Advertisement

ಸಮುದಾಯ ಸಹಕಾರದಿಂದ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಸಾಧ್ಯ

02:08 PM Jul 25, 2017 | Girisha |

ಶಿವಮೊಗ್ಗ: ಸಮುದಾಯದ ಸಹಕಾರದಿಂದ ಸರ್ಕಾರಿ ಶಾಲೆಗಳ ಗುಣಮಟ್ಟ ಉತ್ತಮಪಡಿಸಲು ಸಾಧ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ| ವನಿತಾ ತೊರವಿ ಹೇಳಿದರು.

Advertisement

ಸೋಮವಾರ ಜಿಪಂ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶ ಕಲ್ಪಿಸಬೇಕು ಎಂದರು. ಸಮುದಾಯದ ಸಕ್ರಿಯ ಸಹಭಾಗಿತ್ವದಿಂದ ಮಾತ್ರ ಸರ್ಕಾರಿ ಶಾಲೆಗಳ ಪುನರುಜ್ಜೀವನ ಸಾಧ್ಯವಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತವರು ಇಂದು ವಿವಿಧ ಉನ್ನತ ಹುದ್ದೆಗಳಲ್ಲಿರಬಹುದು. ಅಂತವರು ತಾನು ಕಲಿತ ಶಾಲೆಯನ್ನು ಮರೆಯದೆ, ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ, ತನ್ನ ಶಾಲೆಯ ಶಿಕ್ಷಣದ ಗುಣಮಟ್ಟ ಸುಧಾರಿಸಲು ನಿರಂತರ ಕೊಡುಗೆ ನೀಡಬೇಕು ಎಂದರು.

ಆಯೋಗದ ಇನ್ನೋರ್ವ ಸದಸ್ಯ ಕೆ.ಬಿ.ರೂಪಾನಾಯ್ಕ, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮತ್ತೆ ಶಾಲೆಯ ಮುಖ್ಯ ವಾಹಿನಿಗೆ ಕರೆತರುವ ಕಾರ್ಯ ನಡೆಯಬೇಕಿದೆ. ಗ್ರಾಮ ಪಂಚಾಯತ್‌, ಶಾಲಾಭಿವೃದ್ಧಿ ಸಮಿತಿ ಮತ್ತು ಪಾಲಕರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ತಮ ಪಡಿಸಲು ಸಾಧ್ಯವಿದೆ ಎಂದು ಹೇಳಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ನಿರಂತರ ತಪಾಸಣೆ ನಡೆಸಬೇಕು. ಈ ರೀತಿ ತಪಾಸಣೆಗೆ ಹೋದಾಗ ಕೇವಲ ಹಾಜರಾತಿ ಇತ್ಯಾದಿ ಆಡಳಿತಾತ್ಮಕ ಅಂಶಗಳ ಕಡೆಗೆ ಮಾತ್ರ ಗಮನ ಹರಿಸಿದರೆ ಸಾಲದು. ಗುಣಮಟ್ಟದ ಶಿಕ್ಷಣ ನೀಡಲು ಕೈಗೊಂಡಿರುವ ಕ್ರಮಗಳು, ಈ ಕುರಿತಾದ ಮಾನದಂಡವನ್ನು ಅನುಸರಿಸುತ್ತಿದ್ದಾರೆಯೇ ಎಂದು ಪರಿಶೀಲಿಸಿ ಮಾರ್ಗದರ್ಶನ ಮಾಡಬೇಕು. ನಮ್ಮ ಮಕ್ಕಳ ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವವನ್ನು ಇತರ ಮಕ್ಕಳ ಶಿಕ್ಷಣಕ್ಕೂ ನೀಡಬೇಕು ಎಂದು ಹೇಳಿದರು.

ಡಾ| ವನಿತಾ ತೊರವಿ ಮಾತನಾಡಿ, ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಸಮರ್ಪಕ ನೀರಿನ ಸೌಲಭ್ಯ ಇರುವ ಶೌಚಾಲಯ, ಪ್ರತಿಯೊಬ್ಬ ವಿದ್ಯಾರ್ಥಿಗೆ ಬೆಂಚು ಮತ್ತು ಡೆಸ್ಕ್, ಶಾಲೆಗೆ ಸುತ್ತ ಕಂಪೌಂಡ್‌, ಸಣ್ಣ ಗಾರ್ಡನ್‌, ಆಟಿಕೆ ಸಾಮಾಗ್ರಿಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

Advertisement

ಜಿಲ್ಲಾಧಿಕಾರಿ ಡಾ| ಎಂ. ಲೋಕೇಶ್‌ ಮಾತನಾಡಿ, ಸರ್ಕಾರಿ ಶಾಲೆಗಳ ಕುರಿತಾದ ನಮ್ಮೆಲ್ಲರ ಮನೋಭಾವದಲ್ಲಿ
ಬದಲಾವಣೆಯಾಗುವ ಅಗತ್ಯವಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಸರ್ಕಾರ ಎಲ್ಲವನ್ನೂ ಉಚಿತವಾಗಿ ನೀಡುತ್ತಿದೆ ಎಂಬ ಉಡಾಫೆ ಮನೋಭಾವ ಸಲ್ಲದು ಎಂದರು.

ಸರ್ಕಾರಿ ಶಾಲಾ ಶಿಕ್ಷಕರು ಖಾಸಗಿ ಶಾಲಾ ಶಿಕ್ಷಕರಿಗಿಂತ ಹೆಚ್ಚಿನ ವೇತನ ಪಡೆಯುತ್ತಿದ್ದರೂ, ನಮ್ಮಲ್ಲಿ ಮಕ್ಕಳ ದಾಖಲಾತಿ ಕಡಿಮೆ ಯಾಕಿದೆ? ಶಿಕ್ಷಣದ ಗುಣಮಟ್ಟ ಯಾಕೆ ಉತ್ತಮವಾಗುತ್ತಿಲ್ಲ ಎಂಬ ಬಗ್ಗೆ ಆತ್ಮಾವಲೋಕನ ಮಾಡಬೇಕಿದೆ ಎಂದರು. ಇತ್ತೀಚೆಗೆ ತಾವು ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅನುಭವವನ್ನು ವಿವರಿಸಿದ ಜಿಲ್ಲಾಧಿಕಾರಿ ಅವರು, ” ಭೇಟಿ ನೀಡಿದ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ “ಮುಂಬೈ ಸ್ಪೆಲ್ಲಿಂಗ್‌ ಹೇಳಿ ಎಂದರೆ, 40 ಮಕ್ಕಳ ಪೈಕಿ ಒಬ್ಬರೂ ಮುಂದೆ ಬರಲಿಲ್ಲ. ಗುಣಮಟ್ಟದ ಶಿಕ್ಷಣ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಎಂಬುವುದು ಇದರಿಂದ ಸ್ಪಷ್ಟವಾಗುತ್ತದೆ. ಮೂಲಸೌಲಭ್ಯ ಒದಗಿಸುವುದು ಮಾತ್ರವಲ್ಲ, ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್‌ ಕುಮಾರ್‌ ಮಾತನಾಡಿ, ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ ಇತ್ಯಾದಿ ಮೂಲಸೌಲಭ್ಯ ಕಲ್ಪಿಸುವುದರ ಜೊತೆಗೆ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಕರು ಪ್ರತಿಯೊಂದು ಮಕ್ಕಳ ಮನೆಗೆ ಹೋಗಿ ಅವರ ಪಾಲಕರೊಂದಿಗೆ ಸಮಾಲೋಚನೆ ನಡೆಸಿ, ಅವರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಆತ್ಮವಿಶ್ವಾಸ ಮೂಡಿಸಬೇಕಿದೆ. ಇಲ್ಲದಿದ್ದರೆ ನಮ್ಮ ಶಾಲೆಗಳು ಕೇವಲ ಮತಗಟ್ಟೆಗಳಾಗುವ ಅಪಾಯವಿದೆ. 
ಡಾ| ಎಂ. ಲೋಕೇಶ್‌, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next