Advertisement

ಕಾಂಗ್ರೆಸ್‌ ಆಕಾಂಕ್ಷಿಗಳ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಸಭೆ

12:35 AM Jan 23, 2019 | Team Udayavani |

ಬೆಂಗಳೂರು: ಆಪರೇಷನ್‌ ಕಮಲದ ಆತಂಕದಿಂದ ನಿಟ್ಟುಸಿರು ಬಿಟ್ಟಿರುವ ಕಾಂಗ್ರೆಸ್‌ ಪಕ್ಷ ಲೋಕಸಭೆ ಚುನಾವಣೆಯ ಸಿದ್ಧತೆ ಆರಂಭಿಸಿದ್ದು, ಜ.24 ರಿಂದ ಲೋಕಸಭಾ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ತೀರ್ಮಾನಿಸಿದ್ದಾರೆ.

Advertisement

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ,ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಿಂದ ಆಕಾಂಕ್ಷಿಗಳ ಬಗ್ಗೆ ಜಿಲ್ಲಾ ಹಾಗೂ ಬ್ಲಾಕ್‌ ಅಧ್ಯಕ್ಷರು, ಉಸ್ತುವಾರಿ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಾಜಿ ಸಚಿವರು, ಶಾಸಕರು, ಸಂಸದರು ಹಾಗೂ ಹಾಲಿ ಸಚಿವರು ಮತ್ತು ಶಾಸಕರುಗಳ ಅಭಿಪ್ರಾಯ ಪಡೆಯಲು ರಾಜ್ಯ ನಾಯಕರು ನಿರ್ಧರಿಸಿದ್ದಾರೆ.

ಜ.24 ರಂದು ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಪಡೆಯಲು ನಿರ್ಧರಿಸಿದ್ದಾರೆ. 25 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ತೀರ್ಮಾನಿಸಿದ್ದಾರೆ. ಈ ಮೊದಲು ಕಾಂಗ್ರೆಸ್‌ ಸಂಸದರಿದ್ದ ಕ್ಷೇತ್ರಗಳ ಅಭಿಪ್ರಾಯ ಪಡೆದು ನಂತರ ಹಾಲಿ ಸಂಸದರಿರುವ ಕ್ಷೇತ್ರಗಳ ಬಗ್ಗೆ ಅಭಿಪ್ರಾಯ ಪಡೆಯಲು ರಾಜ್ಯ ನಾಯಕರು ನಿರ್ಧರಿಸಿದ್ದರು.

ಆದರೆ, ಹಾಲಿ ಸಂಸದರ ಕ್ಷೇತ್ರಗಳ ಬಗ್ಗೆಯೂ ಅಭಿಪ್ರಾಯ ಸಂಗ್ರಹಿಸಲು ನಿರ್ಧರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಲವು ಹಾಲಿ ಸಂಸದರ ಕ್ಷೇತ್ರ ಗಳ ಬದಲಾವಣೆ ಹಾಗೂ ಕೆಲವರ ಕಾರ್ಯ ವೈಖರಿಯ ಬಗ್ಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next