Advertisement

ನಿವೃತ್ತ ಜಡ್ಜ್ ನೇತೃತ್ವದಲ್ಲಿ ಸಮಿತಿ ರಚಿಸಿ

10:50 PM Nov 22, 2019 | Team Udayavani |

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಅಸಹಜವಾಗಿ ಸಾವನ್ನಪ್ಪುವ ಕೈದಿಗಳ ಬಗ್ಗೆ ಕುಟುಂಬಸ್ಥರು “ಸಂತ್ರಸ್ತ ಪರಿಹಾರ ಯೋಜನೆಯಡಿ’ ಸಲ್ಲಿಸುವ ಮನವಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ತಲಾ ಒಬ್ಬರು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಬಹುದೆಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಸಲಹೆ ನೀಡಿದೆ.

Advertisement

ಬಂದೀಖಾನೆಗಳಲ್ಲಿ ಸಂಭವಿಸುವ “ಅಸಹಜ ಸಾವು’ ಪ್ರಕರಣಗಳಲ್ಲಿ ಮೃತರ ಸಂಬಂಧಿತರಿಗೆ ಪರಿಹಾರ ನೀಡುವ ಯೋಜನೆ ಕುರಿತು 2017ರಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸಲಹೆ ನೀಡಿದೆ.

ಅಲ್ಲದೇ, ಸಂತ್ರಸ್ತ ಪರಿಹಾರ ಯೋಜನೆಯಡಿ ಪರಿಹಾರ ನಿಗದಿ ಮತ್ತು ವಿತರಣೆಗೆ 1994ರಲ್ಲಿ ನಿಗದಿಪಡಿಸಲಾದ ಮಾಸಿಕ 15 ಸಾವಿರ ರೂ. ಕಾಲ್ಪನಿಕ ಆದಾಯವನ್ನು ಮಾನದಂಡವನ್ನಾಗಿ ಅನುಸರಿಸಲಾಗು ತ್ತಿದೆ. ಅದರ ಬದಲಿಗೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸೂಚಿಸಿರುವ ಸೂತ್ರವನ್ನೂ ಪಾಲಿಸಬಹುದು. ಅದರಲ್ಲಿ ಮಾಸಿಕ ಆದಾಯ ಕನಿಷ್ಠ ವೇತನದ ಮೇಲೆ ನಿಗದಿಪಡಿಸಲಾಗಿದೆ. ಅದು ಕನಿಷ್ಠ ಮಾಸಿಕ 10 ಸಾವಿರ ರೂ. ಆಗಲಿದೆ. ಈ ಸೂತ್ರವನ್ನು ಅನೇಕ ವಿಮಾ ಕಂಪೆನಿಗಳು ಅಳವಡಿಸಿಕೊಂಡಿವೆ ಎಂದು ನ್ಯಾಯಪೀಠ ಹೇಳಿತು.

ಸಾರ್ವಜನಿಕ ಪ್ರಕಟಣೆ ಹೊರಡಿಸಿ: ಕಾರಾಗೃಹಗಳಲ್ಲಿ ಅಸಹಜವಾಗಿ ಸಾವನ್ನಪ್ಪುವ ಕೈದಿಗಳ ಕುಟುಂಬಸ್ಥರಿಗೆ ಪರಿಹಾರ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ವ್ಯಾಪಕವಾಗಿ ಪ್ರಚಾರಗೊಳಿಸಲು ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು. ಅಂತಹ ಸಾರ್ವಜನಿಕ ಪ್ರಕಟಣೆ ಯಾವಾಗ ಹೊರಡಿಸುತ್ತೀರಿ, ಎಷ್ಟು ಪತ್ರಿಕೆಗಳಲ್ಲಿ ಹೊರಡಿಸುತ್ತೀರಿ ಎಂಬ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್‌ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.

ನ್ಯಾಯಾಂಗ ನಿಂದನೆ ಎಚ್ಚರಿಕೆ ನೀಡಿದ ಹೈಕೋರ್ಟ್‌
ಬೆಂಗಳೂರು: ಖಾಸಗಿ ಟಿ.ವಿ. ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಲ್ಲಿ ಬಿತ್ತರಗೊಳ್ಳುವ ಅಂಶಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2008ರಲ್ಲಿ ಹೊರಡಿಸಿರುವ ಆದೇಶದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಲು ಡಿ.13ರೊಳಗೆ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗಡುವು ನೀಡಿದೆ.

Advertisement

ಈ ಕುರಿತಂತೆ ಗೀತಾ ಮಿಶ್ರಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಶುಕ್ರವಾರ ರಾಜ್ಯ ಸರ್ಕಾರಕ್ಕೆ ಈ ಗಡುವು ನೀಡಿ ವಿಚಾರಣೆ ಮುಂದೂಡಿತು.

ಖಾಸಗಿ ಟಿ.ವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಲ್ಲಿ ಬಿತ್ತರಗೊಳ್ಳುವ ಅಂಶಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2008ರಲ್ಲಿ ಹೊರಡಿಸಿರುವ ಆದೇಶದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಬೇಕೆಂದು 2019ರ ಸೆ.18 ರಂದು ಹೈಕೋರ್ಟ್‌ ಆದೇಶ ನೀಡಿತ್ತು.

ಆದರೆ, ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಾಗ, ಸೆ.18ರ ಆದೇಶ ಪಾಲಿಸಿರುವ ಬಗ್ಗೆ ರಾಜ್ಯ ಸರ್ಕಾರ ಅನುಪಾಲನಾ ವರದಿ ಸಲ್ಲಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಡಿ.13ರೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿತು.

ಪ್ರಕರಣವೇನು?: ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ದೃಶ್ಯಗಳು ಸಿನಿಮಾ ದೃಶ್ಯಗಳಿಂದ ಅಸಭ್ಯ ಹಾಗೂ ಕೀಳುಮಟ್ಟದಿಂದ ಕೂಡಿರುತ್ತವೆ. ಅವು ಸೆನ್ಸಾರ್‌ಗೊಳಪಡದೇ ಪ್ರಸಾರವಾಗುತ್ತಿವೆ. ಇದರಿಂದ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಖಾಸಗಿ ಟಿ.ವಿ.ವಾಹಿನಿ ಕಾರ್ಯಕ್ರಮಗಳ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು 2008ರ ಫೆ.19ರಂದು ಕೇಂದ್ರ ಸರ್ಕಾರ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್‌ ಕಾಯ್ದೆ-1995ರ ಅಡಿಯಲ್ಲಿ ದೇಶದ ಎಲ್ಲ ರಾಜ್ಯಗಳಿಗೆ ನಿರ್ದೇಶಿಸಿದೆ. ಆದರೆ, ರಾಜ್ಯದಲ್ಲಿ ಈವರೆಗೂ ಸಮಿತಿಯನ್ನು ರಚನೆ ಮಾಡಿಲ್ಲ ಎಂದು ಅರ್ಜಿದಾರರು ದೂರಿದ್ದರು.

ಮರು ನೇಮಕಾತಿ: ವಿವರಣೆ ನೀಡಲು ನಿರ್ದೇಶನ
ಬೆಂಗಳೂರು: ರಾಜ್ಯದಲ್ಲಿ ಭೂ ಕಬಳಿಕೆ ಪ್ರಕರಣಗಳ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ “ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶರು, ನೌಕರರು ಮತ್ತು ಸಿಬ್ಬಂದಿ ನೇಮಕಾತಿಗೆ “ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011’ರಡಿ ನಿಯಮಗಳನ್ನು ರೂಪಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ.

ಈ ಕುರಿತಂತೆ ಎಂ.ಎನ್‌. ವೇಣುಗೋಪಾಲ್‌ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿ ವಿಚಾರಣೆಯನ್ನು ಡಿ.12ಕ್ಕೆ ಮುಂದೂಡಿತು.

ನಿವೃತ್ತ ಅಧಿಕಾರಿ ಮತ್ತು ನೌಕರರನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಮರು ನೇಮಕ ಮಾಡಿಕೊಳ್ಳುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಈ ಅರ್ಜಿಯ ವಿಚಾರಣೆ ವೇಳೆ ಭೂ ಕಬಳಿಕೆ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ವಿವಿಧ ವೃಂದದ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದವರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು 2017ರ ಮಾ.2ರಂದು ಹೊರಡಿಸಲಾದ ಆದೇಶದ ಬಗ್ಗೆ ಪ್ರಸ್ತಾಪಿಸಿದಾಗ, ನ್ಯಾಯಪೀಠವು, ಈ ದಿಸೆಯಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ-2011 ರಡಿ ನಿಯಮಗಳನ್ನು ರೂಪಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತು.

Advertisement

Udayavani is now on Telegram. Click here to join our channel and stay updated with the latest news.

Next