ಬೆಂಗಳೂರು: ದೇಶದಲ್ಲಿಂದು ಹಕ್ಕುಗಳಿಗಾಗಿ ಹೋರಾಟ ನಡೆಯುವ ದುಸ್ಥಿತಿ ಎದುರಾಗಿದೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ರೈತರು-ಕಾರ್ಮಿಕರು, ಜನಸಾಮಾನ್ಯರು ಬೀದಿಗಿಳಿದಿದ್ದು ಕಾಂಗ್ರೆಸ್ ಅವರ ಧ್ವನಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ದೇಶದ ಜನತೆ ಹಾಗೂ ರೈತರು ತಮ್ಮ ಭವಿಷ್ಯ ಹಾಗೂ ಅಸ್ತಿತ್ವ ಉಳಿಸಿ ಕೊಳ್ಳಲು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅನ್ನದಾತ ಕೃಷಿಕನ ರಕ್ಷಣೆಗೆ ನಾವು ನಿಲ್ಲಬೇಕಿರುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ರೈತರ ಹಿತ ಬಲಿಕೊಟ್ಟು, ಶ್ರೀಮಂತರ, ಬಂಡವಾಳ ಶಾಹಿಗಳ ಹಿತ ಕಾಯಲಿದೆ. ಹೀಗಾಗಿ ಈ ಕಾಯ್ದೆ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಕಬ್ಬಿಣ, ಸಿಮೆಂಟ್ ಸೇರಿ ದಿನಬಳಕೆ ವಸ್ತುಗಳ ದರ ಏರುತ್ತಲೇ ಇದ್ದು ಸಾಮಾನ್ಯ ಜನರ ಬದುಕಿಗೆ ಹೊರೆಯಾಗಿದೆ.
ಇದನ್ನೂ ಓದಿ:ಮಸಾಜ್ ಪಾರ್ಲರ್ಗಳಲ್ಲಿ ಅನೈತಿಕ ಚಟುವಟಿಕೆಗಳು
ಮುಂದಿನ ದಿನಗಳಲ್ಲಿ ಇದರ ವಿರುದ್ಧದ ಹೋರಾಟ ಚುರುಕು ಮಾಡಬೇಕಾಗಿದೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್ .ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹಮದ್ ಇತರರು ಇದ್ದರು.