ ಕೈಗೊಳ್ಳಲು ಹಾಗೂ ಮರದ ದಿಮ್ಮಿಗಳನ್ನು ತಕ್ಷಣ ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಳೆದ ಬಾರಿಯ ದಿಮ್ಮಿಗಳು ಹಾಗೆಯೇ ಉಳಿದುಕೊಂಡಿರುವ ಬಗ್ಗೆ ದೂರುಗಳು ಬಂದಿದ್ದು, ನದಿ ಪಾತ್ರದಲ್ಲಿ ಯಾವುದೇ ಮರದ ದಿಮ್ಮಿಗಳು ಇರಬಾರದು ಎಂದು ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

ಮಳೆಹಾನಿ ಪ್ರದೇಶ ವೀಕ್ಷಣೆ :
ಮಳೆಹಾನಿ ಪ್ರದೇಶಗಳಾದ ಕೊಯನಾಡು, ಸಂಪಾಜೆ ವಿಭಾಗಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಯನಾಡು ಶ್ರೀಗಣಪತಿ ದೇವಾಲಯದ ಸಭಾಂಗಣದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಮಡಿಕೇರಿಯ ಮಲ್ಲಿಕಾರ್ಜುನ ನಗರದಲ್ಲಿ ಮಳೆಯಿಂದ ಕುಸಿತಕ್ಕೆ ಒಳಗಾದ ಗೋಪಾಲ ಎಂಬುವವರ ಮನೆಯನ್ನು ವೀಕ್ಷಿಸಿ ಕುಟುಂಬದವರಿಗೆ 95,100 ರೂ.ಗಳ ಪರಿಹಾರದ ಚೆಕ್ ವಿತರಿಸಿದರು.

ಕುಶಾಲನಗರ ಕೊಪ್ಪ ಮೂಲಕ ಕೊಡಗಿಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕಂದಾಯ ಸಚಿವ ಆರ್.ಅಶೋಕ್, ಸಂಸದ ಪ್ರತಾಪ ಸಿಂಹ, ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚುರಂಜನ್ ಬರಮಾಡಿಕೊಂಡರು

Advertisement

Udayavani is now on Telegram. Click here to join our channel and stay updated with the latest news.

Next