Advertisement

Kadaba ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅರಣ್ಯಾಧಿಕಾರಿಗಳ ವಿರುದ್ಧ ದೂರು

09:46 PM Jun 05, 2024 | Team Udayavani |

ಕಡಬ: ಕೊಂಬಾರು ಭಾಗದ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅರಣ್ಯಾಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಕಡಬ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.

Advertisement

ಈ ಅರಣ್ಯ ಪ್ರದೇಶದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 2 ಕುಟುಂಬಗಳು ಗುಡಿಸಲು ನಿರ್ಮಿಸಿ ವಾಸ್ತವ್ಯ ಹೂಡಿರುವ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಜೂ. 2ರಂದು ವಿವಾದಿತ ಗುಡಿಸಲುಗಳನ್ನು ತೆರವುಗೊಳಿಸಲು ಸ್ಥಳಕ್ಕೆ ತೆರಳಿದ್ದರು. ಕಾರ್ಯಾಚರಣೆಯ ವೇಳೆ ಗುಡಿಸಲು ನಿರ್ಮಿಸಿದ್ದವರಿಂದ ವಿರೋಧ ವ್ಯಕ್ತವಾಗಿತ್ತು. ಅನಂತರ ಬೆಳವಣಿಗೆಯಲ್ಲಿ ಗುಡಿಸಲು ನಿರ್ಮಿಸಿದ್ದ ಕುಟುಂಬಗಳು ಕಡಬ ಪೊಲೀಸ್‌ ಠಾಣೆಗೆ ದೂರು ನೀಡಿ ಅರಣ್ಯಾಧಿಕಾರಿಗಳು ಯಾವುದೇ ನೋಟಿಸ್‌ ನೀಡದೆ ಕಾರ್ಯಾಚರಣೆ ನಡೆಸಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

ಆ ಹಿನ್ನೆಲೆಯಲ್ಲಿ ಕಡಬ ಎಸ್‌ಐ ಅಭಿನಂದನ್‌ ಎಂ.ಎಸ್‌. ಅವರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್‌ ಬಾಬು ಅವರು ಕೊಂಬಾರು ಮೀಸಲು ಅರಣ್ಯದಲ್ಲಿ ಅನಧಿಕೃತವಾಗಿ ಟೆಂಟ್‌ ಮಾದರಿಯ 2 ಗುಡಿಸಲುಗಳನ್ನು ನಿರ್ಮಿಸಲಾಗಿತ್ತು. ಸಂಬಂಧಪಟ್ಟವರಿಗೆ ಟೆಂಟ್‌ಗಳನ್ನು ತೆರವುಗೊಳಿಸಲು ಸೂಚಿಸಿದರೂ ಅವರು ಸ್ಪಂದಿಸದ ಹಿನ್ನೆಲೆಯಲ್ಲಿ ಇಲಾಖೆಯ ಸಿಬಂದಿ ಟೆಂಟ್‌ ತೆರವುಗೊಳಿಸಲು ತೆರಳಿದ್ದರು. ಅಲ್ಲಿ ಯಾವುದೇ ರೀತಿಯ ದೌರ್ಜನ್ಯ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next