Advertisement

ಮುಖ್ಯಮಂತ್ರಿಗಳೇ, ನಿಮಗೆ ಬೇಕಾದ ತನಿಖೆ ಮಾಡಿಸಿ: ಡಿ.ಕೆ. ಶಿವಕುಮಾರ್ ಸವಾಲು

05:13 PM Jul 16, 2022 | Team Udayavani |

ಬೆಂಗಳೂರು: ‘ಕೋವಿಡ್ ಸಮಯದಲ್ಲಿ ಕಾರ್ಮಿಕರ ಪ್ರಯಾಣಕ್ಕೆ ಪಕ್ಷದ ವತಿಯಿಂದ ಸಾರಿಗೆ ಇಲಾಖೆಗೆ 1 ಕೋಟಿ ರೂ. ನೀಡಲು ಮುಂದಾದ ಬಗ್ಗೆ ಲೆಕ್ಕ ಕೇಳುವ ಮುಖ್ಯಮಂತ್ರಿಗಳೇ, ಆ ಹಣದ ವಿಚಾರದಲ್ಲಿ ನಾವು ಅಕ್ರಮ ಮಾಡಿದ್ದರೆ ನಿಮಗೆ ಬೇಕಾದ ತನಿಖೆ ಮಾಡಿಸಿ, ನಾವು ಸಿದ್ಧರಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.

Advertisement

ಸದಾಶಿವನಗರ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಕೋವಿಡ್ ಸಮಯದಲ್ಲಿ 1 ಕೋಟಿ ಹಣದ ವಿಚಾರವಾಗಿ ನಾನು ಲೆಕ್ಕ ಕೊಡಲಿ ಎಂದು ಮುಖ್ಯಮಂತ್ರಿಗಳು ಕೇಳಿದರಲ್ಲಾ, ಮೊದಲು ಅವರು ಸರ್ಕಾರದ ವತಿಯಿಂದ ಮಾಡಿದ ಕೆಲಸದ ಲೆಕ್ಕ ಕೊಡಲಿ. ನಾವು ಕೊವಿಡ್ ಸಮಯದಲ್ಲಿ ಮಾಡಿದ ಕೆಲಸ, ನಮ್ಮ ಕಾರ್ಯಕರ್ತರು ಹಾಗೂ ಶಾಸಕರು ಕೊಟ್ಟಿರುವ ಹಣ ಹಾಗೂ ವೆಚ್ಚದ ವಿಚಾರದಲ್ಲಿ ಸರ್ಕಾರ ತನಗೆ ಬೇಕಾದ ಅಧಿಕಾರಿಗಳಿಂದ ತನಿಖೆ ನಡೆಸಲಿ. ನಾವು ರೈತರಿಂದ ತರಕಾರಿ ಖರೀದಿ ಮಾಡಿದ್ದರಿಂದ ಹಿಡಿದು, ಆಹಾರ ಪೊಟ್ಟಣ, ಊಟ, ಆಂಬುಲೆನ್ಸ್, ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ ಸತ್ತ ಕುಟುಂಬಕ್ಕೆ ತಲಾ 1ಲಕ್ಷ ಹಣ ನೀಡಿರುವುದವರೆಗೆ ಎಲ್ಲ ವಿಚಾರಗಳ ಬಗ್ಗೆ ನಿಮಗೆ ಬೇಕಾದ ತನಿಖೆ ಮಾಡಿಸಿ ಎಂದರು.

ಕೇಂದ್ರ ಸರ್ಕಾರ ಕೊಟ್ಟ 50 ಸಾವಿರ ಹಾಗೂ ನೀವು ಘೋಷಿಸಿದ 1 ಲಕ್ಷ ಹಣವನ್ನು ಫಲಾನುಭವಿಗಳಿಗೆ ತಲುಪಿಸಲು ಇಂದಿನವರೆಗೂ ಸಾಧ್ಯವಾಗಿಲ್ಲ. ಕೋವಿಡ್ ನಲ್ಲಿ ನಾವು ಏನೆಲ್ಲಾ ಕೆಲಸ ಮಾಡಿದ್ದೇವೆ ಎಂದು ಪತ್ರಿಕಾಗೋಷ್ಟಿ ಮೂಲಕ ಮಾಹಿತಿ ತಿಳಿಸುತ್ತೇನೆ. ನಾನು ಹಣ ದುರುಪಯೋಗ ಮಾಡಿದ್ದರೆ ನನ್ನ ವಿರುದ್ಧ ತನಿಖೆಗೆ ಆದೇಶಿಸಿ ಎಂದರು.

ಇತ್ತೀಚೆಗೆ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್ ನೀಡಲು ನಿಮ್ಮ ಕೈಲಿ ಸಾಧ್ಯವಾಗದಿದ್ದರೆ ಇಡೀ ರಾಜ್ಯದಲ್ಲಿ ಸಿ ಎಸ್ ಆರ್ ಮೂಲಕ ಹಣ ಸಂಗ್ರಹಿಸಲು ಸಿದ್ಧವಾಗಿದ್ದೆ. ಸಂಜೆ ವೇಳೆಗೆ ಸರಕರವೇ ಹಣ ನೀಡುವುದಾಗಿ ಘೋಷಿತು. ಬಡ ಮಕ್ಕಳಿಗೆ ಶೂ, ಸಾಕ್ಸ್ ಕೊಡುವ ಯೋಜನೆಯನ್ನು ಈ ಸರ್ಕಾರ ಕೈ ಬಿಡಲು ಮುಂದಾಗುತ್ತದೆ ಎನ್ನುವುದಾದರೆ ಈ ಸರ್ಕಾರ ಯಾಕಿರಬೇಕು ಎಂದು ಪ್ರಶ್ನಿಸಿದರು.

ನಿನ್ನೆ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಇದುವರೆಗೂ ಅವರಿಗೆ ನ್ಯಾಯ, ರಕ್ಷಣೆ ಸಿಕ್ಕಿಲ್ಲ. ಮೂರು ಮಂತ್ರಿಗಳು ಅಲ್ಲಿ ಕಾಮಗಾರಿ ಆಗಿದೆ ಎಂದು ಒಪ್ಪಿಕೊಂಡು ಹಣ ನೀಡುವುದಾಗಿ ತಿಳಿಸಿದರು, ಈವರೆಗೂ ಹಣ ನೀಡಿಲ್ಲ. ಅವರು ಮಾಡಿರುವ ಕೆಲಸಕ್ಕೆ ಹಣ ನೀಡಿ ಸ್ವಾಮಿ. ನಿಮ್ಮ ಮಂತ್ರಿ ಹೇಳಿದ್ದಕ್ಕೆ ಆತ ಕೆಲಸ ಮಾಡಿದ ಅಲ್ಲವೇ? ನಿಮ್ಮ ಮಂತ್ರಿ 40% ಕಮಿಷನ್ ಕೇಳಿದಕ್ಕೆ ಅಲ್ಲವೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದು. ಈ ರೀತಿ ಎಷ್ಟೋ ಜನ ನೊಂದು ಬೆಂದಿದ್ದಾರೆ. ನಿಮ್ಮ 40% ಕಮಿಷನ್ ವಿರುದ್ಧ ನಾವು ಮಾತ್ರವಲ್ಲ, ಮಠಾಧೀಶರೂ ಹೇಳಿದ್ದಾರೆ. ಬೊಮ್ಮಾಯಿ ಅವರೇ ಅವರ ಮೇಲೆ ಯಾಕೆ ಪ್ರಕರಣ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.

Advertisement

ನಮ್ಮ ಕಾಲದಲ್ಲಿ ಅಕ್ರಮ ನಡೆದಿದ್ದರೆ ಅದನ್ನು ಬಹಿರಂಗಪಡಿಸಿ. ಯಾರ ಹೆಸರಾದರೂ ಬರಲಿ. ನನ್ನ ಹೆಸರು ಬಂದರೂ ನೊಟೀಸ್ ನೀಡಿ ಬಂಧಿಸಿ ಎಂದರು.

”ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡ ಇದ್ದು ಅಮೃತ್ ಪೌಲ್ ಮೇಲೆ ಒತ್ತಡ ಹಾಕಲಾಗುತ್ತಿದೆಯೇ” ಎಂಬ ಪ್ರಶ್ನೆಗೆ, ”ನಮ್ಮ ಜಿಲ್ಲೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಯ ವಿಚಾರಣೆಯನ್ನು ತಡೆದು, ನಂತರ 20-30 ದಿನ ನಂತರ ಅವನನ್ನು ಬಂಧಿಸಿದ್ದಾರೆ. ಇದು ನಮಗೆ ಬಂದಿರುವ ಮಾಹಿತಿ. ನಮಗೆ ಯಾವ ಯಾವ ಇಲಾಖೆಯಲ್ಲಿ ಏನೇನಾಗಿದೆ ಎಂದು ಗೊತ್ತಿದೆ. ಇತರೆ ಇಲಾಖೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಆ ಪ್ರಕರಣ ವಿಚಾರವಾಗಿ ತನಿಖೆ ಮಾಡಿಲ್ಲ ಯಾಕೆ? ಸರ್ಕಾರ, ರಾಜಕಾರಣಿ, ಮಂತ್ರಿಗಳು, ಹಿರಿಯ ಅಧಿಕಾರಿಗಳ ಕುಮ್ಮಕ್ಕು ಇಲ್ಲದೆ ಇಂತಹ ಯಾವುದೇ ಪ್ರಕರಣ ನಡೆಯಲು ಸಾಧ್ಯವಿಲ್ಲ ” ಎಂದರು.

ನನಗೆ ಕೆಲವು ಇತಿ ಮಿತಿಗಳಿವೆ

ಸಿದ್ದರಾಮಯ್ಯ ಅವರ ಕಾರ್ಯಕ್ರಮ ವ್ಯಕ್ತಿ ಪೂಜೆ ಅಲ್ಲವೇ ಎಂಬ ಸಚಿವ ಸುಧಾಕರ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ ಈ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪಕ್ಷದ ಅನುಕೂಲಕ್ಕೆ ಬೇಕಾಗಿರುವ ಕಾರ್ಯಕ್ರಮಗಳನ್ನು ನಾವು ಚರ್ಚೆ ಮಾಡಿದರೆ ಬಿಜೆಪಿ ಅವರಿಗೆ ಹೊಟ್ಟೆ ಕಿಚ್ಚು ಯಾಕೆ? ಅವರು ಏನಾದರೂ ಹೇಳಲಿ, ಅವರು ನಮ್ಮ ಪಕ್ಷದಲ್ಲಿ ಬಿರುಕು ಮೂಡಿಸಲು ಸಾಧ್ಯವಿಲ್ಲ. ಮೊದಲು ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ’ ಎಂದರು.

ಸಿದ್ದರಾಮಯ್ಯನವರ ಹುಟ್ಟುಹಬ್ಬ ಆಚರಣೆ ವಿಚಾರವಾಗಿ ಗೊಂದಲದ ಹೇಳಿಕೆ ನೀಡಲಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ, ‘ ಈ ಕುರಿತು ಯಾರನ್ನು ಪ್ರಶ್ನೆ ಮಾಡಬೇಕೋ ಅವರನ್ನು ಕೇಳಿ. ಸೋನಿಯಾ ಗಾಂಧಿ ಅವರು ನನ್ನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದು, ನನಗೆ ಕೆಲವು ಇತಿ ಮಿತಿಗಳಿವೆ. ಎಲ್ಲರೂ ಅವರವರ ಇತಿ ಮಿತಿಯಲ್ಲಿ ಕೆಲಸ ಮಾಡಲಿದ್ದಾರೆ’ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next