Advertisement

ಒಳಮೀಸಲಾತಿ ಪರಿಶೀಲನೆಗೆ ಸಮಿತಿ: ಸಿಎಂ ಬೊಮ್ಮಾಯಿ ಜಾಣ್ಮೆಯ ಹೆಜ್ಜೆ

12:07 AM Dec 14, 2022 | Team Udayavani |

ಬೆಂಗಳೂರು: ಒಳಮೀಸಲಾತಿಗೆ ಸಂಬಂಧಿಸಿದ ನ್ಯಾ| ಎ.ಜೆ. ಸದಾಶಿವ ವರದಿ ಜಾರಿಗೆ ದಲಿತ ಸಂಘಟನೆಗಳ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಒಳ ಮೀಸಲಾತಿ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರಕಾರ ಸಚಿವ ಸಂಪುಟದ ಉಪಸಮಿತಿ ರಚಿಸಿದೆ.

Advertisement

ಕಾಂಗ್ರೆಸ್‌ ಪಕ್ಷವು ಒಳಮೀಸಲಾತಿ ವಿಚಾರ ಮುಂದಿಟ್ಟು ಕೊಂಡು ಬಿಜೆಪಿಯನ್ನು ಹಣಿಯಲು ಕಾರ್ಯತಂತ್ರ ರೂಪಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಉಪಸಮಿತಿ ರಚನೆ ಮೂಲಕ ಜಾಣ್ಮೆಯ ಹೆಜ್ಜೆ ಇರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ರಾಜಕೀಯವಾಗಿ ತಿರುಗೇಟು ನೀಡಿದ್ದಾರೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಾಲ್ವರು ಸಚಿವರನ್ನೊಳಗೊಂಡ ಉಪ ಸಮಿತಿ ರಚಿಸಲಾಗಿದೆ. ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಮೀನುಗಾರಿಕೆ ಸಚಿವ ಎಸ್‌. ಅಂಗಾರ, ಪಶು ಸಂಗೋಪನ ಸಚಿವ ಪ್ರಭು ಚವ್ಹಾಣ್‌, ಆರೋಗ್ಯ ಸಚಿವ ಡಾ| ಸುಧಾಕರ್‌ ಉಪ ಸಮಿತಿಯಲ್ಲಿ ಇದ್ದಾರೆ.

ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ)ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ಮಾಡಲು ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಬೇಕು ಎಂದು ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್‌. ಚಂದ್ರಶೇಖರ್‌ ಅಧಿಸೂಚನೆ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next