Advertisement

ಅಶೋಕ್‌ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಆಗ್ರಹ

12:44 PM Nov 03, 2017 | Team Udayavani |

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ 10 ಸಾವಿರ ಕೋಟಿ ರೂ. ಮೌಲ್ಯದ ಬಗರ್‌ಹುಕುಂ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬೆಂಗಳೂರು ಮಹಾನಗರ ಕಾಂಗ್ರೆಸ್‌ ಘಟಕ ಆಗ್ರಹಿಸಿದೆ. 

Advertisement

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ಗುಂಡೂರಾವ್‌ ನೇತೃತ್ವದಲ್ಲಿ ಗುರುವಾರ ಟೌನ್‌ಹಾಲ್‌ ಎದುರು ಪ್ರತಿಭಟನೆ ನಡೆಸಿದ ಬೆಂಗಳೂರು ಮಹಾನಗರ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಸುಮಾರು 2402 ಎಕರೆ ಜಮೀನನ್ನು ಹಂಚಿಕೆ ಮಾಡಿದ್ದಾರೆ. ಕೂಡಲೇ ಇದನ್ನು ತನಿಖೆಗೆ ಒಳಪಡಿಸಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

ಬೆಂಗಳೂರು ದಕ್ಷಿಣ ತಾಲೂಕಿನ ಸುಮಾರು ಸುಮಾರು 16 ಗ್ರಾಮಗಳಿಗೆ ಸಂಬಂಧಿಸಿದ 88 ಫ‌ಲಾನುಭವಿಗಳಿಗೆ 245 ಎಕರೆ ಜಮೀನನ್ನು ಅನಧಿಕೃತ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿ ಆರ್‌.ಅಶೋಕ್‌ ಅವರು, ಮಂಜೂರು ಮಾಡಿದ್ದಾರೆ.ಮಾಜಿ ಕಾರ್ಪೊರೇಟರ್‌ ಹಾಗೂ ಅವರ ಕುಟುಂಬ ವರ್ಗದವರಿಗೆ, ಮಾಜಿ ಭೂ ನ್ಯಾಯಮಂಡಳಿ ಸದಸ್ಯರು, ಕುಟುಂಬದವರು ಹಾಗೂ ಇತರೇ ಆರ್ಥಿಕವಾಗಿ ಸದೃಢವಾಗಿರುವ ವ್ಯಕ್ತಿಗಳಿಗೆ ಹಂಚಿದ್ದಾರೆ.

ಜತೆಗೆ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ 62 ಗ್ರಾಮಗಳ ಜಮೀನನ್ನು 516 ಮಂದಿಗೆ ಅಕ್ರಮವಾಗಿ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಧಾನಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ, ಪಿ.ಆರ್‌.ರಮೇಶ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಶೇಖರ್‌,  ಎನ್‌ಎಸ್‌ಯುಐ ಅಧ್ಯಕ್ಷ ಮಂಜುನಾಥ್‌, ಜಿ.ಕೃಷ್ಣಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next