ಬೆಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆದು ಮನೆ ಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹಾಗೂ ಬಿಜೆಪಿಯ ಹಿರಿಯ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕಾಂಗ್ರೆಸ್ನ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ, ಸಂಸದ ಹಾಗೂ ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ ಪ್ರಸಾದ್, ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಿಎಂ ಇಬ್ರಾಹಿಂ, ಸಂಸದ ಪಿ.ಸಿ.ಗದ್ದಿಗೌಡರ, ನಿಡುಮಾಮಿಡಿ ಪೀಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸಿದ್ದರಾಮಯ್ಯ ಭೇಟಿ ನಂತರ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಸಂಸತ್ ಅಧಿವೇಶನ ಇದ್ದ ಕಾರಣ ಆರೋಗ್ಯ ವಿಚಾರಿಸಲು ಕೂಡಲೇ ಬರಲು ಆಗಿರಲಿಲ್ಲ. ನಾವಿಬ್ಬರೂ ಒಂದೇ ಜಿಲ್ಲೆಯ ವರು. ಬಹಳ ದಿನಗಳ ನಂತರ ಭೇಟಿ ಮಾಡಿದ್ದೇನೆ. ಆದಷ್ಟು ಬೇಗ ಗುಣ ಮುಖರಾಗಲಿ ಎಂದು ಹಾರೈಸಿರುವುದಾಗಿ ಹೇಳಿದರು.
ಇದೇ ವೇಳೆ, ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಇಂದಿರಾ ಗಾಂಧಿ ಹೆಸರಿದ್ದರೇನು ತಪ್ಪು ? ಇಂದಿರಾ ಗಾಂಧಿಯೂ ರಾಷ್ಟ್ರ ಮಟ್ಟದ ನಾಯಕಿ ಎಂದು ಹೇಳಿದರು.
ನಾಲ್ಕು ದಿನ ವಿಶ್ರಾಂತಿ: ಸಿದ್ದರಾಮಯ್ಯ ಅವರು, ನಾಲ್ಕು ದಿನಗಳ ಕಾಲ ವಿಶ್ರಾಂತಿಗಾಗಿ ಬೆಂಗಳೂರಿನಿಂದ ಹೊರಗೆ ತೆರಳಲಿದ್ದಾರೆ. ಹೀಗಾಗಿ, ಸಾರ್ವಜನಿಕರ ಭೇಟಿಗೆ ಅವಕಾಶ ಇರುವುದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.