ಔರಾದ: ತಾಲೂಕಿನಲ್ಲಿ ಬಿಜೆಪಿ ಬಲಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು.
ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ಪಟ್ಟಣ ಸೇರಿದಂತೆ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಉತ್ತಮ ಯೋಜನೆಗಳು ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ಜನ ವಿರೋಧಿ ನೀತಿ ಜನರಿಗೆ ತಿಳಿಸಬೇಕು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ಮಾಡಲು ಮುಂದಾಗಬೇಕೆಂದು ಸಲಹೆ ನೀಡಿದರು.
ಕಳೆದ 10 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಿಕೊಡಲಾಗಿದೆ. ಅದರಂತೆ ಗಡಿ ತಾಲೂಕಿನಲ್ಲಿರುವ ಬಡ ಪ್ರತಿಭಾವಂತ ಮಕ್ಕಳಿಗೆ ಪಾಲನೆ ಮಾಡುವುದಲ್ಲದೆ ಉತ್ತಮ ಪ್ರತಿಭಾವಂತಿಗೆ ಸೂಕ್ತ ವೇದಿಕೆ ಸಹ ಕಲ್ಪಿಸಿಕೊಡಲಾಗಿದೆ ಎಂದು ಹೇಳಿದರು.
ಬಿಜೆಪಿ ಸಂಘಟನಾ ಕಾರ್ಯದರ್ಶಿ ದತ್ತು ತುಗಾಂವಕರ್ ಮಾತನಾಡಿ, ಶಾಸಕ ಪ್ರಭು ಚವ್ಹಾಣ ಆಡಳಿತದಲ್ಲಿ ತಾಲೂಕಿನಲ್ಲಿ ನಡೆದ ಅಭಿವೃದ್ದಿ ಕಾಮಗಾರಿಗಳಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ ಎಂದು ಹೇಳಿದರು.
ಮುಖಂಡ ಈಶ್ವರಸಿಂಗ್ ಠಾಕೂರ ಮಾತನಾಡಿ, ನಮ್ಮಲಿರುವ ಆಂತರಿಕ ಭಿನ್ನಾಭಿಪ್ರಾಯ ಮರೆತು ಪಕ್ಷ ಬಲಪಡಿಸುವುದರ ಜತೆಗೆ ಶಾಸಕ ಪ್ರಭು ಚವ್ಹಾಣ ಅವರನ್ನು ಮೂರನೇ ಅವದಿಗೆ ಶಾಸಕರನ್ನಾಗಿ ಆಯ್ಕೆ ಮಾಡುವ ಮಹತ್ವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ಸತೀಶ ಪಾಟೀಲ, ಪ್ರಧಾನ ಕಾರ್ಯದರ್ಶಿ ಅಶೋಕ ಅಲ್ಮಾಜೆ, ಬಂಡೆಪ್ಪ ಕಂಟೆ, ಜಿಪಂ ಸದಸ್ಯ ಮಾರುತಿ ಚವ್ಹಾಣ, ಅನೀಲ ಗುಂಡಪ್ಪ, ಕಾಶಿನಾಥ ಜಾಧವ, ಪ್ರಕಾಶ ಅಲ್ಮಾಜೆ, ಚಂದ್ರಕಾಂತ ಗಡಿಕುಶನೂರ, ಶರಣಬಸವ ಸಾವಳೆ ಭಾಗವಹಿಸಿದ್ದರು.