Advertisement

ನ್ಯಾಷನಲ್ ಹೆರಾಲ್ಡ್ ನೆಪದಲ್ಲಿ ಸೋನಿಯಾ- ರಾಹುಲ್ ಗೆ ಇ.ಡಿ. ಕಿರುಕುಳ ವಿರೋಧಿಸಿ ಪ್ರತಿಭಟನೆ

03:56 PM Jun 11, 2022 | Team Udayavani |

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸರಕಾರ ಅನಗತ್ಯ ಕಿರುಕುಳ ನೀಡುತ್ತಿದ್ದು, ಜೂನ್ 13 ರಂದು ದೇಶದ ಎಲ್ಲಾ ಭಾಗಗಳಲ್ಲಿರುವ ಇ.ಡಿ ಕಚೇರಿ ಮುಂದೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ. ಆದರ ಅಂಗವಾಗಿ ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್ ಬಳಿಯಿರುವ ಇ.ಡಿ ಕಚೇರಿ ಮುಂದೆ ಸೋಮವಾರ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸತ್ ಸದಸ್ಯರು ಹಾಗೂ ಎಐಸಿಸಿ ಪದಾಧಿಕಾರಿಗಳು ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಿಂದ ಇ.ಡಿ.ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು ರಾಹುಲ್ ಗಾಂಧಿಯವರನ್ನು ಎಷ್ಟು ಹೊತ್ತು ವಿಚಾರಣೆ ನಡೆಸಲಾಗುವುದೋ ಅಷ್ಟೊತ್ತು ಪ್ರತಿಭಟನೆ ಮಾಡಲಾಗುವುದು. ಈ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಪ್ರತಿಭಟನೆ ವಿಚಾರವಾಗಿ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ನಡೆಸಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ರಾಜ್ಯದ ಇತರೆ ಭಾಗಗಳಿಂದ ಪ್ರತಿಭಟನೆಗೆ ಆಗಮಿಸುವವರು ಹಿಂದಿನ ದಿನವೇ ಬೆಂಗಳೂರಿಗೆ ಬರಬೇಕೆಂದು ಈ ಮೂಲಕ ಕರೆ ನೀಡುತ್ತಿದ್ದೇವೆ ಎಂದರು.

ನಾವು ಇ.ಡಿ. ಕಚೇರಿ ಒಳಗೆ ಪ್ರವೇಶ ಮಾಡುವುದಿಲ್ಲ. ರಾಷ್ಟ್ರದ ಜನತೆಯ ನೋವನ್ನು ವ್ಯಕ್ತಪಡಿಸಲು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿಯಾಗಲು ಎರಡು ಬಾರಿ ಅವಕಾಶ ಸಿಕ್ಕರೂ ದೇಶದ ಹಿತಕ್ಕಾಗಿ ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನ ಮಂತ್ರಿ ಸ್ಥಾನ ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ರಾಜಕೀಯ ತ್ಯಾಗ ಹಾಗೂ ಬೆಳವಣಿಗೆಯನ್ನು ಸಹಿಸದ ಬಿಜೆಪಿ ಸರ್ಕಾರ ಅವರ ವಿರುದ್ಧ ವಿನಾಕಾರಣ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಟ್ಟು ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಸಂಪರ್ಕ ಕೊರತೆಯಿಂದ ಹಿಂದುಳಿದಿದೆ ಈ ಗ್ರಾಮ

ಬಿಜೆಪಿ ಸರ್ಕಾರವೇ ಈ ಹಿಂದೆ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಬಿಟ್ಟಿದ್ದರೂ ಗಾಂಧಿ ಕುಟುಂಬಕ್ಕೆ ತೊಂದರೆ ಕೊಡುವ ಉದ್ದೇಶದಿಂದ ಮತ್ತೆ ಆ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವಹಿಸಿ ತನಿಖೆ ಆರಂಭಿಸಲಾಗಿದೆ ಎಂದು ಆರೋಪಿಸಿದರು.

Advertisement

ನಮ್ಮ ನಾಯಕರುಗಳು ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ. ಅವರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಗಾಂಧಿ ಕುಟುಂಬದ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿಯವರು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯ ಮತಗಳು ಬಿಜೆಪಿಗೆ ಹೋಗಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ ಬಿಜೆಪಿಗೆ ಮತ ಹಾಕಿರುವುದನ್ನು ಯಾರೂ ನೋಡಿಲ್ಲ. ಮೊದಲ ಪ್ರಾಶಸ್ತ್ಯದ ಅಷ್ಟೂ ಮತಗಳು ನಮಗೆ ಬಂದಿವೆ. ಎಲ್ಲ ಪಕ್ಷಗಳಿಗೂ ಅವರದೇ ಆದ ಒತ್ತಡವಿತ್ತು. 69 ಮತಗಳನ್ನು ನಾನೇ ಕಣ್ಣಾರೆ ಕಂಡಿದ್ದೇನೆ. ನಮ್ಮ ಪಕ್ಷದ ಯಾವುದೇ ಶಾಸಕರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿಲ್ಲ. ಬೇರೆ ಪಕ್ಷಕ್ಕೆ ಹೆಚ್ಚುವರಿ ಮತಗಳು ಬಂದಿರುವ ವಿಚಾರ ನನಗೆ ಗೊತ್ತಿಲ್ಲ’ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರೇ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನೋವಿನಲ್ಲಿ ಇರುವವರು ನೋವಿನಿಂದ ಮಾತನಾಡುತ್ತಾರೆ. ಸಂತೋಷದಲ್ಲಿ ಇರುವವರು ಸಂತೋಷದಲ್ಲಿ ಮಾತನಾಡುತ್ತಾರೆ. ಅವರು ತಮ್ಮದೇ ಆದ ಪದಗಳನ್ನು ಬಳಸಿ ಮಾತನಾಡುತ್ತಾರೆ. ಎಲ್ಲವನ್ನೂ ಸಂತೋಷದಿಂದ ಸ್ವೀಕರಿಸುತ್ತೇವೆ ‘ ಎಂದರು.

ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡು ಯಾವ ಸಂದೇಶ ರವಾನಿಸುತ್ತಿದ್ದೀರಿ ಎಂಬ ಪ್ರಶ್ನೆಗೆ, ‘ ಪಕ್ಷದ ಕಾರ್ಯಕರ್ತರನ್ನು ಕೇಳಿ, ಹೇಳುತ್ತಾರೆ. ಇಲ್ಲಿ ಲಾಭ-ನಷ್ಟ ವಿಚಾರ ಬೇರೆ. ಇಲ್ಲಿ ನಮ್ಮ ಪಕ್ಷ ಸ್ವಾಭಿಮಾನದಿಂದ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಬೇರೆಯವರಿಗೆ ಸ್ವಾಭಿಮಾನ ಇರುವಂತೆ ನಮ್ಮ ಪಕ್ಷಕ್ಕೂ ಸ್ವಾಭಿಮಾನವಿದೆ’ ಎಂದು ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next