Advertisement

ಉಕ ನೀರಾವರಿ ಯೋಜನೆ ಪೂರ್ಣಗೊಳಿಸಿ

02:07 PM Apr 18, 2022 | Team Udayavani |

ಜಮಖಂಡಿ: ಉತ್ತರ ಕರ್ನಾಟಕ ಅಭಿವೃದ್ಧಿಗೊಳಿಸುವಲ್ಲಿ ಎಲ್ಲ ಸರ್ಕಾರಗಳು ವಿಫಲಗೊಂಡಿವೆ. ಮೊದಲಿನಿಂದ ಪ್ರಸ್ತಾವನೆ ಗೊಂಡಿರುವ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರದೇ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು.

Advertisement

ನಗರದಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಮೂಲಕ ಕೃಷ್ಣಾ-ಮಹದಾಯಿ-ನವಲಿ ಸಂಕಲ್ಪ ಯಾತ್ರೆ ಮತ್ತು ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗಾಗಿ ಕೃಷ್ಣಾ ಯೋಜನೆಗಳನ್ನು ಅನುಷ್ಠಾನಗೊಳಿಸಿ ನೀರನ್ನು ಬಳಸಿಕೊಳ್ಳ ಬೇಕೆಂದು ಒತ್ತಾಯಿಸಿದರು. ಕರ್ನಾಟಕ ಏಕೀಕರಣ ನಂತರ ಕೂಡ ಉತ್ತರ ಕರ್ನಾಟಕದ ನೀರಾವರಿ ಮತ್ತು ಮೂಲಸೌಕರ್ಯಗಳ ಕೊರತೆ ಮುಂದುವರಿದಿದೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಯುಕೆಪಿ, ಮಹದಾಯಿ ಹಾಗೂ ನವಲಿ ಯೋಜನೆಗಳನ್ನು ಪೂರ್ಣಗೊಳಿಸಬೇಕು.

ಕರ್ನಾಟಕದ ಒಟ್ಟು ಜಲಸಂಪನ್ಮೂಲದಲ್ಲಿ ಶೇ. 68 ರಷ್ಟೂ ಉತ್ತರ ಕರ್ನಾಟಕದಲ್ಲಿಯೇ ಇದ್ದರೂ ಈ ಭಾಗ ಅಭಿವೃದ್ಧಿಯಿಂದ ವಂಚಿತವಾಗಿದೆ. ಪ್ರಾದೇಶಿಕ ಅಸಮಾನತೆಯಿಂದ ಕೈಗಾರಿಕೆಗಳು, ಉದ್ಯಮಗಳು ಸೇರಿದಂತೆ ಹಲವು ರೀತಿಯಿಂದ ಅನ್ಯಾಯಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ನಮ್ಮ ಭಾಗದ ಅಭಿವೃದ್ಧಿಗೆ ಹೋರಾಟ ಅನಿವಾರ್ಯವಾಗಿದೆ ಎಂದರು.

ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಯುಕೆಪಿ 3ನೇ ಹಂತದ ಯೋಜನೆ ರಾಜ್ಯ ಸರ್ಕಾರ ಕೈಗೆತ್ತಿಕೊಂಡು ಈ ಭಾಗದ ಜನರಿಗೆ ನ್ಯಾಯ ಒದಗಿಸಬೇಕು. ಹಲವಾರು ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಬೇಕಾಗಿವೆ. ರಾಜ್ಯ-ಕೇಂದ್ರ ಸರಕಾರಗಳು ಶೀಘ್ರದಲ್ಲಿ ಅಧ್ಯಯನ ಮಾಡುವ ಮೂಲಕ ಈ ಭಾಗದ ರೈತರ, ಸಾರ್ವಜನಿಕರ ತೊಂದರೆ ನಿವಾರಿಸಬೇಕು ಎಂದು ಒತ್ತಾಯಿಸಿದರು.

Advertisement

ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌. ಆರ್‌.ಪಾಟೀಲ ನೇತೃತ್ವದಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಮೂಲಕ ಸಂಕಲ್ಪ ಯಾತ್ರೆಯನ್ನು ನಗರದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು.

ಕುಂಚನೂರ ವೃತ್ತದಿಂದ ವಿಶ್ವಗುರು ಬಸವೇಶ್ವರ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತ, ಛತ್ರಪತಿ ಶಿವಾಜಿ ಮಹಾರಾಜ ವೃತ್ತದ ಮೂಲಕ ಎ.ಜಿ.ದೇಸಾಯಿ ವೃತ್ತದವರೆಗೆ ಸಂಚರಿಸಿತು. ರ್ಯಾಲಿಯಲ್ಲಿ 300ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಪಾಲ್ಗೊಂಡಿದ್ದವು.

ಬೀಳಗಿ ಮಾಜಿ ಶಾಸಕ ಜೆ.ಟಿ.ಪಾಟೀಲ, ಮುತ್ತಣ್ಣ ಹಿಪ್ಪರಗಿ, ಸುಶೀಲಕುಮಾರ ಬೆಳಗಲಿ, ಯುವ ಘಟಕದ ಜಿಲ್ಲಾಧ್ಯಕ್ಷ ರಾಹುಲ ಕಲೂತಿ, ಅಜಯ ಸರನಾಯಕ, ಬಿ.ಜಿ.ಪಾಟೀಲ, ಕುಮಾರ ಆಲಗೂರ ಸಹಿತ ಹಲವರು ಇದ್ದರು.

ಮುಧೋಳ: ಉತ್ತರ ಕರ್ನಾಟಕ ಭಾಗದ ರೈತರ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಕಲ್ಪ ಯಾತ್ರೆಗೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ಮಾಜಿ ನಾಯಕ ಎಸ್‌.ಆರ್‌. ಪಾಟೀಲ ಹೇಳಿದರು.

ನರಗುಂದದಿಂದ ಆರಂಭಗೊಂಡಿರುವ ಸಂಕಲ್ಪ ಯಾತ್ರೆ ನಗರಕ್ಕೆ ಆಗಮಿಸಿರುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳನ್ನು ಹಿಂದಿನಿಂದಲೂ ನಿರ್ಲಕ್ಷ್ಯ ಮಾಡುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತು ಈ ಭಾಗದ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ, ಮಹದಾಯಿ ಹಾಗೂ ನವಲಿ ಸಮಾನಾಂತರ ಜಲಾಶಯದ ಯೋಜನೆಗಳನ್ನು ಪೂರ್ಣಗೊಳಿಸುವತ್ತ ಗಮನ ಹರಿಸಬೇಕು ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಉತ್ತರ ಕರ್ನಾಟಕ ಭಾಗದ ಅಂದಾಜು 15 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಿದಂತಾಗುತ್ತದೆ. ಇಂತಹ ಯೋಜನೆಗಳ ತ್ವರಿತಗತಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ. ಇಂತಹ ಪ್ರವೃತ್ತಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಸರದಿ ಹಾಗೂ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೂ ಮುಂದಾಗುತ್ತೇವೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗವಲ್ಲದೆ ದಕ್ಷಿಣ ಕರ್ನಾಟಕ ಭಾಗವಾಗಿದ್ದರೆ ಅಲ್ಲಿನ ರಾಜಕಾರಣಿಗಳು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಮುಂದಾಗುತ್ತಿದ್ದರು. ಆದರೆ ನಮ್ಮ ಭಾಗದ ಜನಪ್ರತಿನಿ ಗಳಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದುಕಾಣುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ರಾಜಕೀಯ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಪ್ರಸಂಗ ಬಂದಿದೆ ಎಂದರು.

ಉತ್ತರ ಕರ್ನಾಟಕ ಭಾಗದಲ್ಲಿ ಈ ಮೂರು ಯೋಜನೆಗಳು ಅನುಷ್ಠಾನಗೊಂಡರೆ ಈ ಭಾಗದಲ್ಲಿ ಔದ್ಯೋಗಿಕ ಕ್ರಾಂತಿ ಉಂಟಾಗಲಿದೆ. ಇಲ್ಲಿನ ಜನರು ದುಡಿಯಲು ಗುಳೆ ಹೋಗುವುದು ತಪ್ಪಲಿದೆ. ಇಲ್ಲಿನ ರೈತರು ಆರ್ಥಿಕವಾಗಿ ಸಬಲರಾಗುತ್ತಾರೆ. ಆದ್ದರಿಂದ ಸರ್ಕಾರ ಈ ನಿಟ್ಟಿನಲ್ಲಿ ಚಿಂತಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ, ಮಹಾದಾಯಿ ಹಾಗೂ ನವಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ಮುಂದಾಗಬೇಕು ಎಂದರು.

ಸರಿಯಾದ ಮಾರ್ಗಸೂಚಿ ಅನುಸರಿಸಿ: ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗುವ ಬಬಲೇಶ್ವರ ಮತಕ್ಷೇತ್ರದ 14 ಹಳ್ಳಿಗಳ ಸರ್ವೇ ಕಾರ್ಯ ಹಾಗೂ ಪರಿಹಾರ ಹಂಚಿಕೆ ಕಾರ್ಯದಲ್ಲಿ ಸೂಕ್ತ ಮಾರ್ಗಸೂಚಿ ಅನುಸರಿಸಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಮಂತ್ರಿಗಳು ಗಮನ ಹರಿಸಿ ಅಲ್ಲಿನ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಹಮ್ಮಿಕೊಂಡಿರುವ ಟ್ರ್ಯಾಕ್ಟರ್  ರ್ಯಾಲಿಗೆ ನೀರಾವರಿ ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಧೋಳ ನಗರದಲ್ಲಿಯೂ ಸಹ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಕಿಸಾನ್‌ ಘಟಕ ಅಧ್ಯಕ್ಷ ನಂದಕುಮಾರ ಪಾಟೀಲ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಯಾನಂದ ಪಾಟೀಲ, ಕಾಂಗ್ರೆಸ್‌ ಮುಖಂಡ ಸತೀಶ ಬಂಡಿವಡ್ಡರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧರೆಪ್ಪ ಸಾಂಗ್ಲಿಕರ, ವಿಜುಗೌಡ ಪಾಟೀಲ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next