Advertisement

ಅಪಘಾತ: ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆ

09:07 PM Sep 06, 2022 | Team Udayavani |

ಉಡುಪಿ: ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯ ಸಾವಿಗೆ ಕಾರಣನಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

Advertisement

2018ರ ಸೆ. 4ರಂದು ಸಂಜೆ 4.45ರ ಸುಮಾರಿಗೆ ಉದ್ಯಾವರ ಕೊಪ್ಲದ ನಿವಾಸಿ ದರ್ಶನ್‌ ಎನ್ನುವಾತ ಮಣಿಪಾಲ-ಉಡುಪಿ ರಾ.ಹೆ. ಏಕಮುಖ ಸಂಚಾರ ರಸ್ತೆಯಲ್ಲಿ ಅಜಾಗರೂಕತೆಯಿಂದ ಬೈಕ್‌ ಚಲಾಯಿಸಿಕೊಂಡು ಬಂದು ಶಿವಳ್ಳಿ ಗ್ರಾಮದ ಎಂಜಿಎಂ ಕಾಲೇಜಿನ ಡಾ| ಟಿ.ಎಂ.ಎ. ಪೈ ಸೈನ್ಸ್‌ ಮಂದಿರದ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಿದ್ದೇಶ್ವರಪ್ಪ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಬಿದ್ದು, ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದರು. ಅಂದಿನ ಉಡುಪಿ ಸಂಚಾರ ಠಾಣೆಯ ಪೊಲೀಸ್‌ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ ಪ್ರಕಾಶ್‌ ಅವರು ಆರೋಪಿ ದರ್ಶನ್‌ಗೆ 2 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next