Advertisement

ಸಿಆರ್‌ಝಡ್‌ ಅಧಿಸೂಚನೆ 2019ರಲ್ಲಿ ಹೆಚ್ಚಿನ ಚಟುವಟಿಕೆಗೆ ಅವಕಾಶ: ಡಿಸಿ

08:37 PM Sep 28, 2021 | Team Udayavani |

ಉಡುಪಿ: ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರಲ್ಲಿ ಅಭಿವೃದ್ಧಿ ಚಟುವಟಿಕೆ ಕೈಗೊಳ್ಳಲು ಹೆಚ್ಚಿನ ರಿಯಾಯಿತಿ ದೊರೆಯಲಿದ್ದು, ಈ ಕುರಿತು ತಯಾರಿಸಿದ ಕರಡು ಯೋಜನೆಯ ಕುರಿತಂತೆ ಸಾರ್ವಜನಿಕರು ಸಲ್ಲಿಸುವ ಅಹವಾಲು ಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಹೇಳಿದರು.

Advertisement

ಮಂಗಳವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ 2019ರ ಪ್ರಕಾರ ತಯಾರಿಸಿದ ಕರಡು ಕರಾವಳಿ ವಲಯ ನಿರ್ವಹಣ ಯೋಜನೆಯ ಸಾರ್ವಜನಿಕ ಅಹವಾಲು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಡು ಯೋಜನೆಯಲ್ಲಿ ಉಬ್ಬರ ವಿಳಿತದ ಪ್ರಭಾವಕ್ಕೆ ಒಳಗಾದ ಜಲನಿ ಕಾಯಗಳ ಭರತರೇಖೆಯಿಂದ 100 ಮೀ. ವರೆಗೆ ಇದ್ದ ಸಿಆರ್‌ಝಡ್‌ ಪ್ರದೇಶವನ್ನು 50 ಮೀ.ಗೆ ಕಡಿಮೆಗೊಳಿಸಿದೆ. ಕುದ್ರು ದ್ವೀಪಗಳಿಗೆ 100 ಮೀ.ವರೆಗೆ ಇದ್ದ ಸಿಆರ್‌ಝಡ್‌ ಪ್ರದೇಶವನ್ನು 20 ಮೀ.ಗೆ ಕಡಿಮೆಗೊಳಿಸಿದೆ. ಪ.ಪಂ., ಪುರಸಭೆ, ನಗರಸಭೆ ಅಥವಾ ಸ್ಥಳೀಯ ನಗರಾಭಿವೃದ್ಧಿ ಯೋಜನ ಪ್ರಾಧಿಕಾರಕ್ಕೆ ಸೇರಿಸಿ ಘೋಷಣೆಯಾದ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3 ರಿಂದ 2ಕ್ಕೆ ಬದಲಾಯಿಸಲಾಗಿದೆ. 2011 ರ ಜನಗಣತಿ ಆಧಾರದ ಮೇಲೆ ಚದರ ಕಿ.ಮೀ.ಗೆ 2,161ಕ್ಕಿಂತ ಹೆಚ್ಚಿನ ಜನಸಂಖ್ಯೆಯುಳ್ಳ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ಎ ಎಂದು ವಿಂಗಡಿಸಿ, ಅಭಿ ವೃದ್ಧಿ ನಿಷಿದ್ದ ಪ್ರದೇಶದ ವ್ಯಾಪ್ತಿಯನ್ನು ಸಮುದ್ರದ ಭರತ ರೇಖೆಯಿಂದ 50 ಮೀ.ಗೆ ಸೀಮಿತಗೊಳಿಸಲಾಗಿದೆ ಎಂದರು.

ಸಿಗಡಿ ಕೃಷಿ ತೊಂದರೆ: ಪರಿಶೀಲನೆ
ಸಿಗಡಿ ಕೃಷಿಕ ಸಂಘದ ಕಾರ್ಯದರ್ಶಿ ಶ್ರೀಧರ ಹೆಗಡೆ ಹಾಗೂ ಹಂಗಳೂರು ಗ್ರಾಮದ ಸಿಗಡಿ ಕೃಷಿಕರು, ಸಿಗಡಿ ಬೆಳೆಯುವ ಪ್ರದೇಶವನ್ನು ವೈಮಾನಿಕ ಸಮೀಕ್ಷೆಯಲ್ಲಿ ಹೊಳೆ ಎಂದು ಪರಿಗಣಿಸಿದ್ದು, ಇದರಿಂದ ಸಿಗಡಿ ಕೃಷಿಗೆ ತೊಂದರೆಯಾಗಲಿದೆ. ಈ ಬಗ್ಗೆ ಪರಿಶೀಲಿಸುವಂತೆ ಕೋರಿದರು.

ಇದನ್ನೂ ಓದಿ:ಸಿಧು ಬೆನ್ನಲ್ಲೆ ಸಚಿವೆ ಸ್ಥಾನಕ್ಕೆ ರಜಿಯಾ ರಾಜೀನಾಮೆ | ಏನಾಗ್ತಿದೆ ಪಂಜಾಬ್ ರಾಜಕೀಯ ?

Advertisement

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಸಿಗಡಿ ಕೃಷಿಗೆ ಯೋಜನೆಯಿಂದ ಯಾವುದೇ ತೊಂದರೆಯಿಲ್ಲ. ಹೊಸದಾಗಿ ಸಿಗಡಿ ಕೃಷಿ ಮಾಡುವವರು ಅನುಮತಿ ಪಡೆಯಬೇಕಾಗುತ್ತದೆ. ಈಗಾಗಲೇ ಮಾಡುತ್ತಿರುವವರು ನವೀಕರಣ ಮಾಡಬೇಕು. ಸಿಗಡಿ ಕೃಷಿಗೆ ಅನುಮತಿ ನೀಡಲಾಗುತ್ತದೆ. ಹೊಳೆ ಎಂದು ನಮೂದಿಸಿರುವುದನ್ನು ಸರಿಪಡಿಸಲಾಗು ವುದು ಎಂದರು.

ಮರಳು ದಿಬ್ಬ ತೆರವುಗೊಳಿಸಿ
ಹೇರಿಕುದ್ರು, ಕನ್ನಡಕುದ್ರುಗಳಲ್ಲಿ ಹೊಳೆ ಮಧ್ಯೆ ಕಾಂಡ್ಲಾ ಗಿಡಗಳನ್ನು ನೆಟ್ಟಿರುವ ಕಾರಣ ನೀರು ಹರಿಯಲು ತೊಂದರೆ ಯಾಗಿ ಮರಳು ಶೇಖರಣೆಯಾಗಿದೆ.

ಇದರಿಂದ ಹರಿಯುವ ನೀರು ಗ್ರಾಮಗಳಿಗೆ ಹಿಮ್ಮುಖವಾಗಿ ಬಂದು ಪ್ರವಾಹ ಪರಿಸ್ಥಿತಿ ಬರಲಿದ್ದು ಕೂಡಲೇ ಅಲ್ಲಿರುವ ಮರಳು ದಿಬ್ಬ ತೆರವುಗೊಳಿಸುವಂತೆ ಗ್ರಾಮಸ್ಥರು ಕೋರಿದರು.

ಮೀನುಗಾರರಿಗೆ ತೊಂದರೆಯಾಗದಿರಲಿ
ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್‌ ಮಾತನಾಡಿ, ಸಿಆರ್‌ಝಡ್‌ನಿಂದ ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ನಿಯಮಗಳನ್ನು ರೂಪಿಸಬೇಕು. ನಕ್ಷೆಯಲ್ಲಿ ಗಂಗೊಳ್ಳಿ, ಹಂಗಾರಕಟ್ಟೆ ಮತ್ತು ಹೆಜಮಾಡಿ ಬಂದರುಗಳನ್ನು ಗುರುತಿಸಬೇಕು
ಎಂದರು.

ಅಹವಾಲು ಸಲ್ಲಿಕೆ
ಸಾರ್ವಜನಿಕ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿರುವ ಎಲ್ಲ ಅಹವಾಲುಗಳನ್ನು ರಾಜ್ಯಕ್ಕೆ ಕಳುಹಿಸಲಾಗುವುದು. ಅಲ್ಲಿಂದ ಅದು ಅಗತ್ಯ ಬದಲಾವಣೆಯಾಗಿ ಕೇಂದ್ರಕ್ಕೆ ಸಲ್ಲಿಕೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಸಿ.ಆರ್‌.ಝಡ್‌ ಪ್ರಾದೇಶಿಕ ನಿರ್ದೇಶಕ ಶ್ರೀಪತಿ ಬಿ.ಎಸ್‌. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಅಭಿವೃದ್ಧಿ
ಚಟುವಟಿಕೆಗೆ ಸಹಕಾರಿ
ಕರಡು ನಕಾಶೆಯಲ್ಲಿ ಜಿಲ್ಲೆಯ ಕೋಟೆ, ಮಟ್ಟು, ಪಾಂಗಾಳ, ಬಡಾ, ಬೈಂದೂರು, ಪಡುವರಿ, ಯಡ್ತರೆ, ತಗ್ಗರ್ಸೆ ಗ್ರಾಮಗಳನ್ನು ಕರಾವಳಿ ನಿಯಂತ್ರಣ ವಲಯ 3ರಿಂದ 2ಕ್ಕೆ ಸೇರಿಸಿರುವುದರಿಂದ ಈ ಪ್ರದೇಶದಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಲು ಹೆಚ್ಚಿನ ರಿಯಾಯಿತಿ ದೊರೆಯಲಿದೆ. ಗಂಗೊಳ್ಳಿ ಗ್ರಾಮವನ್ನು ಕರಾವಳಿ ನಿಯಂತ್ರಣ ವಲಯ 3ಎಗೆ ಸೇರಿಸಲಾಗಿದೆ ಎಂದು ಡಿಸಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next