Advertisement

ಬಚ್ಚೇಗೌಡರ ಪುತ್ರನ ಮೇಲೆ “ಕೈ’ಕಣ್ಣು

11:09 PM Sep 24, 2019 | Team Udayavani |

ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳ ಹುಟುಕಾಟ ನಡೆಸಿರುವ ಕಾಂಗ್ರೆಸ್‌ ಹೊಸಕೋಟೆ ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ ಪುತ್ರ ಶರತ್‌ ಬಚ್ಚೇಗೌಡ ಅವರನ್ನು ಸೆಳೆಯಲು ಕಸರತ್ತು ನಡೆಸಿದೆ.

Advertisement

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್‌ ಪುತ್ರ ನಿತಿನ್‌ ಪುರುಷೋತ್ತಮ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದರೆ ಶರತ್‌ ಬಚ್ಚೇಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಲೋಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಕಾರಣಕ್ಕೆ ಶರತ್‌ ಅವರನ್ನು ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಂಪರ್ಕ ಮಾಡಿ, ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಎಂಟಿಬಿ ನಾಗರಾಜ್‌ ಪುತ್ರನಿಗೆ ಬಿಜೆಪಿ ಟಿಕೆಟ್‌ ದೊರೆತರೆ ಅವರಿಗೆ ವಿರುದ್ಧವಾಗಿ ಶರತ್‌ ಬಚ್ಚೇಗೌಡ ಸ್ಪರ್ಧೆ ಮಾಡಿದರೆ, ಕಾಂಗ್ರೆಸ್‌ ಗೆಲುವಿನ ಸಾಧ್ಯತೆ ಹೆಚ್ಚಿದೆ ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ಇದೆ. 2018 ರ ವಿಧಾನ ಸಭೆ ಚುನಾವಣೆಯಲ್ಲಿ ಶರತ್‌ ಬಚ್ಚೇಗೌಡ ಎಂ.ಟಿ.ಬಿ.ನಾಗರಾಜ್‌ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿರುವುದರಿಂದ ಕೊನೆ ಕ್ಷಣದವರೆಗೂ ಅವರನ್ನು ಕಾಂಗ್ರೆಸ್‌ಗೆ ಕರೆ ತರುವ ಪ್ರಯತ್ನ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಹೊಸಕೋಟೆ ಕ್ಷೇತ್ರದಲ್ಲಿ ಬೈರತಿ ಸುರೇಶ್‌ ಪತ್ನಿ ಪದ್ಮಾವತಿ ಹೆಸರು ಕೇಳಿ ಬರುತ್ತಿದ್ದು, ಒಂದು ವೇಳೆ, ಶರತ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ, ಪದ್ಮಾವತಿ ಅವರಿಗೆ ಕೆ.ಆರ್‌.ಪುರ ಟಿಕೆಟ್‌ ನೀಡುವ ಸಾಧ್ಯತೆ ಇದೆೆ ಎನ್ನಲಾಗಿದೆ.

ಶರತ್‌ಗೆ ಬಿಜೆಪಿ ಟಿಕೆಟ್‌ ನೀಡುವಂತೆ ಮನವಿ
ಬೆಂಗಳೂರು: ಹೊಸಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶರತ್‌ ಬಚ್ಚೇಗೌಡ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಕ್ಷೇತ್ರದ ಪ್ರಮುಖರ ನಿಯೋಗ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿತು. ಈಗಾಗಲೇ ಮಾಜಿ ಸಚಿವ ಎಂ.ಟಿ.ಬಿ. ನಾಗರಾಜ್‌ ಅವರಿಗೆ ಟಿಕೆಟ್‌ ನೀಡುವ ವಾಗ್ಧಾನ ನೀಡಿರುವುದರಿಂದ ಈ ಬಾರಿ ಅವಕಾಶ ನೀಡಲು ಸಾಧ್ಯವಾಗದು.

Advertisement

ಶರತ್‌ ಬಚ್ಚೇಗೌಡ ಅವರಿಗೆ ಸೂಕ್ತ ಸ್ಥಾನ ಕಲ್ಪಿಸಲಾಗುವುದು ಎಂಬುದಾಗಿ ಯಡಿಯೂರಪ್ಪ ಭರವಸೆ ನೀಡಿದರು ಎನ್ನಲಾಗಿದೆ. ಇದಕ್ಕೆ ಸಮಾಧಾನಗೊಳ್ಳದ ನಿಯೋಗವು ಹೋಬಳಿವಾರು ಜನಾಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದೆ. ಮಂಗಳವಾರ ಬೆಳಗ್ಗೆ ನೂರಾರು ಬೆಂಬಲಿಗರು ಯಡಿಯೂರಪ್ಪ ಅವರ ಡಾಲರ್ ಕಾಲೋನಿ ನಿವಾಸದ ಬಳಿ ಜಮಾಯಿಸಿ ಶರತ್‌ ಬಚ್ಚೇಗೌಡಗೆ ಟಿಕೆಟ್‌ ನೀಡುವಂತೆ ಘೋಷಣೆ ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next