ಬೆಂಗಳೂರು: ಭೈರಸಂದ್ರ ವಾರ್ಡ್ನಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮೇಯರ್ ಗಂಗಾಂಬಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭೈರಸಂದ್ರ ವಾರ್ಡ್ನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಮಂಗಳವಾರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಮೇಯರ್, ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನ ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈಜುಕೊಳದ ಕಾಮಗಾರಿಗೆ 2002ರಲ್ಲಿ 2.18ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿತ್ತು.
ಆದರೆ, ಗುತ್ತಿಗೆ ಪಡೆದ ಪಿ.ಎಂ.ಸ್ವಿಮಿಂಗ್ ಸೆಂಟರ್ ಸಂಸ್ಥೆಗೆ ಹಲವು ತೊಡಕುಗಳು ಎದುರಾದ ಹಿನ್ನೆಲೆ ಮತ್ತೆ 2016ರಲ್ಲಿ ಸರ್ಕಾರದ ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಿಸಿದ್ದಾರೆ ಎಂದರು. ಈಜುಕೊಳ ನಿರ್ಮಾಣವಾಗುತ್ತಿರುವ ಬಿಬಿಎಂಪಿ ಜಾಗವನ್ನು ಗುತ್ತಿಗೆ ಪಡೆದಿರುವ ಸಂಸ್ಥೆ ಜತೆ 35 ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದು,
ವಾರ್ಷಿಕ 60 ಸಾವಿರ ರೂ. ಪಾಲಿಕೆಗೆ ಪಾವತಿ ಮಾಡುವಂತೆ ಷರತ್ತಿನಲ್ಲಿ ಸೂಚಿಸಲಾಗಿದೆ. ಅದರಂತೆ ಗುತ್ತಿಗೆದಾರರು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಜುಕೊಳ ನಿರ್ಮಿಸುತ್ತಿದ್ದು, ಇನ್ನೆರಡು ತಿಂಗಳೊಳಗಾಗಿ ಕಾಮಗಾರಿ ಮುಗಿಯಲಿದೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ ಎಂದರು.
ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ 2.5ಕೋಟಿ ರೂ. ವೆಚ್ಚದ ಒಳಾಂಗಣ ವಾಲಿಬಾಲ್ ಕೋರ್ಟ್ ನಿರ್ಮಾಣ, 1.9 ಕೋಟಿ ರೂ. ವೆಚ್ಚದಲ್ಲಿ ಮೂರು ಒಳಾಂಗಣ ಶೆಟಲ್ ಕೋರ್ಟ್ಗಳನ್ನು ಆಗಸ್ಟ್ ವೇಳೆಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜತೆಗೆ 3 ಕೋಟಿ ರೂ. ವೆಚ್ಚದಲ್ಲಿ 415 ಮೀಟರ್ ಉದ್ದದ ಓಟದ ಟ್ರ್ಯಾಕ್ ಕಾಮಗಾರಿ ಶೀಘ್ರವೇ ಪ್ರಾರಂಭವಾಗಲಿದೆ.
ಕಲಾವಿದರ ಉಪಯೋಗಕ್ಕಾಗಿ 90 ಲಕ್ಷ ರೂ. ವೆಚ್ಚದಲ್ಲಿ ಗ್ರೀನ್ ರೂಂ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಈ ವೇಳೆ ಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಸದಸ್ಯ ಎ.ನಾಗರಾಜ್, ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹಾಗೂ ಇತರರು ಉಪಸ್ಥಿತರಿದ್ದರು.