Advertisement

Council By Election: ಪರಿಷತ್‌ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ

02:59 AM Oct 20, 2024 | Team Udayavani |

ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾ ಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ತಿಳಿಸಿದ್ದಾರೆ.

Advertisement

ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವೀಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣ ಪ್ರಕ್ರಿಯೆಗೆ ಬಳಸಲಾಗುತ್ತಿದೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದರು.

ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ  ಅನುಸಾರ ಮತ ಚಲಾಯಿಸಬೇಕು. ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1′ ಎಂದು ನಮೂದಿಸುವ ಮೂಲಕ ಮತ ಚಲಾಯಿಸಬೇಕು. ಇಂಗ್ಲಿಷ್‌, ಕನ್ನಡ ಅಥವಾ ರೋಮನ್‌ ಅಂಕಿಯಲ್ಲಿ “1′ ನಮೂದಿಸಬೇಕು. ಪ್ರಾಶಸ್ತ್ಯವನ್ನು ಅಂಕಿಗಳ ಮೂಲಕ ಮಾತ್ರ ಎಂದರೆ 1, 2, 3 ಇತ್ಯಾದಿ ಕ್ರಮದಲ್ಲಿ ಮಾತ್ರ ಗುರುತು ಹಾಕಬೇಕು.

ಇದರ ಬದಲಾಗಿ ಒಂದು ಎರಡು, ಮೂರು ಮುಂತಾದ ಅಕ್ಷರಗಳ ರೂಪದಲ್ಲಿ ಬರೆಯಬಾರದು ಎಂದು ಸೂಚನೆ ನೀಡಲಾಗಿದೆ. ಮತ ಚಲಾಯಿಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧ್ಯಕ್ಷಾಧಿಕಾರಿಯವರು ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಲು ಅವಕಾಶವಿರುತ್ತದೆ. ಬೇರೆ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಹ ಮತಪತ್ರವನ್ನು ಅಸಿಂಧು ಪರಿಗಣಿಸಲಾಗುವುದು ಎಂದರು.

ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲ ಮತದಾರರಿಗೆ ಮಾಹಿತಿ ನೀಡಲಾಗಿದೆ. ಮೊಬೈಲ್‌ ಫೋನ್‌ ತೆಗೆದುಕೊಂಡು ಹೋಗಲು ಅವಕಾಶವಿಲ್ಲ ಎಂದರು.
ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ. ಮತ ಎಣಿಕೆ ಮಂಗಳೂರು ಸಂತ ಅಲೋಶಿಯಸ್‌ ಪದವಿಪೂರ್ವ ಕಾಲೇಜಿನಲ್ಲಿ ಅ.24ರಂದು ನಡೆಯಲಿದೆ.

Advertisement

ಎಲ್ಲ ಮತಗಟ್ಟೆಗಳಿಗೆ ಭದ್ರತೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್‌ ಅಧೀಕ್ಷಕರ ವ್ಯಾಪ್ತಿ ಮತ್ತು ಪೊಲೀಸ್‌ ಆಯುಕ್ತರ ವ್ಯಾಪ್ತಿಯಲ್ಲಿ ಸೇರಿಕೊಂಡು ಒಟ್ಟು 540 ಪೊಲೀಸ್‌ ಅ ಧಿಕಾರಿ/ ಸಿಬಂದಿ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್‌ ಅಧಿ ಕಾರಿ/ಸಿಬಂದಿ ಕೂಡ ನಿಯೋಜಿಸಲಾಗಿರುತ್ತದೆ ಎಂದರು.
ಮತಗಟ್ಟೆ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು, ಜನ ಗುಂಪು ಸೇರದಂತೆ ಸೂಚಿಸಲಾಗಿದೆ. ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿ ಕಲಂ 163ರಂತೆ ನಿಷೇಧಾಜ್ಞೆಯನ್ನುಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next