Advertisement

ಪತ್ನಿಯರ ಸ್ಪರ್ಧೆಗಿಳಿಸಲು ಕೈ ನಾಯಕರ ಕಸರತ್ತು

06:27 AM Jan 23, 2019 | |

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗುವ ಮುನ್ನವೇ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರ ಪತ್ನಿಯರ ಸ್ಪರ್ಧೆ ಬಗ್ಗೆ ಚರ್ಚೆ ಶುರುವಾಗಿದೆ.

Advertisement

 ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಪತ್ನಿ ಟಬು ದಿನೇಶ್‌ ಹಾಗೂ ಬೀದರ್‌ ಕ್ಷೇತ್ರದಿಂದ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರ ಪತ್ನಿ ಡಾ.ಗೀತಾ ಈಶ್ವರ್‌ ಖಂಡ್ರೆ ಅವರನ್ನು ಚುನಾವಣಾ ಕಣಕ್ಕಿಳಿಸಲು ತೆರೆ ಮರೆಯಲ್ಲಿ ಕಸರತ್ತು ಆರಂಭವಾಗಿದೆ.  ದಕ್ಷಿಣ ಕನ್ನಡ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಂದ ಮಹಿಳೆಯರು ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದು ಅವರ ಜತೆಗೆ ಟಬು ದಿನೇಶ್‌ ಹಾಗೂ ಡಾ. ಗೀತಾ ಈಶ್ವರ್‌ ಖಂಡ್ರೆ ಹೆಸರು ಕೇಳಿಬರುತ್ತಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರಿಗೆ ಟಿಕೆಟ್‌ ನೀಡಬೇಕೆಂಬ ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ರೋಷನ್‌ ಬೇಗ್‌ ಹಾಗೂ ರಿಜ್ವಾನ್‌ ಅರ್ಷದ್‌ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದೆ. ರಿಜ್ವಾನ್‌ ಅರ್ಷದ್‌ಗೆ ದಿನೇಶ್‌ ಗುಂಡೂರಾವ್‌ ಬೆಂಬಲವೂ ಇದೆ. ಆದರೂ ಪತ್ನಿಯನ್ನು ಕಣಕ್ಕಿಳಿಸಲು ಅವರು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಿಜ್ವಾನ್‌ ಅರ್ಷದ್‌ಗೆ ಕಳೆದ ಬಾರಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಟಿಕೆಟ್‌ ನೀಡಿದಾಗ ಕಾಂಗ್ರೆಸ್‌ ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸಿದ್ದರಿಂದಲೇ ಅವರ ಸೋಲಿಗೆ ಕಾರಣವಾಗಿತ್ತು. ಈ ಬಾರಿಯೂ ಅವರಿಗೆ ಟಿಕೆಟ್‌ ನೀಡಿದರೆ ಮತ್ತೆ ವಿರೋಧ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಪಕ್ಷದ ಕೆಲವು ಮುಖಂಡರು ಟಬು ದಿನೇಶ್‌ ಅವರನ್ನು ಕಣಕ್ಕಿಳಿಸುವಂತೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಟಬು ಅವರು ಮುಸ್ಲಿಂ ಸಮುದಾಯಕ್ಕೆ ಸೇರಿರುವುದರಿಂದ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರವಿದೆ ಎನ್ನಲಾಗಿದೆ. ಇನ್ನು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರ ಪತ್ನಿ ಡಾ. ಗೀತಾ ಈಶ್ವರ್‌ ಖಂಡ್ರೆ ಅವರನ್ನೂ ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ.

Advertisement

ಡಾ. ಗೀತಾ ಈಶ್ವರ್‌ ಖಂಡ್ರೆಯವರು ವೈದ್ಯರಾಗಿದ್ದು, ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಇಟ್ಟುಕೊಂಡಿದ್ದಾರೆ. ಅಲ್ಲದೇ ಈಶ್ವರ್‌ ಖಂಡ್ರೆಯವರ ಚುನಾವಣೆಯಲ್ಲೂ ಗೀತಾ ಅವರೇ ಮನೆಮನೆಗೆ ತೆರಳಿ ಪ್ರಚಾರ ಮಾಡುವ ಮೂಲಕ ಕ್ಷೇತ್ರದ ಜನತೆಗೆ ಹೆಚ್ಚು ಪರಿಚಿತರಾಗಿದ್ದಾರೆ. ಹೀಗಾಗಿ ಅವರನ್ನೇ ಕಣಕ್ಕಿಳಿಸಲು ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ.

ಬೀದರ್‌ನಿಂದ ರಾಹುಲ್‌ಗೆ ಆಹ್ವಾನ: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬೀದರ್‌ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ಗೆ ಹೆಚ್ಚು ಅನುಕೂಲಕರವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಐವರು ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್‌ ಸದಸ್ಯರಿದ್ದಾರೆ.

ಹೀಗಾಗಿ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ನ ಹೆಚ್ಚಿನ ಸ್ಥಾನ ಗಳಿಸಲು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಬೀದರ್‌ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನಿಸಲಾಗಿದೆ ಎನ್ನಲಾಗುತ್ತಿದೆ. ಬೀದರ್‌ನಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆಯಿಂದ ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎನ್ನುವ ಲೆಕ್ಕಾಚಾರ ಅಡಗಿದೆ.

Advertisement

Udayavani is now on Telegram. Click here to join our channel and stay updated with the latest news.

Next