Advertisement

ಅಭ್ಯರ್ಥಿಗಳ ಆಮದಿಗೆ ಕಾಂಗ್ರೆಸ್‌ನಲ್ಲಿ ವಿರೋಧ

11:53 PM Oct 14, 2019 | Team Udayavani |

ಬೆಂಗಳೂರು: ಅನರ್ಹರ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಆಮದು ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪಕ್ಷದ ವಲಯದಲ್ಲಿ ಚರ್ಚಿಸಿ ಬಹುತೇಕ ಸಂಭಾವ್ಯರ ಪಟ್ಟಿ ಸಿದ್ಧಪಡಿಸಲಾಗಿತ್ತು. ಆದರೆ, ಬಿಜೆಪಿಯಲ್ಲಿ ಟಿಕೆಟ್‌ ವಂಚಿತರನ್ನು ಸೆಳೆಯಲು ಕೆಲವು ನಾಯಕರು ಆಲೋಚನೆ ನಡೆಸಿದ್ದು, ಟಿಕೆಟ್‌ ಆಕಾಂಕ್ಷಿಗಳು ಬೇಸರಗೊಳ್ಳಲು ಕಾರಣವಾಗಿದೆ.

Advertisement

ಉಪ ಚುನಾವಣೆಗೆ ಸ್ಥಳೀಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್‌ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಪ್ರಮುಖವಾಗಿ ಸಿದ್ದರಾಮಯ್ಯ ಆಪ್ತರಾಗಿರುವ ಬೈರತಿ ಸುರೇಶ್‌ ಹೊಸಕೋಟೆಯಲ್ಲಿ ತಮ್ಮ ಪತ್ನಿ ಪದ್ಮಾವತಿಯನ್ನು ಕಣಕ್ಕಿಳಿಸಲು ಸಿದ್ಧತೆ ಮಾಡಿಕೊಂಡಿದ್ದು ಕ್ಷೇತ್ರದಲ್ಲಿ ಚುನಾವಣೆ ಚಟುವಟಿಕೆಗಳನ್ನೂ ಆರಂಭಿಸಿದ್ದಾರೆ.

ಅಲ್ಲದೇ ಈ ಹಿಂದೆ ಚುನಾವಣೆ ದಿನಾಂಕ ಘೋಷಣೆಯಾದ ಸಂದರ್ಭದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಪತ್ನಿಯ ಒಂದೇ ಹೆಸರು ಅಂತಿಮಗೊಳಿಸಿದ್ದರಿಂದ ಕ್ಷೇತ್ರದಲ್ಲಿ ಮತ್ತಷ್ಟು ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ಪಕ್ಷದ ನಾಯಕರು ಬಿಜೆಪಿಯಲ್ಲಿ ಟಿಕೆಟ್‌ ವಂಚಿತರಾಗುವ ಶರತ್‌ ಬಚ್ಚೇಗೌಡ ಅವರನ್ನು ಕರೆತರುವುದರಿಂದ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ನಾಯಕರ ಎದುರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಅದೇ ರೀತಿ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಮಾಜಿ ಸಚಿವ ಪ್ರಕಾಶ್‌ ಹುಕ್ಕೇರಿಯವರಿಗೆ ಟಿಕೆಟ್‌ ಕೊಡಲು ಈ ಹಿಂದೆ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು ಎನ್ನಲಾಗಿದೆ. ಆದರೆ, ಈಗ ಬಿಜೆಪಿಯಲ್ಲಿ ಟಿಕೆಟ್‌ ಸಿಗದಿದ್ದರೆ ಕಾಂಗ್ರೆಸ್‌ ಸೇರುವ ಬಗ್ಗೆ ಒಲವು ವ್ಯಕ್ತಪಡಿಸಿರುವ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜು ಕಾಗೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಲೆಕ್ಕಾಚಾರ ಆರಂಭವಾಗಿರುವುದರಿಂದ ಪ್ರಕಾಶ್‌ ಹುಕ್ಕೇರಿ ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ವತಃ ಸಿದ್ದರಾಮಯ್ಯ ಅವರೇ ಪ್ರಕಾಶ್‌ ಹುಕ್ಕೇರಿಯವರಿಗೆ ಟಿಕೆಟ್‌ ಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೆ, ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸೋತ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೆಳೆದರೆ ಸೋತ ಅನುಕಂಪದಿಂದ ಗೆಲ್ಲಿಸಿಕೊಂಡು ಬರಲು ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಕೆಲವು ನಾಯಕರು ಹೊಂದಿದ್ದಾರೆ ಎನ್ನಲಾಗುತ್ತಿದೆ.

Advertisement

ಈಗಾಗಲೇ ಚುನಾವಣೆ ಘೋಷಣೆಯಾಗಿರುವ 15 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ಹಿರೇಕೆರೂರಿನಲ್ಲಿ ಯು.ಬಿ. ಬಣಕಾರ್‌, ಕೆ.ಆರ್‌.ಪುರಂನಲ್ಲಿ ನಂದೀಶ್‌ ರೆಡ್ಡಿ, ಅವರನ್ನೂ ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದ್ದು, ಪಕ್ಷದ ನಾಯಕರ ಈ ನಡೆಯ ಬಗ್ಗೆ ಸ್ಥಳಿಯ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಭೆ: 15 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಗುತ್ತಿದೆ. ಹದಿನೈದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪಕ್ಷ ನೇಮಕ ಮಾಡಿದ್ದ ವೀಕ್ಷಕರಿಂದ ಮತ್ತೂಂದು ಬಾರಿ ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಪಡೆಯಲು ಸೂಚನೆ ನೀಡಲಾಗಿತ್ತು. ಅದರ ಹಿನ್ನೆಲೆಯಲ್ಲಿ ವೀಕ್ಷಕರ ಅಭಿಪ್ರಾಯ ಪಡೆಯಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಬಿಜೆಪಿಯಿಂದ ವಲಸೆ ಬರುವವರ ಕುರಿತು ಸ್ಥಳೀಯವಾಗಿ ಕಾರ್ಯಕರ್ತರು ಹಾಗೂ ಪಕ್ಷದ ಜಿಲ್ಲಾ ಘಟಕದ ಮುಖಂಡರ ಅಭಿಪ್ರಾಯದ ಕುರಿತಂತೆಯೇ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಈಗಾಗಲೇ ಸ್ಥಳೀಯವಾಗಿ ಪಕ್ಷದ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್‌ ನೀಡಬೇಕೆಂಬ ಬೇಡಿಕೆ ಇರುವುದರಿಂದ ವಲಸಿಗರನ್ನು ಸೇರಿಸಿಕೊಂಡರೆ ಚುನಾವಣೆ ಸಂದರ್ಭದಲ್ಲಿ ಆಗುವ ಪರಿಣಾಮಗಳ ಬಗ್ಗೆಯೂ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ. ಕಾರ್ಯಕರ್ತರ ಮಾತಿಗೆ ಮಾನ್ಯತೆ ನೀಡಬೇಕಾ ಅಥವಾ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಆಮದು ಮಾಡಿಕೊಳ್ಳಬೇಕೆ ಎನ್ನುವ ಕುರಿತಂತೆಯೇ ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆ ಇದೆ.

ಬಿಜೆಪಿ ಅತೃಪ್ತರು ಕಾಂಗ್ರೆಸ್‌ ಸೇರ್ಪಡೆಗೆ ಸಿದ್ಧತೆ: ಸತೀಶ
ಬೆಳಗಾವಿ: ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪುವ ಭೀತಿಯಿಂದ ಬಿಜೆಪಿಯ ಕೆಲ ಮುಖಂಡರು ಈಗಾಗಲೇ ಕಾಂಗ್ರೆಸ್‌ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದು, ಕಮಲ ಬಿಟ್ಟು ಕಾಂಗ್ರೆಸ್‌ ಸೇರ್ಪಡೆ ಆಗಲಿದ್ದಾರೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೊಸ ಬಾಂಬ್‌ ಸಿಡಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತ ನಾಡಿ, ಟಿಕೆಟ್‌ ಸಿಗುವುದಿಲ್ಲ ಎಂಬ ಭೀತಿಯಿಂದ ಬಿಜೆಪಿಯವರು ಕಾಂಗ್ರೆಸ್‌ ಬಾಗಿಲು ತಟ್ಟಿದ್ದಾರೆ.

ಬಿಜೆಪಿಯ ಅತೃಪ್ತರು ಕಾಂಗ್ರೆಸ್‌ ಹೈಕಮಾಂಡ್‌ ಜತೆಗೆ ಸಂಪರ್ಕದಲ್ಲಿದ್ದಾರೆ. ಕ್ಷೇತ್ರದ ಬೆಳವಣಿಗೆ ಹಾಗೂ ಚುನಾವಣಾ ಕಣ ನೋಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಿದ್ಧತೆ ನಡೆದಿದೆ ಎಂದರು.  ಅಂಬಿರಾವ ಗೋಕಾಕ ಲೂಟಿ ಹೊಡೆಯುತ್ತಿದ್ದಾರೆ. ಹಾಡಿನ ಮೂಲಕ ಜನರಲ್ಲಿ ಅಂಬಿಯ ಕರ್ಮಕಾಂಡ ತೆರೆದಿಡಲಾಗುತ್ತಿದೆ.

ಒಂದೆಡೆ ಜನರು ನೋವು ಅನುಭವಿಸುತ್ತಿದ್ದರೆ, ಇನ್ನೊಂದೆಡೆ ಗೋಕಾಕ ನಗರಸಭೆ ಸದಸ್ಯರು, ಕೆಲ ಮುಖಂಡರು ಸೇರಿ ಲೂಟಿ ಹೊಡೆಯುತ್ತಿದ್ದಾರೆ. ಉಪಚುನಾವಣೆ ಪ್ರಚಾರದ ವೇಳೆ ಅಂಬಿರಾವ್‌ನನ್ನು ಟಾರ್ಗೆಟ್‌ ಮಾಡಲಾಗಿದೆ. ರಮೇಶ ಕೇವಲ ಹೆಸರಿಗಷ್ಟೇ. ಇಲ್ಲಿಯ ವ್ಯವಹಾರಗಳನ್ನೆಲ್ಲ ಅಂಬಿರಾವ್‌ ನೋಡಿಕೊಳ್ಳುತ್ತಾರೆ. ಜಾರಕಿಹೊಳಿ ಸಹೋದರರೆಲ್ಲ ಒಂದೇ ಎಂದು ಹೇಳುತ್ತಾರೆ. ಆದರೆ ನಾವೆಲ್ಲರೂ ಬೇರೆ ಬೇರೆ. ಗೋಕಾಕನ ಸ್ಥಿತಿ ಬೇರೆಯೇ ಇದೆ ಎಂದರು.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಮಂಗಳವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ರಾಜ್ಯ ರಾಜಕಾರಣದ ಸದ್ಯದ ಬೆಳವಣಿಗೆಗಳ ಕುರಿತು ಇಡೀ ದಿನ ನಾಯಕರ ಜತೆಗೆ ಸಭೆ ನಡೆಸಲಿದ್ದಾರೆ.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next