Advertisement

ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ

02:59 PM May 01, 2022 | Team Udayavani |

ನಾಯಕನಹಟ್ಟಿ: ಅಭಿವೃದ್ಧಿ ಆಧಾರದ ಮೇಲೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

Advertisement

ಪಟ್ಟಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರ ಅಭಿವೃದ್ಧಿಯಾಗಿಲ್ಲ, ಶ್ರೀರಾಮುಲು ಕ್ಷೇತ್ರ ಬಿಟ್ಟು ಪಲಾಯನ ಮಾಡುತ್ತಾರೆ ಎಂದು ಕ್ಷೇತ್ರದಲ್ಲಿನ ಕೆಲವರು ಟೀಕಿಸುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಪರ ಕಾರ್ಯಗಳನ್ನು ಜನರ ಮುಂದಿಡುತ್ತೇನೆ. ಇದರ ಆಧಾರದ ಮೇಲೆ ಮುಂದಿನ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ತಾಕತ್ತು, ಗಂಡಸ್ತನ ಮುಂತಾದ ಪದಗಳನ್ನು ಬಳಕೆ ಮಾಡುವ ಕೆಟ್ಟ ಸಂಸ್ಕೃತಿ ನನ್ನದಲ್ಲ ಎಂದರು.

ರಾಜ್ಯ ಕಾಂಗ್ರೆಸ್‌ ಹಾಗೂ ಮೊಳಕಾಲ್ಮೂರು ಕಾಂಗ್ರೆಸ್‌ನಲ್ಲಿ ಎರಡು ಗುಂಪುಗಳಿವೆ. ಕ್ಷೇತ್ರದಲ್ಲಿರುವ ಎರಡು ಗುಂಪುಗಳ ಪರಸ್ಪರ ಸ್ಪರ್ಧೆಯಿಂದಾಗಿ ಬಿಜೆಪಿ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ದೂರಿದ ಶ್ರೀರಾಮುಲು, ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ.ಅನಿರೀಕ್ಷಿತವಾಗಿ ಇಲ್ಲಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಶಾಸಕನಾದಾಗ ಪಕ್ಷಕ್ಕೆ ಬಹುಮತದ ಕೊರತೆಯಿಂದ ಅಧಿಕಾರ ದೊರೆಯಲಿಲ್ಲ. ನಂತರ ಕೆಲವು ಶಾಸಕರು ಪಕ್ಷಕ್ಕೆ ಬಂದಿದ್ದರಿಂದ ಬಿಜೆಪಿ ಸರ್ಕಾರ ರಚನೆಯಾಯಿತು. 50 ವರ್ಷಗಳಿಂದ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿರಲಿಲ್ಲ. ಇದೀಗ ನನಗೆ ಸಚಿವ ಸ್ಥಾನ ದೊರೆತಿದ್ದು, ಇದನ್ನು ಬಳಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಂದಿನ ಒಂದು ವರ್ಷದಲ್ಲಿ ಇನ್ನಷ್ಟು ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಮೊಳಕಾಲ್ಮೂರು ಕ್ಷೇತ್ರ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಕಾರಣವಿಲ್ಲದೆ ಬೀದಿಬದಿಯಲ್ಲಿ ಮಾತನಾಡುವವರಿಗೆ ಉತ್ತರ ನೀಡುವುದಿಲ್ಲ. ಇದಕ್ಕೆ ಬದಲಾಗಿ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದ ಶ್ರೀರಾಮುಲು, ರಾಜ್ಯದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಸ್ವಲ್ಪ ಹಿನ್ನಡೆಯಾಗಿದೆ. ಆದರೆ ಕ್ಷೇತ್ರದಲ್ಲಿ ಪ್ರಮುಖವಾದ ಸಮಸ್ಯೆಗಳಿಗೆ ಪರಿಹಾರ ರೂಪಿಸಲಾಗುತ್ತಿದೆ. ಕ್ಷೇತ್ರಕ್ಕೆ ಇಲ್ಲಿಯವರೆಗೂ 2100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಕ್ಷೇತ್ರ ವ್ಯಾಪ್ತಿಯ 72 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಚಾಲನೆಯಲ್ಲಿದೆ. ಈಗಾಗಲೇ ಪೈಪ್‌ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ನನ್ನ ಅವಧಿಯಲ್ಲಿಯೇ ಕೆರೆಗಳಿಗೆ ನೀರು ಹರಿಸಲಾಗುವುದು ಎಂದರು.

Advertisement

ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಕೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಎರಡು ಪ್ರಮುಖ ಕಾಮಗಾರಿಗಳನ್ನು ವೇಗವಾಗಿ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ಮಾಡಲಾಗಿದೆ. ಬಿಜೆಪಿಯ ಇಚ್ಛಾಶಕ್ತಿಯಿಂದ ವಿವಿ ಸಾಗರಕ್ಕೆ ನೀರು ಹರಿಸಲಾಗಿದೆ. ಇದರಿಂದ ಹಿರಿಯೂರು, ಚಳ್ಳಕೆರೆ ತಾಲೂಕುಗಳ ಕೃಷಿ ಕ್ಷೇತ್ರಕ್ಕೆ ಹೊಸ ಜೀವ ಬಂದಿದೆ. ಚಳ್ಳಕೆರೆ ತಾಲೂಕಿನ 2 ಲಕ್ಷ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿದೆ ಎಂದರು.

ತಹಶೀಲ್ದಾರ್‌ ಎನ್‌. ರಘುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಮಂಡಲ ಅಧ್ಯಕ್ಷರಾದ ಇ. ರಾಮ ರೆಡ್ಡಿ, ಡಾ| ಪಿ.ಎಂ. ಮಂಜುನಾಥ್‌, ಜಿಪಂ ಸದಸ್ಯ ಒ. ಮಂಜುನಾಥ್‌, ಸಿ.ಬಿ. ಮೋಹನ್‌, ತಿಪ್ಪೇಸ್ವಾಮಿ, ಜಯಪಾಲಯ್ಯ, ಪಿ. ಶಿವಣ್ಣ, ಎನ್‌. ಮಹಾಂತಣ್ಣ ಮೊದಲಾದವರು ಭಾಗವಹಿಸಿದ್ದರು.

ಪ್ರತಿಭಟನೆಗೆ ಸಜ್ಜಾಗಿದ್ದ ಮಹಿಳೆಯರು ಪೊಲೀಸ್‌ ವಶಕ್ಕೆ

ಸಚಿವ ಬಿ. ಶ್ರೀರಾಮುಲು ಅವರ ಬಹಿರಂಗ ಸಭೆಗೂ ಮುನ್ನ ಪೊಲೀಸರು 60ಕ್ಕೂ ಹೆಚ್ಚು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡರು. ತ್ರಿವೇಣಿ ಭೂಷಣ್‌ ಸೇರಿದಂತೆ 60ಕ್ಕೂ ಹೆಚ್ಚು ಮಹಿಳೆಯರು ಶ್ರೀರಾಮುಲು ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಇದನ್ನು ಅರಿತ ಪೊಲೀಸರು ಪ್ರಮುಖ ರಸ್ತೆಯಲ್ಲಿ ಓಡಾಡುತ್ತಿದ್ದ ಮಹಿಳೆಯರನ್ನು ವಶಕ್ಕೆ ಪಡೆದು ಅವರನ್ನು ಅವರ ಗ್ರಾಮಗಳಿಗೆ ವಾಪಾಸ್‌ ಕಳುಹಿಸಿಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ತ್ರಿವೇಣಿ, ಸಚಿವ ಬಿ. ಶ್ರೀರಾಮುಲು ನಮ್ಮ ವಾಕ್‌ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದಾರೆ. ನೇರವಾಗಿ ಎದುರಿಸಲಾರದೆ ಪೊಲೀಸರನ್ನು ಬಳಸಿದ್ದಾರೆ. ಕ್ಷೇತ್ರದಲ್ಲಿ ಮಹಿಳಾ ಸಂಘಗಳಗೆ ಅನ್ಯಾಯವಾಗಿದೆ. ಸಮರ್ಪಕವಾಗಿ ಅನುದಾನ ದೊರೆತಿಲ್ಲ ಎಂದು ಆರೋಪಿಸಿದರು.

ಭ್ರಷ್ಟಾಚಾರ ಸಹಿಸಲಾಗದು

ಮೊಳಕಾಲ್ಮೂರು ಕ್ಷೇತ್ರದಲ್ಲಿ ಎಸ್‌ಟಿ ನಿಗಮದಿಂದ ನೇರ ಸಾಲ ನೀಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಲಾಗಿದೆ. ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ. ಕ್ಷೇತ್ರದಲ್ಲಿ ಉಂಟಾದ ಸಮಸ್ಯೆಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಅಮಾನತು ಮಾಡಲಾಗಿದೆ. ಮಹಿಳೆಯೊಬ್ಬರು ಸಂಘ- ಸಂಸ್ಥೆಗಳಿಗೆ ವೈಯಕ್ತಿಕ ಸಾಲ ನೀಡುವಂತೆ ಒತ್ತಾಯಿಸಿದ್ದರು. ಆದರೆ ಇದು ಸಾಧ್ಯವಿಲ್ಲ. ಇಂಥವರು ಕ್ಷೇತ್ರದಲ್ಲಿ ಅನಾವಶ್ಯಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next